ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡುತ್ತಿದೆ. ಆದರೆ ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಲ್ಲಿ ಮತ್ತೆ ಟೀಮ್ ಇಂಡಿಯಾ ಆರಂಭಿಕ ಸಮಸ್ಯೆ ಎದುರಿಸಿದೆ.
ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಭಾರತಕ್ಕೆ ಇನ್ನಿಂಗ್ಸ್ ಆರಂಭಿಸಲು ಕ್ರೀಸ್ಗೆ ಬಂದರು. ಇಬ್ಬರೂ ಕೂಡ ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಆದರೆ, ಬಾಂಗ್ಲಾದೇಶ ವಿರುದ್ಧ ಅಭಿಷೇಕ್ ಶರ್ಮಾ ಬ್ಯಾಟ್ ಅಬ್ಬರಿಸಿಲ್ಲ. ಕೇವಲ 4 ರನ್ಗಳಿಗೆ ಅವರು ವಿಕೆಟ್ ಕಳೆದುಕೊಂಡು ಪೆವಿಲಿಯನ್ ಗೆ ಮರಳಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಭಾರತ ತಂಡ ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿತ್ತು. ಶ್ರೀಲಂಕಾ ವಿರುದ್ಧ ಏಕದಿನ ಮತ್ತು ಟಿ20 ಎರಡು ಸರಣಿಗಳಿಗೆ ಅಭಿಷೇಕ್ ಶರ್ಮಾ ಆಯ್ಕೆಯಾಗಿರಲಿಲ್ಲ. ಇದಾದ ಬಳಿಕ ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಲ್ಲಿ ಅವರಿಗೆ ಅವಕಾಶ ಸಿಕ್ಕಿತ್ತು. ಆದರೆ ಈ ಸರಣಿಯಲ್ಲಿ ಅಭಿಷೇಕ್ ತನ್ನ ಖದರ್ ತೋರುವಲ್ಲಿ ವಿಫಲವಾಗಿದ್ದಾರೆ.
ಹೈದರಾಬಾದ್ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಮೂರನೇ ಓವರ್ನ ಮೊದಲ ಎಸೆತದಲ್ಲಿ ಔಟಾಗಿದ್ದಾರೆ. 4 ಎಸೆತಗಳಲ್ಲಿ 4 ರನ್ ಗಳಿಸುವ ಮೂಲಕ ನಿರಾಸೆ ಮೂಡಿಸಿದ್ದಾರೆ. ತಂಝಿಮ್ ಹಸನ್ ಸಾಕಿಬ್ ಎಸೆತದಲ್ಲಿ ಅಭಿಷೇಕ್ ಸಿಕ್ಸರ್ ಬಾರಿಸುವ ಪ್ರಯತ್ನದಲ್ಲಿ ಮೆಹದಿ ಹಸನ್ ಕ್ಯಾಚ್ ನೀಡಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಲ್ಲಿ ಅಭಿಷೇಕ್ ಶರ್ಮಾ ಆವರಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಮೂರೂ ಪಂದ್ಯಗಳಲ್ಲಿ ಅವರು ಅರ್ಧಶತಕ ಗಳಿಸಲು ಸಾಧ್ಯವಾಗಿಲ್ಲ. ಗ್ವಾಲಿಯರ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 16 ರನ್ ಗಳಿಸಿ ಔಟಾದರು. ಆ ಬಳಿಕ ದೆಹಲಿಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಕೇವಲ 15 ರನ್ ಗಳಿಸಲಷ್ಟೇ ಶಕ್ತರಾದರು. ಈ ಕಳಪೆ ಪ್ರದರ್ಶನದ ನಂತರ ಟೀಮ್ ಇಂಡಿಯಾದಲ್ಲಿ ಅವರ ತಮ್ಮ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಅಭಿಷೇಕ್ ಶರ್ಮಾ ಅವರು ಬಾಂಗ್ಲಾದೇಶ ವಿರುದ್ಧ 3 ಪಂದ್ಯಗಳ ಸರಣಿಯಲ್ಲಿ ಮಾತ್ರ ರನ್ ಗಳಿಸಲು ವಿಫಲವಾಗಿಲ್ಲ. ಸತತ 5 ಇನ್ನಿಂಗ್ಸ್ಗಳಲ್ಲಿ 20 ರನ್ಗಳ ಗಡಿ ಮುಟ್ಟಲು ಸಾಧ್ಯವಾಗಲಿಲ್ಲ. ಜಿಂಬಾಬ್ವೆ ಪ್ರವಾಸದ ಟಿ20 ಸರಣಿಯಲ್ಲಿ ಅವರು ಮೊದಲ ಇನ್ನಿಂಗ್ಸ್ನಲ್ಲಿ ಖಾತೆ ತೆರೆಯದೆ ಶೂನ್ಯಕ್ಕೆ ಔಟಾಗಿದ್ದರು. ಆ ಬಳಿಕ ಎರಡನೇ ಪಂದ್ಯದಲ್ಲಿ ಶತಕ ಸಿಡಿಸಿದ್ದರು. ಶತಕದ ನಂತರ ಅವರ ಬ್ಯಾಟ್ ಮೌನಕ್ಕೆ ಶರಣಾನದಂತೆ ಕಾಣುತ್ತಿದೆ.
ಅಭಿಷೇಕ್ ಆಡಿರುವ ಐದು ಇನ್ನಿಂಗ್ಸ್ಗಳಲ್ಲಿ ಕ್ರಮವಾಗಿ 10, 14, 16, 15, 4 ರನ್ ಗಳಿಸಿದ್ದಾರೆ. ಒಂದು ರೀತಿಯಲ್ಲಿ ಹೈದರಾಬಾದ್ ಪಿಚ್ ಅಭಿಷೇಕ್ಗೆ ತವರು ನೆಲ. ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕಾಗಿ ಆಡುತ್ತಿದ್ದು, ಇಲ್ಲಿಯೂ ಅವರು ದೊಡ್ಡ ಇನ್ನಿಂಗ್ಸ್ ಆಡುವುದರಲ್ಲಿ ಎಡುವಿದ್ದಾರೆ.