ಜುಲೈ ತಿಂಗಳಿನಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡು ಟೀಮ್ ಇಂಡಿಯಾ ಮೂರು ಮಾದರಿಯ ಸರಣಿಯಲ್ಲಿ ಭಾಗವಹಿಸಲಿದೆ. ಟೆಸ್ಟ್ ಏಕದಿನ ಹಾಗೂ ಟಿ20 ಮೂರು ಮಾದರಿಯಲ್ಲಿಯೂ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಸೆಣೆಸಾಡಲಿದೆ. ಈ ಪ್ರವಾಸದ ಹಿನ್ನೆಲೆಯಲ್ಲಿ ಬಿಸಿಸಿಐ ಇಂದು ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಭಾಗವಹಿಸುವ ಟೀಮ್ ಇಂಡಿಯಾ ಪಡೆಯನ್ನು ಪ್ರಕಟಿಸಿದೆ. ಸಾಕಷ್ಟು ಕುತೂಹಲ ಮೂಡಿಸಿದ್ದ ಈ ಆಯ್ಕೆಯಲ್ಲಿ ಅನುಭವಿಗಳ ಜೊತೆಗೆ ಯುವ ಆಟಗಾರರಿಗೂ ಅವಕಾಶ ದೊರೆತಿರುವುದು ಸಕಾರಾತ್ಮಕ ಅಂಶ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾದ ಅನುಭವಿಗಳಿಗೆ ವಿಶ್ರಾಂತಿ ನೀಡಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ದೊರೆಯಬೇಕು ಎಂಬ ಅಭಿಪ್ರಾಯಗಳು ಕೇಳಿ ಬಂದಿತ್ತು. ಬಿಸಿಸಿಐ ಕೂಡ ಇದೇ ನಿಟ್ಟಿನಲ್ಲಿ ಯೋಚಿಸಿತ್ತು. ಆದರೆ ಹಿರಿಯರಿಗೆ ವಿಶ್ರಾಂತಿ ನೀಡುವ ಯೋಚನೆಯಿಂದ ಹಿಂದಕ್ಕೆ ಸರಿದಿದ್ದು ಪೂರ್ಣ ಪ್ರಮಾಣದ ಬಲಿಷ್ಠ ತಂಡವನ್ನು ಆಯ್ಕೆ ಮಾಡಲಾಗಿದೆ.

ಹಿರಿಯ ಆಟಗಾರ ಚೇತೇಶ್ವರ್ ಪೂಜಾರ ಟೆಸ್ಟ್ ತಂಡದಿಂದ ಹೊರಬಿದ್ದಿರುವುದು ಗಮನಾರ್ಹ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ ಪೂಜಾರ ಶ್ರೇಯಸ್ ಐಯ್ಯರ್ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಮತ್ತೊಂದು ಅವಕಾಶ ಗಿಟ್ಟಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ ಈ ವಿಚಾರವಾಗಿ ಆಯ್ಕೆ ಮಂಡಳಿ ಗಟ್ಟಿನಿಲುವು ತೆಗೆದುಕೊಂಡಿದೆ. ಇನ್ನು ಹಿರಿಯ ವೇಗಿ ಉಮೇಶ್ ಯಾದವ್ ಕೂಡ ತಂಡದಿಂದ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇನ್ನು ಅನುಭವಿ ವೇಗಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ.
ಇನ್ನು ಟೀಮ್ ಇಂಡಿಯಾದ ಟೆಸ್ಟ್ ತಂಡದಲ್ಲಿ ಸ್ಥಾನವನ್ನು ಪಡೆಯಬೇಕೆಂಬ ಭಾರತದ ಇಬ್ಬರು ಯುವ ಆಟಗಾರರ ಕನಸು ಈ ಸರಣಿಯಲ್ಲಿ ನನಸಾಗುತ್ತಿದೆ. ದೇಶೀಯ ಕ್ರಿಕೆಟ್ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಋತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಇದೇ ಮೊದಲ ಬಾರಿಗೆ ಭಾರತ ಟೆಸ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಋತುರಾಜ್ ಗಾಯಕ್ವಾಡ್ ಟೆಸ್ಟ್ ಹಾಗೂ ಏಕದಿನ ಎರಡು ತಂಡದಲ್ಲಿಯೂ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಯುವ ವೇಗದ ಬೌಲರ್ ಮುಖೇಶ್ ಕುಮಾರ್ ಕೂಡ ಭಾರತದ ಟೆಸ್ಟ್ ಹಾಗೂ ಏಕದಿನ ಎರಡು ತಂಡದಲ್ಲಿಯೂ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಟೀಮ್ ಇಂಡಿಯಾದಲ್ಲಿ ಆಗಾಗ ಸ್ಥಾನ ಪಡೆದುಕೊಳ್ಳುವ ಮತ್ತು ಸ್ಥಾನ ಕಳೆದುಕೊಳ್ಳುವ ಸಂಜು ಸ್ಯಾಮ್ಸನ್ ವೆಸ್ಟ್ ಇಂಡೀಸ್ ಪ್ರವಾಸದ ಏಕದಿನ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್ ಸನಿಹದಲ್ಲಿರುವಾಗ ಮತ್ತೊಂದು ಅವಕಾಶ ಸಂಜುಗೆ ದೊರೆತಿದ್ದು ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಂಡು ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ.
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಜಯದೇವ್ ಉನದ್ಕಟ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.