ಜುಲೈ 19 ಶುಕ್ರವಾರ, ಮುಂಬರುವ ಶ್ರೀಲಂಕಾ ವಿರುದ್ಧದ 3 ಟಿ20 ಮತ್ತು ಅಷ್ಟೇ ಸಂಖ್ಯೆಯ ಏಕದಿನ ಪಂದ್ಯಗಳ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡವನ್ನು ಪ್ರಕಟಿಸಿದೆ. ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟವಾದ ನಂತರ ಹಲವು ಚರ್ಚೆಗಳು ಆರಂಭವಾಗಿವೆ.
ವಿಕೆಟ್ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ಸ್ಫೋಟಕ ಆರಂಭಿಕ ಅಭಿಷೇಕ್ ಶರ್ಮಾ ಅವರನ್ನು ಆಯ್ಕೆ ಮಾಡದ ಕಾರಣ ಕ್ರಿಕೆಟ್ ಅಭಿಮಾನಿಗಳು ತೀವ್ರ ಕೋಪಗೊಂಡಿದ್ದಾರೆ. ಸ್ಯಾಮ್ಸನ್ ಮತ್ತು ಅಭಿಷೇಕ್ ಇಬ್ಬರಿಗೂ ಏಕದಿನ ಮತ್ತು ಟಿ20 ತಂಡಗಳಲ್ಲಿ ಅವಕಾಶ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು.

ಆದರೆ ಆಶ್ಚರ್ಯಕರವಾಗಿ ಈ ಇಬ್ಬರು ತಂಡದಿಂದ ಹೊರಗುಳಿದಿದ್ದಾರೆ. ಟಿ20 ತಂಡದಲ್ಲಿ ಮಾತ್ರ ಸಂಜು ಅವಕಾಶ ಪಡೆದಿದ್ದಾರೆ.
ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧ ಸ್ಯಾಮ್ಸನ್ ಶತಕ ಸಿಡಿಸಿದ್ದರು. ಇದಾದ ಬಳಿಕ ಸಂಜು ಟೀಮ್ ಇಂಡಿಯಾ ಒಂದೇ ಒಂದು ಏಕದಿನ ಪಂದ್ಯಕ್ಕೂ ಆಯ್ಕೆಯಾಗಲಿಲ್ಲ.
ಮತ್ತೊಂದೆಡೆ, ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಅಭಿಷೇಕ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನ ಎಲ್ಲರ ಗಮನ ಸೆಳೆದಿತ್ತು. ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾದರೂ, ತನ್ನ ಎರಡನೇ ಪಂದ್ಯದಲ್ಲಿ ಶತಕ ಗಳಿಸಿ ಸಂಭ್ರಮಿಸಿದ್ದರು. ಇದರ ಹೊರತಾಗಿಯೂ ಅಭಿಷೇಕ್ ಅವರಿಗೆ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.
ಅದ್ಭುತ ಪ್ರತಿಭೆಯುಳ್ಳ ಸ್ಯಾಮ್ಸನ್ ಮತ್ತು ಅಭಿಷೇಕ್ ಅವರನ್ನು ಶ್ರೀಲಂಕಾ ಪ್ರವಾಸಕ್ಕೆ ಆಯ್ಕೆ ಮಾಡದ ಕಾರಣ, ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ಶಶಿ ತರೂರ್ ಬಿಸಿಸಿಐ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದು, ತಂಡದ ಆಯ್ಕೆಯನ್ನು ಟೀಕಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ (ಎಕ್ಸ್) ಮಾಡಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, ' ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ ತಂಡದ ಆಯ್ಕೆ ಮಾಡಿರುವುದು ಕುತೂಹಲಕಾರಿ ಆಗಿದೆ. ತಮ್ಮ ಕೊನೆಯ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ಸಂಜು ಸ್ಯಾಮ್ಸನ್ ಏಕದಿನ ತಂಡಕ್ಕೆ ಆಯ್ಕೆಯಾಗಿಲ್ಲ.
ಇದೇ ವೇಳೆ ಜಿಂಬಾಬ್ವೆ ವಿರುದ್ಧ ಟಿ20 ಸರಣಿಯಲ್ಲಿ ಶತಕ ಬಾರಿಸಿದ ಅಭಿಷೇಕ್ ಶರ್ಮಾ ಕೂಟ ಆಯ್ಕೆಯಾಗಿಲ್ಲ. ಭಾರತದ ಜೆರ್ಸಿಯಲ್ಲಿನ ಯಶಸ್ಸಿನ ಬಣ್ಣವು ಆಯ್ಕೆದಾರರಿಗೆ ತುಂಬಾ ಮುಖ್ಯವಾಗಿದೆ. ಆದರೂ ತಂಡಕ್ಕೆ ಶುಭ ಹಾರೈಕೆಗಳು ಎಂದು ಬಿಸಿಸಿಐ ವಿರುದ್ಧ ಕಿಡಿಕಾರಿದ್ದಾರೆ.
ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.