ಶನಿವಾರ, ಸೆಪ್ಟೆಂಬರ್ 2ರಂದು ಶ್ರೀಲಂಕಾದ ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2023ರ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ.
ಈ ಹೈ-ವೋಲ್ಟೇಜ್ ಪಂದ್ಯವನ್ನು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜಿದ್ದಾಜಿದ್ದಿನ ಸಮರಕ್ಕೂ ಮುನ್ನ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಲೆಜೆಂಡರಿ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ಭೇಟಿ ಮಾಡಿದ್ದಾರೆ.

ಏಷ್ಯಾ ಕಪ್ನಲ್ಲಿನ ಮುಖಾಮುಖಿಗೂ ಮುನ್ನ ವಿರಾಟ್ ಕೊಹ್ಲಿ ಅವರೊಂದಿಗೆ ಹ್ಯಾರಿಸ್ ರೌಫ್, ಶಾಹೀನ್ ಶಾ ಆಫ್ರಿದಿ ಮತ್ತು ಶಾದಾಬ್ ಖಾನ್ ಅವರು ಸೌಹಾರ್ದಯುತ ಮಾತುಕತೆ ನಡೆಸಿದರು.
ಇದೇ ವೇಳೆ ಭಾರತೀಯ ತಂಡದ ನಾಯಕ ರೋಹಿತ್ ಶರ್ಮಾ ಕ್ಯಾಂಡಿ ಮೈದಾನದಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮತ್ತು ಆರಂಭಿಕ ಬ್ಯಾಟ್ಸ್ಮನ್ ಇಮಾಮ್-ಉಲ್-ಹಕ್ ಅವರೊಂದಿಗೆ ಮಾತನಾಡಿದರು. ಭಾರತೀಯ ವೇಗಿ ಮೊಹಮ್ಮದ್ ಸಿರಾಜ್ ಮೈದಾನದಲ್ಲಿ ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಅವರೊಂದಿಗೆ ಸಂಭಾಷಣೆ ನಡೆಸುತ್ತಿರುವುದನ್ನು ಕಾಣಬಹುದು.

ಏಷ್ಯಾ ಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಏಕದಿನ ಮಾದರಿಯಲ್ಲಿ 14ನೇ ಬಾರಿಗೆ ಸೆಣಸಾಡುತ್ತಿವೆ. ಕಳೆದ 13 ಪಂದ್ಯಗಳಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನವು 5 ಪಂದ್ಯಗಳಲ್ಲಿ ಜಯ ಗಳಿಸಿದೆ ಮತ್ತು ಒಂದು ಪಂದ್ಯದಲ್ಲಿ ಫಲಿತಾಂಶವಿಲ್ಲದೆ ರದ್ದಾಗಿದೆ.
2018ರ ಏಷ್ಯಾ ಕಪ್ನಲ್ಲಿ ಭಾರತ ತಂಡವು ಬೇರೆ ಬೇರೆ ಪಂದ್ಯಗಳಲ್ಲಿ ಪಾಕಿಸ್ತಾನ ತಂಡವನ್ನು 8 ವಿಕೆಟ್ ಮತ್ತು 9 ವಿಕೆಟ್ಗಳಿಂದ ಸೋಲಿಸಿತು. ಉಭಯ ತಂಡಗಳ ಕೊನೆಯ 5 ಪಂದ್ಯಗಳಲ್ಲಿ ಭಾರತ 4 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಒಮ್ಮೆ ಗೆಲುವು ಸಾಧಿಸಿದೆ.
ಶನಿವಾರದ ಪಂದ್ಯವು ಭಾರತ ಮತ್ತು ಪಾಕಿಸ್ತಾನ ತಂಡಗಳಿಗೆ ಕಠಿಣವಾಗಿರಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವು ನೇಪಾಳ ತಂಡವನ್ನು 238 ರನ್ಗಳ ಅಂತರದಿಂದ ಸೋಲಿಸುವ ಮೂಲಕ ಶುಭಾರಂಭ ಮಾಡಿತ್ತು.
ನೇಪಾಳ ತಂಡವನ್ನು ಸೋಲಿಸಿದ ಆತ್ಮವಿಶ್ವಾಸದಲ್ಲಿ, ಪಾಕಿಸ್ತಾನ ತಂಡವು ಶ್ರೀಲಂಕಾದ ಕ್ಯಾಂಡಿಯಲ್ಲಿರುವ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ತನ್ನ ಅಂತಿಮ ಗುಂಪು-ಹಂತದ ಪಂದ್ಯದಲ್ಲಿ ಭಾರತ ವಿರುದ್ಧ ಸೆಣಸಾಡಲು ಸಿದ್ಧವಾಗಿದೆ. ಭಾರತ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ಈಗಾಗಲೇ ತನ್ನ ಆಡುವ 11ರ ಬಳಗವನ್ನು ಪ್ರಕಟಿಸಿದೆ.
ಬಾಬರ್ ಅಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಮಾಮ್-ಉಲ್-ಹಕ್, ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ.