
ಐಪಿಎಲ್ 14ನೇ ಆವೃತ್ತಿ ಆರಂಭಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಭಾರತದಲ್ಲಿ ಎರಡನೇ ಹಂತದ ಕೊರೊನಾ ವೈರಸ್ ಕಾಣಿಸಿಕೊಂಡು ಈಗ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಭಾರೀ ಮಟ್ಟದಲ್ಲಿ ಏರಿಕೆಯಾಗಿದ್ದು ಅಲ್ಲಿನ ಸರ್ಕಾರ ಸಂಪೂರ್ಣ ರಾಜ್ಯದಲ್ಲಿ ಅನಿವಾರ್ಯವಾಗಿ ಲಾಕ್ಡೌನ್ ಘೋಷಿಸಿದೆ. ಹೀಗಾಗಿ ಮುಂಬೈನಲ್ಲಿ ಮೊದಲ ಹಂತದಲ್ಲಿ 10 ಪಂದ್ಯಗಳು ನಡೆಯುತ್ತಿರುವ ಕಾರಣ ಮುಂದಿನ ಪಂದ್ಯಗಳ ಬಗ್ಗೆ ಪ್ರಶ್ನೆಗಳು ಮೂಡುವಂತಾಗಿತ್ತು. ಆದರೆ ಇದಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆಯನ್ನು ನೀಡಿದ್ದಾರೆ.
ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇನ್ಸೈಡ್ ಸ್ಪೋರ್ಟ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಐಪಿಎಲ್ಗೆ ಲಾಕ್ಡೌನ್ನಿಂದ ಯಾವುದೇ ಪರಿಣಾಮವಿಲ್ಲ. ಎಲ್ಲವೂ ಯೋಜನೆಯಂತೆಯೇ ನಡೆಯಲಿದೆ ಎಂದು ಸೌರವ್ ಗಂಗೂಲಿ ಮಾಹಿತಿಯನ್ನು ನೀಡಿದ್ದಾರೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಬಾರಿ 10 ಪಂದ್ಯಗಳನ್ನು ಆಯೋಜನೆ ಮಾಡಲಾಗಿದೆ. ಇದರಲ್ಲಿ ಮೊದಲ ಎರಡು ಪಂದ್ಯಗಳು ಯಶಸ್ವಿಯಾಗಿ ನಡೆದಿದೆ. ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಬಳಿಕ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡ ಒಂದು ದಿನದ ನಂತರ ಇದೇ ಕ್ರೀಡಾಂಗಣದಲ್ಲಿ ಎದುರಾಗಲಿದೆ.
ಆರಂಭಿಕ ಹಂತದಲ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣ ಹಾಗೂ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಪಂದ್ಯಗಳು ನಡೆಯಲಿದೆ. ನಂತರ ಬೆಂಗಳೂರು, ಅಹ್ಮದಾಬಾದ್, ದೆಹಲಿ ಮತ್ತು ಕೊಲ್ಕತ್ತಾ ನಗರಗಳಲ್ಲಿ ಪಂದ್ಯಗಳು ಆಯೋಜನೆಯಾಗಲಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನ ಸಿಬ್ಬಂದಿಗಳು ಹಾಗೂ ಇವೆಂಟ್ ಮ್ಯಾನೇಜರ್ಗಳಿಗೆ ಸಾಮೂಹಿಕವಾಗಿ ಕೊರೊನಾ ವೈರಸ್ ಕಾಣಿಸಿಕೊಂಡ ಕಾರಣ ಟೂರ್ನಿಯ ಆರಂಭಕ್ಕೂ ಮುನ್ನವೇ ಆತಂಕಕ್ಕೆ ಕಾರಣವಾಯಿತು. ಆದರೆ ಕಠಿಣ ಬಯೋಬಬಲ್ ನಿರ್ಮಾಣ ಮಾಡಿರುವ ಹಿನ್ನಲೆಯಲ್ಲಿ ಟೂರ್ನಿಯ ಆಯೋಜನೆಗೆ ಅಡ್ಡಿಯಾಗಲಾರದು ಎಂದ ಆತ್ಮವಿಶ್ವಾಸವನ್ನು ಆಯೋಜಕರು ವ್ಯಕ್ತಪಡಿಸಿದ್ದಾರೆ.