ಶುಕ್ರವಾರ, ಸೆಪ್ಟೆಂಬರ್ 14ರಂದು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಏಷ್ಯಾ ಕಪ್ ಪಂದ್ಯಾವಳಿಯ ಕೊನೆಯ ಸೂಪರ್ 4 ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಡುತ್ತಿವೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ಆದ್ದರಿಂದ ಶಕಿಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಗಮನಾರ್ಹವಾಗಿ, ಭಾರತ ತಂಡ ಈಗಾಗಲೇ ಫೈನಲ್ ತಲುಪಿದ್ದರಿಂದ ಇದು ಅನೌಪಚಾರಿಕ ಪಂದ್ಯವಾಗಿದೆ. ಇನ್ನು ಬಾಂಗ್ಲಾದೇಶ ತಂಡ ಮೊದಲೆರಡು ಪಂದ್ಯಗಳನ್ನು ಸೋತು ಟೂರ್ನಿಯಿಂದ ಹೊರಬಿದ್ದಿದ್ದು, ಗೆಲುವಿನೊಂದಿಗೆ ಪಂದ್ಯಾವಳಿ ಮುಗಿಸಲು ಎದುರು ನೋಡುತ್ತಿದೆ.
ಸೋಮವಾರ ಮೀಸಲು ದಿನದಂದು ಮುಕ್ತಾಯಗೊಂಡ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ದಾಖಲೆಯ 228 ರನ್ಗಳ ಗೆಲುವು ಸಾಧಿಸಿದರೆ, ನಂತರದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಸಾಧಾರಣ ಮೊತ್ತ ಗಳಿಸಿಯೂ ಅದ್ಭುತ ಬೌಲಿಂಗ್ ಪ್ರದರ್ಶನದಿಂದ 41 ರನ್ಗಳ ಜಯ ಕಂಡಿತು.
ಇನ್ನು ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೆಲವು ಬದಲಾವಣೆಗಳಾಗಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟರ್ ತಿಲಕ್ ವರ್ಮಾ ಚೊಚ್ಚಲ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಅಭ್ಯಾಸದ ವೇಳೆ ನಾಯಕ ರೋಹಿತ್ ಶರ್ಮಾ ಕ್ಯಾಪ್ ನೀಡಿದರು.
ಅಲ್ಲದೆ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರ ಬದಲಾಗಿ ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್ ಮತ್ತು ಪ್ರಸಿದ್ಧ್ ಕೃಷ್ಣ ಅವರು ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.
ಬಾಂಗ್ಲಾದೇಶ: ತಂಜಿದ್ ಹಸನ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಅನಾಮುಲ್ ಹಕ್, ಶಕಿಬ್ ಅಲ್ ಹಸನ್ (ನಾಯಕ), ತೌಹಿದ್ ಹೃದೋಯ್, ಮೆಹಿದಿ ಹಸನ್ ಮಿರಾಜ್, ಶಮೀಮ್ ಹೊಸೈನ್, ನಸುಮ್ ಅಹ್ಮದ್, ಮೆಹೆದಿ ಹಸನ್, ತಂಜೀಮ್ ಹಸನ್ ಶಕಿಬ್, ಮುಸ್ತಾಫೀಜುರ್ ರಹಮಾನ್.