2021ರ ಐಪಿಎಲ್ ಟೂರ್ನಿ ಕೊರೊನಾವೈರಸ್ ಕಾರಣದಿಂದ ಅರ್ಧಕ್ಕೆ ನಿಂತ ಬಳಿಕ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಹಾಗೂ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಕುರಿತು ಚರ್ಚೆಗಳು ನಡೆಯುತ್ತಿವೆ.
ಟಿ ಟ್ವೆಂಟಿ ವಿಶ್ವಕಪ್ನಲ್ಲಿ ಭಾರತ ತಂಡದ ಪರ ಆಡಲು ಯಾವ ಯಾವ ಆಟಗಾರರು ಸ್ಥಾನ ಗಿಟ್ಟಿಸಿಕೊಳ್ಳುತ್ತಾರೆ ಎಂಬ ಈ ಚರ್ಚೆಗಳು ಜೋರಾಗಿ ನಡೆಯುತ್ತಿದ್ದು ಶಿಖರ್ ಧವನ್ ಮತ್ತೆ ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಐಪಿಎಲ್ ಟೂರ್ನಿಗೂ ಮುನ್ನ ಇಂಗ್ಲೆಂಡ್ ವಿರುದ್ಧ ನಡೆದ ಟಿ ಟ್ವೆಂಟಿ ಸರಣಿಯಲ್ಲಿ ಮೊದಲ ಪಂದ್ಯದ ನಂತರ ಶಿಖರ್ ಧವನ್ ಅವರನ್ನು ತಂಡದಿಂದ ಕೈಬಿಡಲಾಯಿತು, ಹೀಗಾಗಿ ಮತ್ತೆ ಧವನ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಳ್ಳುತ್ತಾರಾ ಎಂಬ ಚರ್ಚೆಗಳು ನಡೆಯುತ್ತಿವೆ
ಧವನ್ ಮತ್ತೆ ಟೀಮ್ ಇಂಡಿಯಾ ಸೇರುತ್ತಾರಾ ಎಂಬ ಈ ಚರ್ಚೆಗೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ಸೇರಿಕೊಂಡಿದ್ದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. 'ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಓಪನಿಂಗ್ ಬ್ಯಾಟ್ಸ್ಮನ್ಗಳಾಗಿದ್ದಾರೆ ಹಾಗೂ ಇತ್ತೀಚೆಗೆ ವಿರಾಟ್ ಕೊಹ್ಲಿ ಕೂಡ ಓಪನಿಂಗ್ ಆಟಗಾರನಾಗಿ ಕಣಕ್ಕಿಳಿಯಲಾರಂಭಿಸಿದ್ದಾರೆ, ಪೃಥ್ವಿ ಶಾ ಕೂಡ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಸಾಧ್ಯತೆಯಿದ್ದು ಮತ್ತೊಬ್ಬ ಓಪನರ್ ತಂಡಕ್ಕೆ ಸಿಗಲಿದ್ದಾರೆ. ಇಶಾನ್ ಕಿಶಾನ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ಟಾಪ್ ಆರ್ಡರ್ ಬ್ಯಾಟ್ಸ್ಮನ್ಗಳಾಗಿದ್ದು ಶಿಖರ್ ಧವನ್ ತಂಡದಲ್ಲಿ ಸ್ಥಾನ ಪಡೆಯುವುದು ತೀರಾ ಕಷ್ಟವಾಗಿದೆ' ಎಂದು ಆಕಾಶ್ ಚೋಪ್ರಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ರೋಹಿತ್ ಶರ್ಮಾ, ಕೆ ಎಲ್ ರಾಹುಲ್, ಪೃಥ್ವಿ ಶಾ ಹಾಗೂ ಇಶಾನ್ ಕಿಶನ್ ಈ ನಾಲ್ಕು ಓಪನಿಂಗ್ ಆಟಗಾರರು ಇರುವಾಗ ಶಿಖರ್ ಧವನ್ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಕಷ್ಟ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ. ಆದರೆ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಶಿಖರ್ ಧವನ್ 8 ಪಂದ್ಯಗಳನ್ನಾಡಿ 380 ರನ್ ಬಾರಿಸುವುದರ ಮೂಲಕ ಟೂರ್ನಿಯಲ್ಲಿ ಅತಿಹೆಚ್ಚು ರನ್ ಬಾರಿಸಿದ ಆಟಗಾರ ಎನಿಸಿಕೊಂಡು ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಂಡಿದ್ದು ಟಿ ಟ್ವೆಂಟಿ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಸೂಚನೆ ನೀಡಿದ್ದಾರೆ.