
ಬೆಂಗಳೂರು, ಜೂ. 10: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಅಫ್ಘಾನಿಸ್ತಾನ್ ಕ್ರಿಕೆಟ್ ತಂಡ ಶನಿವಾರ ರಾತ್ರಿ ಬೆಂಗಳೂರಿಗೆ ಬಂದಿಳಿದಿದೆ. ನಗರಕ್ಕೆ ಆಗಮಿಸಿದ ಆಟಗಾರರನ್ನು ಭಾರತೀಯ ಸಂಪ್ರದಾಯ ರೀತಿಯಲ್ಲಿ ಬರ ಮಾಡಿಕೊಳ್ಳಲಾಯಿತು.
ಜೂನ್ 14ರಿಂದ 18ರ ವರೆಗೆ ನಡೆಯಲಿರುವ ಟೆಸ್ಟ್ ಪಂದ್ಯಾಟದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಆಡಲಿವೆ. ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದ ಬಳಿಕ ಅಫ್ಘಾನಿಸ್ತಾನ್ ತಂಡ ಆಡುತ್ತಿರುವ ಮೊದಲ ಟೆಸ್ಟ್ ಪಂದ್ಯಾಟವಿದು.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗಾಯಗೊಂಡು ಪಂದ್ಯದಿಂದ ಹೊರಗುಳಿದಿರುವುದರಿಂದ ಅವರ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ.
ಇತ್ತೀಚೆಗಷ್ಟೇ ನಡೆದ ಟ್ವೆಂಟಿ-20 ಕ್ರಿಕೆಟ್ನಲ್ಲಿ ಅಫ್ಘಾನಿಸ್ತಾನ ತಂಡ ಬಾಂಗ್ಲಾದೇಶವನ್ನು 3-0 ಅಂತರದಿಂದ ವೈಟ್ವಾಶ್ ಗೊಳಿಸಿತ್ತು. ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಭಾರತ ಅಗ್ರ ಸ್ಥಾನದಲ್ಲಿದ್ದು ಅಫ್ಘಾನಿಸ್ತಾನದೆದುರು ಪ್ರತಿಷ್ಠೆ ಉಳಿಸಿಕೊಳ್ಳಲಿದೆಯೇ ಕಾದು ನೋಡಬೇಕಿದೆ.