ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗಿದೆ. ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಬಾರ್ಡರ್- ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿಯನ್ನು ಭಾರತ ಆಡಲಿದೆ. ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸೋಲಿನ ಬಳಿಕ ತವರಿನಲ್ಲಿ ಭಾರತ ಮುಖಭಂಗ ಅನುಭವಿಸಿದೆ. ಇದಾದ ನಂತರ ಟೀಮ್ ಇಂಡಿಯಾಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯೂಟಿಸಿ) ಫೈನಲ್ ತಲುಪುವ ಹಾದಿ ಕಠಿಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಮ್ ಇಂಡಿಯಾ ಜೊತೆಗೆ ನಾಯಕ ರೋಹಿತ್ ಶರ್ಮಾ ಹೋಗುವುದು ನಿರ್ಧಾರವಾಗಿರಲಿಲ್ಲ.
ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೆ ಮಗುವಿಗೆ ಜನ್ಮ ನೀಡಲಿರುವ ಕಾರಣ ಅವರು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯಗಳಿಂದ ವಿಶ್ರಾಂತಿ ಪಡೆಯಲಿದ್ದು, ರೋಹಿತ್ ತನ್ನ ಹೆಂಡತಿ ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಬಯಸಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಬಿಸಿಸಿಐ ರೋಹಿತ್ ಮತ್ತು ಕೋಚ್ ಗೌತಮ್ ಗಂಭೀರ್ ಜೊತೆ ಒಂದು ಗಂಟೆ ಸಭೆ ನಡೆಸಿದೆ. ಈ ಸಭೆಯ ನಂತರ, ಆಸ್ಟ್ರೇಲಿಯಾ ಪ್ರವಾಸದ ಎಲ್ಲಾ ಪಂದ್ಯಗಳಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾದೊಂದಿಗೆ ಇರಲಿದ್ದಾರೆ ಎಂಬ ಬಿಗ್ ಅಪ್ಡೇಟ್ ಹೊರ ಬಿದ್ದಿದೆ.

ವರದಿಗಳ ಪ್ರಕಾರ, ಇಂದು (ಭಾನುವಾರ) ರೋಹಿತ್ ಟೀಮ್ ಇಂಡಿಯಾ ಜೊತೆ ಆಸ್ಟ್ರೇಲಿಯಾ ಪ್ರವಾಸ ಮಾಡಲಿದ್ದಾರೆ. ಪರ್ತ್ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ಗೆ ಅವರು ನಾಯಕರಾಗುತ್ತಾರೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ರೋಹಿತ್ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಹಾರಲಿದ್ದಾರೆ. ಇದರ ಬೆನ್ನಲ್ಲೇ ಅವರು ಮೊದಲ ಟೆಸ್ಟ್ನಲ್ಲಿ ಆಡುವ ಸಾಧ್ಯತೆ ಇದೆ.
ನ್ಯೂಜಿಲೆಂಡ್ ವಿರುದ್ಧ ವೈಟ್ವಾಶ್ ಆದ ನಂತರ ಭಾರತ ತಂಡದ ಮೇಲೆ ಡಬ್ಲ್ಲೂಟಿಸಿ ಫೈನಲ್ಗೆ ಅರ್ಹತೆ ಪಡೆಯುವ ಒತ್ತಡವಿದೆ. ಇಂತಹ ಪರಿಸ್ಥಿತಿಯಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿಯಂತಹ ಮಹತ್ವದ ಟೆಸ್ಟ್ ಸರಣಿಯ ಆರಂಭದಿಂದಲೂ ಭಾರತ ತಂಡಕ್ಕೆ ರೋಹಿತ್ ಅಗತ್ಯವಿದೆ. ಈ ಕುರಿತು ಬಿಸಿಸಿಐ ರೋಹಿತ್ ಶರ್ಮಾ ಆವರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದೆ. ಇದಾದ ನಂತರ ರೋಹಿತ್ ಭಾರತ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಹೋಗಲು ಒಪ್ಪಿಕೊಂಡಿದ್ದಾರೆ.
ಕಿವೀಸ್ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಕುರಿತು ನಡೆಸಿದ ಸಭೆಯಲ್ಲಿ ರೋಹಿತ್ ಶರ್ಮಾ, ಕೋಚ್ ಗೌತಮ್ ಗಂಭೀರ್ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಕೂಡ ಉಪಸ್ಥಿತರಿದ್ದರು. ಈ ಸಭೆಯಲ್ಲಿ ಕೋಚ್ ಗಂಭೀರ್ಗೆ ಗಡುವು ನಿಗದಿಪಡಿಸಲಾಗಿದೆ. ಒಂದು ವೇಳೆ ಬಾರ್ಡರ್-ಗವಾಸ್ಕರ್ ಟ್ರೋಫಿ ನಿರೀಕ್ಷೆಯಂತೆ ನಡೆಯದಿದ್ದರೆ, ಬಿಸಿಸಿಐ ಗಂಭೀರ್ ಅವರನ್ನು ಟೆಸ್ಟ್ ಕ್ರಿಕೆಟ್ನಿಂದ ತೆಗೆದುಹಾಕಬಹುದು.