
ಟಿ20 ವಿಶ್ವಕಪ್ನ ಸೂಪರ್ 12 ಹಂತದ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅಡಿಲೇಡ್ನಲ್ಲಿ ಈ ಪಂದ್ಯ ನಡೆಯುತ್ತಿದೆ. ಸದ್ಯ ಪಂದ್ಯಕ್ಕೆ ಯಾವುದೇ ರೀತಿಯಲ್ಲಿ ಮಳೆ ಅಡ್ಡಿಯಾಗುವ ಸಾಧ್ಯತೆ ಇಲ್ಲ.
ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ಬಳಿಕ ಭಾರತ ತಂಡಕ್ಕೆ ಬಾಂಗ್ಲಾದೇಶದ ವಿರುದ್ಧದ ಪಂದ್ಯ ಮಹತ್ವದ್ದಾಗಿದೆ. ಸೆಮಿಫೈನಲ್ ತಲುಪಲು ಬಾಂಗ್ಲಾದೇಶದ ವಿರುದ್ಧ ಟೀಂ ಇಂಡಿಯಾ ಗೆಲ್ಲಲೇಬೇಕಾಗಿದೆ.
ಭಾರತ ಮತ್ತು ಬಾಂಗ್ಲಾದೇಶ ಎರಡೂ ತಂಡಗಳು ಪ್ರಸ್ತುತ ಗುಂಪು 2 ರಲ್ಲಿ 4 ಅಂಕಗಳನ್ನು ಹೊಂದಿದ್ದು, ಇಂದು ಗೆಲುವು ಸಾಧಿಸುವ ತಂಡಕ್ಕೆ ಸೆಮಿಫೈನಲ್ ಹಾದಿ ಸುಲಭವಾಗಲಿದೆ. ಭಾರತ ತನ್ನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋಲನುಭವಿಸಿದ್ದರೆ, ಬಾಂಗ್ಲಾದೇಶ ಜಿಂಬಾಬ್ವೆ ವಿರುದ್ಧ ಮೂರು ರನ್ಗಳ ರೋಚಕ ಜಯ ಸಾಧಿಸಿತ್ತು.
ಇನ್ನು ಭಾರತ ತಂಡದಲ್ಲಿ ದೀಪಕ್ ಹೂಡಾ ಬದಲಿಗೆ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ. ದಿನೇಶ್ ಕಾರ್ತಿಕ್ ಫಿಟ್ ಆಗಿದ್ದು, ಬಾಂಗ್ಲಾ ವಿರುದ್ಧ ಕಣಕ್ಕಿಳಿಯಲಿದ್ದಾರೆ. ರಿಷಬ್ ಪಂತ್ ಈ ಪಂದ್ಯದಲ್ಲಿ ಆಡುತ್ತಾರೆ ಎನ್ನಲಾಗಿತ್ತು, ಆದರೆ ಟೀಂ ಇಂಡಿಯಾ ಯಾವುದೇ ಹೊಸ ಪ್ರಯೋಗಕ್ಕೆ ಮುಂದಾಗಿಲ್ಲ.

ಉಭಯ ತಂಡಗಳ ಆಡುವ ಬಳಗ
ಭಾರತ : ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್(ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ಶೋರಿಫುಲ್ ಇಸ್ಲಾಂ, ನೂರುಲ್ ಹಸನ್, ಮುಸ್ತಫಿಜುರ್ ರೆಹಮಾನ್, ಹಸನ್ ಮಹಮೂದ್, ತಸ್ಕಿನ್ ಅಹ್ಮದ್