ಭಾರತ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಸೋತು ಮುಖಭಂಗ ಅನುಭವಿಸಿದೆ. ಈ ಸರಣಿಯ ಸೋಲಿನ ಕಹಿಯನ್ನು ಮರೆಯಲು ಆಸ್ಟ್ರೇಲಿಯಾದಲ್ಲಿ ಉತ್ತಮ ವೇದಿಕೆ ಸಿದ್ಧವಾಗಿದೆ. ಈ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುವ ಇರಾದೆಯನ್ನು ಟೀಮ್ ಇಂಡಿಯಾ ಹೊಂದಿದೆ. ಈ ಹಿಂದಿನ ಎರಡು ಪ್ರವಾಸದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿತ್ತು. ಈಗ ಮೂರನೇ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಗೆ ಟೀಮ್ ಇಂಡಿಯಾ ಎಂಟ್ರಿ ನೀಡಬೇಕಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಗೆ ಟೀಮ್ ಇಂಡಿಯಾ ನಿರಾಯಾಸವಾಗಿ ಹೋಗಲು ಇನ್ನು ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕನಿಷ್ಠ 4 ಪಂದ್ಯಗಳನ್ನು ಗೆಲ್ಲಬೇಕು. ಈ ಸರಣಿ ಟೀಮ್ ಇಂಡಿಯಾಕ್ಕೆ ದೊಡ್ಡ ಸವಾಲಾಗಿದೆ. ಈ ಸರಣಿಗೂ ಮುನ್ನ ಮಾತಿನ ಯುದ್ಧ ನಡೆದಿದೆ. ಟೀಮ್ ಇಂಡಿಯಾ ಸಹ ಯುದ್ಧಕ್ಕೆ ಎಂಟ್ರಿ ನೀಡಿದೆ.

ಬಿಸಿಸಿಐ ಸಾಮಾಜಿಕ ತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಟೀಮ್ ಇಂಡಿಯಾ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳು ಬಹು ಉತ್ಸಾಹದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವೇಳೆ ಅಭಿಷೇಕ್ ನಾಯರ್ ಮತ್ತು ರಿಯಾನ್ ಟೆನ್ ಡ್ಯೂಷ್ ಆಸ್ಟ್ರೇಲಿಯಾ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ಆಸ್ಟ್ರೇಲಿಯಾ, ನಾವು ಬಂದಿದ್ದೇವೆ ಎಂದು ಹೇಳುವ ಮೂಲಕ ಗುಡುಗಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸವನ್ನು ಬೆಳೆಸುವುದು ಉತ್ತಮ ಅನುಭವ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಈ ಪಿಚ್ಗಳಲ್ಲಿ ಆಡಿದ ಸಾಕಷ್ಟು ಅನುಭವ ಹೊಂದಿದ್ದಾರೆ ಎಂದು ಬ್ಯಾಟಿಂಗ್ ಕೋಚ್ ಅಭಿಷೇಕ್ ನಾಯರ್ ಹೇಳಿದರು. ಈ ಸ್ಟಾರ್ ಆಟಗಾರರ ಉಪಸ್ಥಿತಿ ತಂಡದ ಬಲವನ್ನು ಹೆಚ್ಚಿಸಲಿದೆ. ಅಲ್ಲದೆ ಇವರ ಅನುಭವದಿಂದಲೇ ಯುವ ಆಟಗಾರರು ಸಾಕಷ್ಟು ಕಲಿಯುತ್ತಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಇಂದಿನ ವರ್ಷದ ಅತ್ಯಂತ ವಿಶೇಷ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಒಂದಾಗಿದೆ ಎಂದು ಬೌಲಿಂಗ್ ಕೋಚ್ ಮೋರ್ನೆ ಮೊರ್ಕೆಲ್ ಬಣ್ಣಿಸಿದ್ದಾರೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಎಲ್ಲ ಆಟಗಾರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅಲ್ಲದೆ ಸರಣಿಗೂ ಮುನ್ನ ಕೋಚ್ ಎಲ್ಲ ಆಟಗಾರರೊಂದಿಗೆ ಮಾತನಾಡಿದ್ದಾರೆ. ಇದು ತಂಡದ ನೈತಿಕತೆ ಹೆಚ್ಚಿಸಲು ಪ್ರಯತ್ನಿಸುತ್ತದೆ ಎಂದು ಅಭಿಷೇಕ್ ನಾಯರ್ ಈ ವೀಡಿಯೊದಲ್ಲಿ ತಿಳಿಸಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಭಾರತ ಸತತ ಎರಡು ಬಾರಿ ಗೆದ್ದಿರುವುದು ಹೆಮ್ಮೆಯ ಸಂಗತಿ ಎಂದು ರಿಯಾನ್ ಟೆನ್ ಡ್ಯೂಷ್ ಹೇಳಿದ್ದಾರೆ.

ಉಭಯ ತಂಡಗಳ ನಡುವಣ ಮೊದಲ ಟೆಸ್ಟ್ ಪದ್ಯ ನವೆಂಬರ್ 22 ರಂದು ಪರ್ತ್ನಲ್ಲಿ ನಡೆಯಲಿದೆ. ಈ ಪಿಚ್ ವೇಗದ ಬೌಲರ್ಗಳಿಗೆ ಸಹಾಯ ಮಾಡುತ್ತದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಈ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಆಡುವುದು ಅನುಮಾನ. ಇವರ ಅನುಪಸ್ಥಿತಿಯಲ್ಲಿ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.