ಮಂಗಳವಾರ, ಸೆಪ್ಟೆಂಬರ್ 12ರಂದು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಏಷ್ಯಾ ಕಪ್ ಪಂದ್ಯಾವಳಿಯ ಮತ್ತೊಂದು ಸೂಪರ್ 4 ಪಂದ್ಯದಲ್ಲಿ ಭಾರತ ಮತ್ತು ಆತಿಥೇಯ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ.
ಗಮನಾರ್ಹವಾಗಿ, ಭಾರತ ತಂಡಕ್ಕೆ ಇದು ಸತತ ಮೂರನೇ ದಿನ ಪಂದ್ಯವಾಡಿದಂತಾಗುತ್ತದೆ. ಕಳೆದ ಪಂದ್ಯದಲ್ಲಿ ಮಳೆಯ ಕಾರಣದಿಂದಾಗಿ ಪಾಕಿಸ್ತಾನ ವಿರುದ್ಧ ಸತತ ಎರಡು ದಿನ ಪಂದ್ಯವನ್ನು ಆಡಲಾಗಿದೆ. ಮೀಸಲು ದಿನವಾದ ಸೋಮವಾರ ಪಂದ್ಯ ಮುಕ್ತಾಯವಾಯಿತು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ದಸುನ್ ಶನಕ ನಾಯಕತ್ವದ ಶ್ರೀಲಂಕಾ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಸೋಮವಾರವಷ್ಟೇ ಮುಕ್ತಾಯಗೊಂಡ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ದಾಖಲೆಯ 228 ರನ್ಗಳ ಗೆಲುವಿನ ಆತ್ಮವಿಶ್ವಾಸದೊಂದಿಗೆ ಈ ಪಂದ್ಯದಲ್ಲಿ ಆಡುತ್ತಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡುತ್ತಿರುವ ಕಾರಣ ಗೆಲ್ಲುವ ನೆಚ್ಚಿನ ತಂಡವಾಗಿದೆ.
ಮತ್ತೊಂದೆಡೆ, ಆತಿಥೇಯ ಶ್ರೀಲಂಕಾ ತಂಡವು ಕೂಡ ಕಳೆದ ತನ್ನ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 21 ರನ್ಗಳಿಂದ ಮಣಿಸಿದ ಆತ್ಮವಿಶ್ವಾಸದಲ್ಲಿ ತೇಲುತ್ತಿದೆ. ಯುವ ಮತ್ತು ಅನುಭವಿಗಳಿಂದ ಕೂಡಿದ ತಂಡ ಉತ್ತಮ ಪ್ರದರ್ಶನ ನೀಡಲು ಎದುರು ನೋಡುತ್ತಿದೆ.

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಒಂದು ಬದಲಾವಣೆ ಮಾಡಿದ್ದು, ವೇಗಿ ಶಾರ್ದೂಲ್ ಠಾಕೂರ್ ಬದಲಿಗೆ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ. ಇನ್ನು ಶ್ರೀಲಂಕಾ ಕಳೆದ ಪಂದ್ಯದ ತಂಡವನ್ನೇ ಕಣಕ್ಕಿಳಿಸಿದೆ.
ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಫೈನಲ್ ಸ್ಥಾನವನ್ನು ಖಚಿತಪಡಿಸಕೊಳ್ಳಲು ಸಜ್ಜಾಗಿವೆ. ಸೆಪ್ಟೆಂಬರ್ 17ರಂದು 2023ರ ಏಷ್ಯಾ ಕಪ್ ಫೈನಲ್ ಪಂದ್ಯ ನಡೆಯಲಿದೆ.
ಭಾರತ: ಶುಭ್ಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಶ್ರೀಲಂಕಾ: ಪಾಥುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವಾ, ದಸುನ್ ಶನಕ (ನಾಯಕ), ದುನಿತ್ ವೆಲ್ಲಾಲಗೆ, ಮಹೀಶ್ ತೀಕ್ಷಣ, ಕಸುನ್ ರಜಿತ, ಮತೀಶ ಪತಿರಾಣ.