ಟಿ20 ವಿಶ್ವಕಪ್ನಲ್ಲಿ ಕೊಹ್ಲಿ, ಶಾಸ್ತ್ರಿಗೆ ಎಲ್ಲರಿಗಿಂತ ಸಿಎಸ್ಕೆಯ ಈ ಆಟಗಾರನೇ ಫೇವರಿಟ್ ಎಂದ ನೆಹ್ರಾ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಚರಣ ಸದ್ಯ ಯುಎಇಯಲ್ಲಿ ನಡೆಯುತ್ತಿದ್ದು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅತ್ಯದ್ಭುತ ಪ್ರದರ್ಶನವನ್ನು ನೀಡುವುದರ ಮೂಲಕ ಅಂಕಪಟ್ಟಿಯಲ್ಲಿ ಪ್ರಸ್ತುತ ಅಗ್ರಸ್ಥಾನವನ್ನು ಪಡೆದುಕೊಂಡಿದೆ. 10 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ 8 ಪಂದ್ಯಗಳಲ್ಲಿ ಜಯ ಗಳಿಸಿದ್ದು 16 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನದಲ್ಲಿದೆ.
ಇನ್ನುಳಿದಂತೆ ಡೆಲ್ಲಿ ಕ್ಯಾಪಿಟಲ್ಸ್ ದ್ವಿತೀಯ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಹೀಗೆ ಯುಎಇಯಲ್ಲಿ ಮುಂದುವರಿಯುತ್ತಿರುವ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ದಿನೇದಿನೇ ಕುತೂಹಲವನ್ನು ಹೆಚ್ಚಿಸುತ್ತಿದ್ದು, ಇದರ ನಡುವೆಯೇ ಮುಂಬರಲಿರುವ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ಚರ್ಚೆಗೀಡಾಗಿದೆ.
ಹೌದು, ಮುಂಬರಲಿರುವ ಅಕ್ಟೋಬರ್ 17ರಿಂದ ನವೆಂಬರ್ 14ರವರೆಗೆ ಇದೇ ಯುಎಇಯಲ್ಲಿ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ನಡೆಯಲಿದ್ದು, ಸುಮಾರು 5 ವರ್ಷಗಳ ಅಂತರದ ನಂತರ ಈ ಟೂರ್ನಿ ಮರಳಿ ಬಂದಿರುವುದು ಸಾಕಷ್ಟು ದೊಡ್ಡ ಮಟ್ಟದ ಕುತೂಹಲ ಮತ್ತು ನಿರೀಕ್ಷೆಯನ್ನು ಹುಟ್ಟುಹಾಕಿದೆ. ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಚರಣ ಆರಂಭವಾಗುವ ಮುನ್ನ ಬಿಸಿಸಿಐ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿತ್ತು. ಹೀಗೆ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಬಹುತೇಕ ಕ್ರಿಕೆಟಿಗರು ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಭಾಗವಹಿಸಿದ್ದು ಅವರ ಕುರಿತಾಗಿಯೂ ಕೂಡ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರು ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ತೋರಿರುವ ಪ್ರದರ್ಶನದ ಕುರಿತು ಹಲವಾರು ಮಾಜಿ ಕ್ರಿಕೆಟಿಗರು ಮಾತನಾಡಿದ್ದು ಭಾರತದ ಮಾಜಿ ಕ್ರಿಕೆಟಿಗ ಆಶಿಶ್ ನೆಹ್ರಾ ಕೂಡ ಈ ಕೆಳಕಂಡಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಕಳೆದೆರಡು ವರ್ಷಗಳಲ್ಲಿ ರವೀಂದ್ರ ಜಡೇಜಾ ಅತ್ಯುತ್ತಮ ಪ್ರದರ್ಶನ
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ರವೀಂದ್ರ ಜಡೇಜಾ ಕುರಿತಾಗಿ ವಿಶೇಷವಾಗಿ ಮಾತನಾಡಿರುವ ಆಶಿಶ್ ನೆಹ್ರಾ ಕಳೆದೆರಡು ವರ್ಷಗಳಲ್ಲಿ ರವೀಂದ್ರ ಜಡೇಜಾ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಾರೆ ಎಂದು ಹೊಗಳಿದ್ದಾರೆ. 'ಇತ್ತೀಚೆಗಷ್ಟೇ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ರವೀಂದ್ರ ಜಡೇಜಾ ಬೌಲಿಂಗ್ನಲ್ಲಿ 4 ಓವರ್ ಮಾಡಿ ಕೇವಲ 21 ರನ್ ನೀಡಿ ಪ್ರಮುಖವಾದ ಒಂದು ವಿಕೆಟ್ ಪಡೆದರು. ಬ್ಯಾಟಿಂಗ್ನಲ್ಲೂ ಅಬ್ಬರದ ಆಟವನ್ನು ಆಡಿ ಮಿಂಚಿದ ರವೀಂದ್ರ ಜಡೇಜಾ ಕಳೆದೆರಡು ವರ್ಷಗಳಿಂದ ತಮ್ಮ ತಂಡಕ್ಕೆ ಇದೇ ರೀತಿಯಾಗಿ ಆಸರೆಯಾಗುತ್ತಿದ್ದಾರೆ' ಎಂದು ಆಶೀಶ್ ನೆಹ್ರಾ ರವೀಂದ್ರ ಜಡೇಜಾ ಪ್ರದರ್ಶನವನ್ನು ಕೊಂಡಾಡಿದ್ದಾರೆ.

ಕೊಹ್ಲಿ, ಧೋನಿ ಮತ್ತು ರವಿಶಾಸ್ತ್ರಿ ತಲೆಯಲ್ಲಿ ಮೊದಲು ಬರುವ ಹೆಸರೇ ಜಡೇಜಾ ಅವರದ್ದು
ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ವರುಣ್ ಚಕ್ರವರ್ತಿ, ರವಿಚಂದ್ರನ್ ಅಶ್ವಿನ್ ಮತ್ತು ರಾಹುಲ್ ಚಹರ್ ರೀತಿಯ ಸ್ಪಿನ್ ಬೌಲರ್ಗಳು ಇದ್ದರೂ ಸಹ ತಂಡದ ನಾಯಕ ವಿರಾಟ್ ಕೊಹ್ಲಿ, ಮಾರ್ಗದರ್ಶಕ ಮಹೇಂದ್ರ ಸಿಂಗ್ ಧೋನಿ ಮತ್ತು ತರಬೇತುದಾರ ರವಿಶಾಸ್ತ್ರಿ ತಲೆಯಲ್ಲಿ ಅವರೆಲ್ಲರಿಗಿಂತ ಮೊದಲು ಬರುವ ಹೆಸರೇ ರವೀಂದ್ರ ಜಡೇಜಾ ಅವರದ್ದು ಎಂದು ಆಶಿಶ್ ನೆಹ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡ
ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications