ಇನ್ನೇನು ಕೆಲವೇ ದಿನಗಳಲ್ಲಿ ಏಷ್ಯಾ ಕಪ್ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ. ಈ ವೇಳೆ ಟೀಮ್ ಇಂಡಿಯಾದಲ್ಲಿ ಯಾರೆಲ್ಲಾ ಸೇರಬಹುದು ಎಂಬ ಲೆಕ್ಕಾಚಾರಗಳು ಆರಂಭವಾಗಿವೆ. ಇನ್ನು ಈ ಟೂರ್ನಿಗೆ ಟೀಮ್ ಇಂಡಿಯಾವನ್ನು ಮುನ್ನಡೆಸುವುದು ಯಾರು ಎಂಬ ಪ್ರಶ್ನೆಗಳು ಎದ್ದಿವೆ. ಟೀಮ್ ಇಂಡಿಯಾವನ್ನು ಏಷ್ಯಾ ಕಪ್ನಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುತ್ತಾರಾ, ಶುಭಮನ್ ಗಿಲ್ ಮುನ್ನಡೆಸುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ.
ಸೂರ್ಯಕುಮಾರ್ ಯಾದವ್ ಗಾಯದಿಂದ ಚೇತರಿಸಿಕೊಂಡಿದ್ದು, ಬೆಂಗಳೂರಿನ ಎನ್ಸಿಎನಲ್ಲಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ ಇವರು ಫಿಟ್ ಆಗದಿದ್ದರೆ ಎಂಬ ಪ್ರಶ್ನೆಗಳು ಎದ್ದಿವೆ. ಸದ್ಯ ಬರುತ್ತಿರುವ ಮಾಹಿತಿಯ ಪ್ರಕಾರ ಸೂರ್ಯಕುಮಾರ್ ಯಾದವ್ ಫಿಟ್ ಆಗಿದ್ದಾರೆ ಎಂಬ ಸುದ್ದಿಗಳು ಹೊರ ಬರುತ್ತಿವೆ. ಇನ್ನು ತಂಡದಲ್ಲಿ ಸ್ಥಾನ ಪಡೆಯಲು ಶುಭಮನ್ ಗಿಲ್ ಸಹ ತುದಿಗಾಲಿನಲ್ಲಿ ನಿಂತಿದ್ದಾರೆ. ಒಂದು ವೇಳೆ ಇವರು ತಂಡಕ್ಕೆ ಎಂಟ್ರಿ ಪಡೆದಲ್ಲಿ ಇವರಿಗೆ ಯಾವ ಸ್ಥಾನವನ್ನು ನೀಡಲಾಗುತ್ತದೆ ಎಂಬ ಪ್ರಶ್ನೆಗಳು ಎದ್ದಿವೆ.

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾವನ್ನು ಶುಭಮನ್ ಗಿಲ್ ಮುನ್ನಡೆಸಿದ್ದರು. ಈ ವೇಳೆ ಇವರು ಉತ್ತಮವಾಗಿ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-2 ರಿಂದ ಸಮಬಲ ಸಾಧಿಸುವಲ್ಲಿ ಶುಭಮನ್ ಗಿಲ್ ದೊಡ್ಡ ಪಾತ್ರವನ್ನು ನಿರ್ವಹಿಸಿದ್ದರು. ಹೀಗಾಗಿ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಇವರಿಗೂ ತಂಡದ ಚುಕ್ಕಾಣಿ ನೀಡಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.
ಆದರೆ ಮುಂದಿನ ವರ್ಷ ಟಿ20 ವಿಶ್ವಕಪ್ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಟೀಮ್ ಇಂಡಿಯಾದಲ್ಲಿ ಮತ್ತೆ ಯಾವುದೇ ಬದಲಾವಣೆ ಮಾಡದಿರಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧಾರವನ್ನು ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದು, ಇವರೇ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. 2026ರ ಟಿ20 ವಿಶ್ವಕಪ್ ಬಳಿಕವೇ ಶುಭಮನ್ ಗಿಲ್ ಅವರಿಗೆ ಪಟ್ಟವನ್ನು ಕಟ್ಟುವ ಸಾಧ್ಯತೆ ಇದೆ.

ಸೆಪ್ಟಂಬರ್ 9 ರಿಂದ ನಡೆಯಲಿರುವ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಗೆ ಆಗಸ್ಟ್ 19 ಅಥವಾ 20 ರಂದು ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಬಿಸಿಸಿಐ ಆಯ್ಕೆ ಸಮಿತಿ ಘೋಷಿಸುವ 15 ಜನರ ತಂಡದಲ್ಲಿ ಶುಭಮನ್ ಗಿಲ್ ಸ್ಥಾನ ಪಡೆಯುವದು ಕಷ್ಟ ಎಂದು ಹೇಳಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಶುಭಮನ್ ಗಿಲ್ ಟಿ20 ತಂಡವನ್ನು ಸೇರುವ ಕನಸು ಕಾಣುತ್ತಿದೆ. ಸದ್ಯ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಮೆಲ್ನೋಟಕ್ಕಂತೂ ಫಿಕ್ಸ್ ಆದಂತೆ ಕಾಣುತ್ತಿದೆ. ಈ ವೇಳೆ ಮತ್ತೆ ಶುಭಮನ್ ಗಿಲ್ಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತದೆ. ಈ ಎಲ್ಲ ಪ್ರಶ್ನೆಗಳಿಗೆ ಬಿಸಿಸಿಐ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದಾಗಲೇ ಉತ್ತರ ಲಭಿಸುತ್ತದೆ.