ನವದೆಹಲಿ, ಆಗಸ್ಟ್ 2: ತಮ್ಮನ್ನು ಹುದ್ದೆಯಿಂದ ಕೆಳಕ್ಕಿಳಿಸಿದ ಹಿಂದಿನ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಬಿಸಿಸಿಐನ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ನೀಡುವ ಸಂದರ್ಭದಲ್ಲಿ ನೀಡಿದ್ದ ಹೇಳಿಕೆಯುವ ತಮ್ಮನ್ನು ಸಾರ್ವಜನಿಕವಾಗಿ ಮುಜುಗರಕ್ಕೆ ಈಡುಮಾಡಿದ್ದು, ವೈಯಕ್ತಿಕವಾಗಿ ಅತೀವ ದುಃಖ ಉಂಟುಮಾಡಿದೆ ಎಂದು ಅನುರಾಗ್ ಮನವಿಯಲ್ಲಿ ತಿಳಿಸಿದ್ದಾರೆ.
ಲೋಧಾ ಸಮಿತಿಯ ರಚನೆ ಹಾಗೂ ಅದರ ಶಿಫಾರಸುಗಳ ಅನುಷ್ಠಾನಕ್ಕೆ ಕಾರಣವಾದ ಬಿಸಿಸಿಐ ವರ್ಸಸ್ ಬಿಹಾರ ಕ್ರಿಕೆಟ್ ಸಂಸ್ಥೆಯ ಪ್ರಕರಣದಲ್ಲಿ ತಮ್ಮನ್ನು ಸಹ ಪ್ರತಿವಾದಿಯನ್ನಾಗಿಸಬೇಕು ಎಂದು ಅವರು ಕೋರಿದ್ದಾರೆ.
ಬಿಸಿಸಿಐನಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ತರುವಲ್ಲಿ ಮತ್ತು 2016ರ ಜುಲೈ 18 ರಂದು ತಾನು ನೀಡಿದ್ದ ಆದೇಶವನ್ನು ಪಾಲಿಸುವಲ್ಲಿ ವಿಫಲರಾದ ಕಾರಣಕ್ಕೆ ಬಿಸಿಸಿಐ ಅಧ್ಯಕ್ಷರಾಗಿದ್ದ ಅನುರಾಗ್ ಠಾಕೂರ್ ಹಾಗೂ ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು ತಮ್ಮ ಸ್ಥಾನಗಳಿಂದ ವಜಾಗೊಳಿಸಿ ಸುಪ್ರೀಂಕೋರ್ಟ್ 2017ರ ಜನವರಿ 2 ರಂದು ಆದೇಶ ಹೊರಡಿಸಿತ್ತು.