
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ಗೆ ಕ್ಷಣಗಣನೆ ಆರಂಭವಾಗಿದೆ. ಮೆಲ್ಬರ್ನ್ ಅಂಗಳದಲ್ಲಿ ನಡೆಯುವ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ ಅಲಭ್ಯತೆಯಲ್ಲಿ ಅಜಿಂಕ್ಯ ರಹಾನೆ ತಂಡದ ನಾಯಕತ್ವ ವಹಿಸಿಕೊಂಡಿದ್ದು ಮೆಲ್ಬರ್ನ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗೆ ಟೀಮ್ ಇಂಡಿಯಾ ಇಳಿಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ನಾಲ್ಕು ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. ನಾಯಕ ವಿರಾಟ್ ಕೊಹ್ಲಿ ಪಿತೃತ್ವದ ರಜೆಯಲ್ಲಿ ಸರಣಿಯಿಂದ ಹೊರಗಿಳಿದಿದ್ದರೆ ಮೊಹಮ್ಮದ್ ಶಮಿ ಮೊದಲ ಟೆಸ್ಟ್ ಪಂದ್ಯದಲ್ಲಿ ಗಾಯಗೊಂಡಿದ್ದು ಸರಣಿಯಿಂದಲೇ ಹೊರಬಿದ್ದಿದ್ದಾರೆ. ಈ ಇಬ್ಬರ ಸ್ಥಾನಕ್ಕೆ ಇಬ್ಬರು ಆಟಗಾರರು ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆಯನ್ನು ಮಾಡುವ ಅವಕಾಶ ಪಡೆದಿದ್ದಾರೆ.
ಅತ್ಯುತ್ತಮ ಫಾರ್ಮ್ನಲ್ಲಿರುವ ಶುಭ್ಮನ್ ಗಿಲ್ ಟೀಮ್ ಇಂಡಿಯಾದ ಟೆಸ್ಟ್ ತಂಡದಲ್ಲಿ ಆಡಲು ಅವಕಾಶವನ್ನು ಪಡೆದಿದ್ದು ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ. ಮೊಹಮ್ಮದ್ ಶಮಿ ಸ್ಥಾನಕ್ಕೆ ವೇಗಿ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದು ನಾಳಿನ ಪಂದ್ಯ ಸಿರಾಜ್ಗೂ ಚೊಚ್ಚಲ ಪಂದ್ಯವಾಗಿರಲಿದೆ.
ನಾಯಕ ವಿರಾಟ್ ಕೊಹ್ಲಿ ಅಲಭ್ಯತೆಯಲ್ಲಿ ಕೆಎಲ್ ರಾಹುಲ್ಗೆ ಅವಕಾಶ ದೊರೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಎರಡನೇ ಟೆಸ್ಟ್ ಪಂದ್ಯದಲ್ಲೂ ರಾಹುಲ್ ಕಣಕ್ಕಿಳಿಯುವುದಿಲ್ಲ. ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನದ ಹೊರತಾಗಿಯೂ ಹನುಮ ವಿಹಾರಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವಿಕೆಟ್ ಕೀಪರ್ ವೃದ್ಧಿಮಾನ್ ಸಾಹ ಕೂಡ ತಂಡದಿಂದ ಹೊರಗುಳಿದಿದ್ದು ರಿಷಭ್ ಪಂತ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲಿದ್ದಾರೆ.
ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಆರಂಭಿಕನಾಗಿ ವೈಫಲ್ಯವನ್ನು ಅನುಭವಿಸಿದ್ದು ಸಾಕಷ್ಟು ಟೀಕೆಗೆ ಕಾರಣವಾಗಿತ್ತು. ಎರಡನೇ ಟೆಸ್ಟ್ ಪಂದ್ಯದಲ್ಲಿ ಶಾ ಆಡುವ ಬಳಗದಿಂದ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಮಯಾಂಕ್ ಅಗರ್ವಾಲ್ಗೆ ಶುಭ್ಮನ್ ಗಿಲ್ ಆರಂಭಿಕನಾಗಿ ಸಾಥ್ ನೀಡುವ ಸಾಧ್ಯತೆಯಿದೆ. ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಸ್ಥಾನವನ್ನು ಆಡುವ ಬಳಗಕ್ಕೆ ಸೇರಿಕೊಂಡಿದ್ದು ಆರ್ ಅಶ್ವಿನ್ ಜೊತೆಗೆ ಜಡೇಜಾ ಸ್ಪಿನ್ ಮೋಡಿ ನಡೆಯುವ ನಿರೀಕ್ಷೆಯಿದೆ.
ಎರಡನೇ ಟೆಸ್ಟ್ ಪಂದ್ಯದ ಆಡುವ ಬಳಗ ಹೀಗಿದೆ:
ಅಜಿಂಕ್ಯ ರಹಾನೆ(ನಾಯಕ), ಮಯಾಂಕ್ ಅಗರ್ವಾಲ್, ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್