
ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಮುಕ್ತಾಯದ ಬಳಿಕ ಈಗ ಎಲ್ಲರ ಚಿತ್ತ ಏಕದಿನ ಸರಣಿಯ ಮೇಲೆ ನೆಟ್ಟಿದೆ. ಈ ಸರಣಿಯ ಮೊದಲ ಪಂದ್ಯ ಜನವರಿ 10ರಂದು ಮಂಗಳವಾರ ನಡೆಯಲಿದ್ದು ಈ ಪಂದ್ಯಕ್ಕೆ ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಹಿನ್ನೆಲೆಯಲ್ಲಿ ಪಂದ್ಯದ ದಿನ ಅಸ್ಸಾಮ್ಮ ಕಾಮ್ರೂಪ್ ಜಿಲ್ಲೆಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ. ಗುವಾಹಟಿ ಸ್ಟೇಡಿಯಂ ಕಾಮ್ರೂಪ್ ಜಿಲ್ಲೆಯಲ್ಲಿದೆ.
ಭಾನುವಾರ ಈ ಬಗ್ಗೆ ಈ ಬಗ್ಗೆ ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಇದರ ಪ್ರಕಾರ ಕಾಮ್ರೂಪ್ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಮತ್ತು ಶೈಕ್ಷಣಿಕ ಸಂಸ್ಥೆಗಳು ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರವೇ ಕಾರ್ಯನಿರ್ವಹಿಸಲಿದೆ. ಅಸ್ಸಾಂ ರಾಜ್ಯಪಾಲರಿಂದ ಈ ಬಗ್ಗೆ ಅಧಿಕೃತ ಆದೇಶ ಬಂದಿದೆ ಎಂದು ವರದಿಯಾಗಿದೆ. ಜನವರಿ 10ರಂದು ಮಂಗಳವಾರ ಮಧ್ಯಾಹ್ನ 1:30ಕ್ಕೆ ಈ ಗುವಾಹಟಿಯಲ್ಲಿ ಭಾರತ ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಪ್ರಾರಂಭವಾಗಲಿದೆ.
ಇನ್ನು ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗುವಾಹಟಿಯಲ್ಲಿ ನಡೆಯಲಿರುವ ಕಾರಣ ಈಗಾಗಲೇ ಟೀಮ್ ಇಂಡಿಯಾ ಹಾಗೂ ಶ್ರೀಲಂಕಾ ತಂಡಗಳು ಗುವಾಹಟಿ ತಲುಪಿದೆ. ಟಿ20 ಸರಣಿಯಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕೂಡ ಭಾರತೀಯ ತಂಡವನ್ನು ಸೇರಿಕೊಂಡಿದ್ದು ಏಕದಿನ ಸರಣಿಯಲ್ಲಿ ಭಾಗವಹಿಸಲಿದ್ದಾರೆ. ಖಾಯಂ ನಾಯಕ ರೋಹಿತ್ ಶರ್ಮಾ ಈ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಇನ್ನು ಮೂರು ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ ತನ್ನ ವಶಕ್ಕೆ ಪಡೆದುಕೊಂಡಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ಸಾಧಿಸಿದ ಬಳಿಕ ಎರಡನೇ ಪಂದ್ಯದಲ್ಲಿ ಎಡವಿತ್ತು. ಹೀಗಾಗಿ ಸರಣಿ ಸಮಬಲಗೊಂಡಿತ್ತು. ಕಳೆದ ಶನಿವಾರ ಈ ಸರಣಿಯ ನಿರ್ಣಾಯಕ ಪಂದ್ಯ ರಾಜ್ಕೋಟ್ನಲ್ಲಿ ನಡೆದಿದ್ದು ಸೂರ್ಯಕುಮಾರ್ ಯಾದವ್ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಟೀಮ್ ಇಂಡಿಯಾದ ಸಂಘಟಿತ ಬೌಲಿಂಗ್ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಭರ್ಜರಿ ಗೆಲುವಿನೊಂದಿಗೆ ಸರಣಿ ವಶಕ್ಕೆ ಪಡೆದುಕೊಂಡಿದೆ.
ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿರುವ ಭಾರತ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.