ಚಾಂಪಿಯನ್ಸ್ ಟ್ರೋಫಿ 2025ರ ಮಧ್ಯದಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಲಾಹೋರ್ನಲ್ಲಿ ಕಾಣಿಸಿಕೊಂಡದ್ದಾರಡ . ಅವರ ಈ ನಡೆ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಅಚ್ಚರಿಗೊಳಿಸಿದೆ. ಅವರು ಬುಧವಾರ (ಮಾರ್ಚ್ 5) ಗಡಾಫಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯವನ್ನು ವೀಕ್ಷಿಸಲು ಪಾಕಿಸ್ತಾನಕ್ಕೆ ಹೋಗಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ನಲ್ಲಿ ಗೆಲ್ಲುವ ತಂಡ ಮಾರ್ಚ್ 9 ರಂದು ದುಬೈನಲ್ಲಿ ಭಾರತವನ್ನು ಎದುರಿಸಲಿದೆ.
ರಾಜೀವ್ ಶುಕ್ಲಾ ಚಾರ್ಟರ್ಡ್ ವಿಮಾನದ ಮೂಲಕ ಪಾಕಿಸ್ತಾನ ತಲುಪಿದ್ದಾರೆ. ಅಲ್ಲಿ ಶುಕ್ಲಾ ಅವರನ್ನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಅಧಿಕಾರಿ ಅಸಾದ್ ಮುಸ್ತಫಾ ಸ್ವಾಗತಿಸಿದ್ದಾರೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ನೀಡಿದ ಆಹ್ವಾನದ ಭಾಗವಾಗಿ ಅವರ ಭೇಟಿ ಇದಾಗಿದೆ. ಪಿಸಿಬಿ ಎಲ್ಲಾ ಪ್ರಮುಖ ಕ್ರಿಕೆಟ್ ಮಂಡಳಿಗಳ ಪ್ರತಿನಿಧಿಗಳನ್ನು ಚಾಂಪಿಯನ್ಸ್ ಟ್ರೋಫಿಯ ನಾಕೌಟ್ ಪಂದ್ಯವನ್ನು ವೀಕ್ಷಿಸಲು ಆಹ್ವಾನಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರ ಈ ಭೇಟಿ ಎಲ್ಲರ ಗಮನ ಸೆಳೆದಿದೆ. ಇತ್ತೀಚಿನ ವರ್ಷಗಳಲ್ಲಿ ಎರಡೂ ದೇಶಗಳ ನಡುವಿನ ಕ್ರಿಕೆಟ್ ಸಂಬಂಧಗಳು ಸೀಮಿತವಾಗಿವೆ. 2012 ರಿಂದ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ. ಭಾರತ ಮತ್ತು ಪಾಕಿಸ್ತಾನ ಪಂದ್ಯವು ಐಸಿಸಿ ಅಥವಾ ಎಸಿಸಿ ಟೂರ್ನಿಗಳಲ್ಲಿ ಮಾತ್ರ ನಡೆಯುತ್ತದೆ. ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಕ್ರಿಕೆಟ್ ಸಂಬಂಧಗಳನ್ನು ಕಾಪಾಡಿಕೊಳ್ಳುವ ಪ್ರಯತ್ನಗಳನ್ನು ರಾಜೀವ್ ಶುಕ್ಲಾ ಅವರ ಉಪಸ್ಥಿತಿಯು ಎತ್ತಿ ತೋರಿಸುತ್ತದೆ ಎನ್ನಲಾಗುತ್ತಿದೆ.
ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ನ ಅತ್ಯಂತ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾಗಿದೆ. ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯವನ್ನು ಲಾಹೋರ್ ಆಯೋಜಿಸುತ್ತಿದೆ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ರಾಜೀವ್ ಶುಕ್ಲಾ ಸೇರಿದಂತೆ ಎಲ್ಲಾ ಭೇಟಿ ನೀಡುವ ಗಣ್ಯರಿಗೆ ಪಾಕಿಸ್ತಾನ ಸರ್ಕಾರ ಸಂಪೂರ್ಣ ಭದ್ರತಾ ವ್ಯವಸ್ಥೆಗಳನ್ನು ಭರವಸೆ ನೀಡಿದೆ.