
ಅಯ್ಯರ್ ನೇರವಾಗಿ ಆಡುವ 11ರ ಬಳಗಕ್ಕೆ ಪ್ರವೇಶಿಸುತ್ತಾರೆ
ಶ್ರೇಯಸ್ ಅಯ್ಯರ್ ಅವರು ಎನ್ಸಿಎನ ತರಬೇತಿಯಲ್ಲಿ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದರೆ ನೇರವಾಗಿ ಆಡುವ 11ರ ಬಳಗಕ್ಕೆ ಪ್ರವೇಶಿಸುತ್ತಾರೆ ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ.
"ಶ್ರೇಯಸ್ ಅಯ್ಯರ್ ಮೊದಲ ಪೂರ್ಣ ಪ್ರಮಾಣದ ತರಬೇತಿ ಅವಧಿಯಲ್ಲಿ ಹಲವು ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿದರು ಮತ್ತು ಗುರುವಾರ ಮತ್ತೆ ಬ್ಯಾಟ್ ಮಾಡಲಿದ್ದಾರೆ. ಐದು ದಿನಗಳ ಒತ್ತಡ ಸಹಿಸಿಕೊಳ್ಳಲು ಸಿದ್ಧ ಎಂದು ತಂಡದ ಮ್ಯಾನೇಜ್ಮೆಂಟ್ ಭಾವಿಸಿದರೆ, ಅಯ್ಯರ್ ತಕ್ಷಣವೇ ನೇರವಾಗಿ ತಂಡವನ್ನು ಕೂಡಿಕೊಳ್ಳಲಿದ್ದಾರೆ," ಎಂದು ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.

ಶ್ರೇಯಸ್ ಅಯ್ಯರ್ ವಾಪಸಾತಿಯಿಂದಾಗಿ ಸೂರ್ಯಕುಮಾರ್ ಸ್ಥಾನಕ್ಕೆ ಕುತ್ತು
ಒಂದು ಕಡೆ ಶ್ರೇಯಸ್ ಅಯ್ಯರ್ ಭಾರತ ತಂಡಕ್ಕೆ ಮರಳುತ್ತಿರುವುದು ಸಿಹಿ ಸುದ್ದಿಯಾದರೆ, ಮತ್ತೊಂದೆಡೆ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಸೂರ್ಯಕುಮಾರ್ ಯಾದವ್ಗೆ ಇದು ಕೆಟ್ಟ ಸುದ್ದಿಯಾಗಲಿದೆ.
ಸೂರ್ಯಕುಮಾರ್ ಯಾದವ್ ತನ್ನ ಮೊದಲ ಟೆಸ್ಟ್ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ ಎಂಟು ರನ್ಗಳಿಗೆ ಔಟಾಗಿದ್ದರು. ಇದೀಗ ಶ್ರೇಯಸ್ ಅಯ್ಯರ್ ವಾಪಸಾತಿಯಿಂದಾಗಿ ಸೂರ್ಯಕುಮಾರ್ ಸ್ಥಾನ ಬಿಟ್ಟುಕೊಡಬೇಕಾಗುತ್ತದೆ.

ಶ್ರೇಯಸ್ ಅಯ್ಯರ್ ಕೊಡುಗೆಯನ್ನು ತಂಡವು ಗೌರವಿಸುತ್ತದೆ
"ಗಾಯದಿಂದ ಚೇತರಿಸಿಕೊಂಡು ಆಡಲು ಸಿದ್ಧವಾಗಿರುವ ಮತ್ತು ಹಿಂದಿನ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಶ್ರೇಯಸ್ ಅಯ್ಯರ್ ಕೊಡುಗೆಯನ್ನು ತಂಡವು ಗೌರವಿಸುತ್ತದೆ," ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಶ್ರೇಯಸ್ ಅಯ್ಯರ್ ಕಳೆದ ಒಂದೂವರೆ ವರ್ಷಗಳಲ್ಲಿ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ಭಾರತದ ಅತ್ಯುತ್ತಮ ಬ್ಯಾಟರ್ಗಳಲ್ಲಿ ಒಬ್ಬರಾಗಿದ್ದು, ನವೆಂಬರ್ 2021ರಲ್ಲಿ ನ್ಯೂಜಿಲೆಂಡ್ ವಿರುದ್ಧ ಚೊಚ್ಚಲ ಟೆಸ್ಟ್ ಪದಾರ್ಪಣೆ ಮಾಡಿದಾಗಿನಿಂದ ತಂಡಕ್ಕೆ ರನ್ ಗಳಿಸುತ್ತಲೇ ಬಂದಿದ್ದಾರೆ. ಶ್ರೇಯಸ್ ಅಯ್ಯರ್ ಆಡಿದ 7 ಟೆಸ್ಟ್ ಪಂದ್ಯಗಳಲ್ಲಿ 56ರ ಸರಾಸರಿಯಲ್ಲಿ 624 ರನ್ ಗಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತದ ಪೂರ್ಣ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.


Click it and Unblock the Notifications
