ಸೋಮವಾರ, ಆಗಸ್ಟ್ 21ರಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ 2023ರ ಏಷ್ಯಾ ಕಪ್ ಪಂದ್ಯಾವಳಿಗೆ 17 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ನಾಯಕನಾಗಿದ್ದರೆ, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ನೇಮಕಗೊಂಡಿದ್ದಾರೆ.
ಆಗಸ್ಟ್ 30ರಿಂದ 2023ರ ಏಷ್ಯಾ ಕಪ್ ಪಂದ್ಯಾವಳಿ ಪ್ರಾರಂಭವಾಗಲಿದ್ದು, ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದಾರೆ ಮತ್ತು ತಿಲಕ್ ವರ್ಮಾ ಚೊಚ್ಚಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ತನ್ನ ಏಷ್ಯಾ ಕಪ್ ಅಭಿಯಾನವನ್ನು ಸೆಪ್ಟೆಂಬರ್ 2ರಂದು ಶ್ರೀಲಂಕಾದ ಕ್ಯಾಂಡಿಯಲ್ಲಿ ಪಾಕಿಸ್ತಾನದ ವಿರುದ್ಧ ಪ್ರಾರಂಭಿಸಲಿದೆ.
ಇನ್ನು 17 ಸದಸ್ಯರ ಭಾರತ ತಂಡದಲ್ಲಿ ಅನುಭವಿ ಬ್ಯಾಟ್ಸ್ಮನ್ ಶಿಖರ್ ಧವನ್ ಸ್ಥಾನ ಪಡೆಯಲು ವಿಫಲರಾಗಿದ್ದಾರೆ ಮತ್ತು ಇದಕ್ಕೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಕಾರಣವನ್ನು ನೀಡಿದ್ದಾರೆ.

"ಶಿಖರ್ ಧವನ್ ಭಾರತ ತಂಡಕ್ಕೆ ಅದ್ಭುತ ಕೊಡುಗೆ ನೀಡಿದ್ದಾರೆ. ಆದರೆ, ಪ್ರಸ್ತುತ ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ನಮ್ಮ 3 ಆದ್ಯತೆಯ ಆರಂಭಿಕರಾಗಿದ್ದಾರೆ," ಎಂದು ಅಜಿತ್ ಅಗರ್ಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
2023ರ ಏಷ್ಯಾ ಕಪ್ ಪಂದ್ಯಾವಳಿಯನ್ನು ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿದ್ದು, ಪಂದ್ಯಾವಳಿಯು ಆಗಸ್ಟ್ 30ರಿಂದ ಸೆಪ್ಟೆಂಬರ್ 17ರವರೆಗೆ ನಡೆಯಲಿದೆ.
ಅಕ್ಟೋಬರ್ನಲ್ಲಿ ಆರಂಭವಾಗುವ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡದ ಸಿದ್ಧತೆಗಳಿಗೆ ಏಷ್ಯಾ ಕಪ್ ಪ್ರಮುಖ ಪೂರ್ವತಯಾರಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಐಸಿಸಿ ಪಂದ್ಯಾವಳಿಗೆ ಆಯ್ಕೆ ಮಾಡಲು ಆಯ್ಕೆಗಾರರಿಗೆ ಸಹಾಯ ಮಾಡಲಿದೆ.
ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ ಮರಳಿ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಇತ್ತೀಚಿಗೆ ವೆಸ್ಟ್ ಇಂಡೀಸ್ ವಿರುದ್ಧದ ಉತ್ತಮ ಪ್ರದರ್ಶನದ ಹಿನ್ನೆಲೆಯಲ್ಲಿ ತಿಲಕ್ ವರ್ಮಾ ಅವರು ಭಾರತದ ಏಷ್ಯಾ ಕಪ್ ತಂಡದಲ್ಲಿ ಸ್ಥಾನ ಪಡೆದರು.
2023ರ ಏಷ್ಯಾ ಕಪ್ಗಾಗಿ ಭಾರತ ತಂಡದ ಆಯ್ಕೆ ಸಭೆಯ ಮುಂದೆ ಒಂದು ದೊಡ್ಡ ಪ್ರಶ್ನೆಯೆಂದರೆ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್. ಆದರೆ, ಇಬ್ಬರೂ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಸ್ಪಿನ್ ಬೌಲರ್ಗಳಾದ ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ಹೆಚ್ಚಿನ ವೈವಿಧ್ಯತೆಯನ್ನು ನೀಡಲು ತಂಡದಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ ಹೊರತಾಗಿ ರವೀಂದ್ರ ಜಡೇಜಾ ಕೂಡ ಆಲ್ರೌಂಡರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಪಾಕಿಸ್ತಾನದ ಮುಲ್ತಾನ್ನಲ್ಲಿ ಪಾಕಿಸ್ತಾನ ಮತ್ತು ನೇಪಾಳ ತಂಡಗಳ ನಡುವಿನ ಪಂದ್ಯದೊಂದಿಗೆ ಪಂದ್ಯಾವಳಿಗೆ ಚಾಲನೆ ದೊರೆಯಲಿದೆ. ಪಾಕಿಸ್ತಾನ, ಭಾರತ ಮತ್ತು ನೇಪಾಳ ತಂಡಗಳು ಎ ಗುಂಪಿನಲ್ಲಿದ್ದರೆ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಬಿ ಗುಂಪಿನಲ್ಲಿದೆ.
ಹೈಬ್ರಿಡ್ ಮಾದರಿಯಲ್ಲಿ ಏಷ್ಯಾ ಕಪ್ ಪಂದ್ಯಾವಳಿ ನಡೆಯಲಿದೆ ಮತ್ತು ಪಾಕಿಸ್ತಾನವು ನಾಲ್ಕು ಪಂದ್ಯಗಳನ್ನು ಆಯೋಜಿಸಲಿದ್ದರೆ, ಭಾರತ ತಂಡದ ಮತ್ತು ಫೈನಲ್ ಸೇರಿದಂತೆ ಶ್ರೀಲಂಕಾ ಒಂಬತ್ತು ಪಂದ್ಯಗಳನ್ನು ಆಯೋಜಿಸುತ್ತದೆ.
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಪ್ರಯಾಣದ ಮೀಸಲು ಆಟಗಾರ).