ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಪಂದ್ಯ ಇಂದು ನಡೆಯಲಿದೆ. ಈ ಮಹಾ ಕ್ರಿಕೆಟ್ ಕದನಕ್ಕೆ ಆರಂಭವಾಗಲು ಇನ್ನು ಕೆಲವೇ ಗಂಟೆಗಳು ಮಾತ್ರ ಉಳಿದಿದೆ. ಆದರೆ, ಈ ಮಾಡು ಇಲ್ಲವೇ ಮಡಿ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ದೊಡ್ಡ ಹಿನ್ನಡೆ ಅನುಭವಿಸಿದೆ. ಭಾರತ ವಿರುದ್ಧ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಅಜಮ್ ಪ್ರಾಕ್ಟೀಸ್ನಿಂದ ದೂರ ಉಳಿದಿದ್ದಾರೆ.
ಭಾನುವಾರ ದುಬೈ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ವಿರುದ್ಧದ ಪಂದ್ಯಕ್ಕೆ ಬಾಬರ್ ಅಜಮ್
ಆಡುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ 60 ರನ್ಗಳಿಂದ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಬಾಬರ್ 94 ಎಸೆತಗಳಲ್ಲಿ 64 ರನ್ ಗಳಿಸಿದ್ದಕ್ಕಾಗಿ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ಕರಾಚಿಯಲ್ಲಿ 320 ರನ್ಗಳ ಗುರಿಯನ್ನು ಬೆನ್ನಟ್ಟುವಾಗ ವೇಗವಾಗಿ ರನ್ ಗಳಿಸಲು ವಿಫಲರಾದ ಕಾರಣಕ್ಕಾಗಿ ಅವರನ್ನು ಟೀಕಿಸಲಾಯಿತು.

ವರದಿಗಳ ಪ್ರಕಾರ, ಶನಿವಾರ ಸಂಜೆ ಅಭ್ಯಾಸ ಅವಧಿಯಲ್ಲಿ ಬಾಬರ್ ಅಜಮ್ ಕಾಣಿಸಿಕೊಂಡಿಲ್ಲ. ಇದಾದ ನಂತರ ಅವರನ್ನು ಭಾರತದ ವಿರುದ್ಧದ ಪಂದ್ಯಕ್ಕೆ ಆಯ್ಕೆ ಮಾಡಲಾಗುವುದಿಲ್ಲ ಎಂಬ ಊಹಾಪೋಹಗಳಿವೆ. ಈ ಅಭ್ಯಾಸ ಅವಧಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ನಖ್ವಿ ಕೂಡ ಉಪಸ್ಥಿತರಿದ್ದರು.
ಅಭ್ಯಾಸದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪಾಕಿಸ್ತಾನ ತಂಡದ ಮಧ್ಯಂತರ ಹೆಡ್ಕೋಚ್ ಆಕಿಬ್ ಜಾವೇದ್, ಅಜಮ್ ಅನುಪಸ್ಥಿತಿಗೆ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಲಿಲ್ಲ ಮಾಜಿ ನಾಯಕ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
ಶನಿವಾರ ರಾತ್ರಿ ನಖ್ವಿ ದುಬೈ ಸ್ಟೇಡಿಯಂನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಭೇಟಿಯಾಗಿದ್ದಾರೆ. ಟೀಕಾಕಾರರ ಬಾಯಿ ಮುಚ್ಚಿಸಲು 'ಯಾವುದೇ ಬೆಲೆ ತೆತ್ತಾದರೂ' ಭಾನುವಾರ ಭಾರತ ವಿರುದ್ಧದ ನಿರ್ಣಾಯಕ ಪಂದ್ಯವನ್ನು ಗೆಲ್ಲುವಂತೆ ಕೈ ಮುಗಿದು ಮನವಿ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ. ಈ ಪಂದ್ಯದಲ್ಲಿ ಪಾಕಿಸ್ತಾನ ಸೋತರೆ ಟೂರ್ನಿಯಿಂದ ಹೊರಬೀಳಲಿದೆ.
ಪಾಕಿಸ್ತಾನ: ಬಾಬರ್ ಅಜಮ್, ಇಮಾಮ್ ಉಲ್ ಹಕ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಸಲ್ಮಾನ್ ಅಲಿ ಆಘಾ, ಮೊಹಮ್ಮದ್ ರಿಜ್ವಾನ್ (ನಾಯಕ), ಅಬ್ರಾರ್ ಅಹ್ಮದ್, ಹರಿಸ್ ರೌಫ್, ನಸೀಮ್ ಶಾ, ಶಾಹೀನ್ ಅಫ್ರಿದಿ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ ಮತ್ತು ಹರ್ಷಿತ್ ರಾಣಾ.