ಸೋಮವಾರ, ಏಪ್ರಿಲ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು.
ಈ ಮೂಲಕ ಸಿಎಸ್ಕೆ ತಂಡ ತಮ್ಮ ತವರಿನ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿ ಗೆಲುವಿನ ಟ್ರ್ಯಾಕ್ಗೆ ಮರಳಿದರೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ರಸಕ್ತ ಋತುವಿನಲ್ಲಿ ಮೊದಲ ಸೋಲು ಕಂಡಿತು.

ಅಲ್ಲದೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ ಐದು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಎರಡು ಸೋಲಿನೊಂದಿಗೆ 2024ರ ಐಪಿಎಲ್ನ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಕೆಕೆಆರ್ ತಂಡವು ಎರಡನೇ ಸ್ಥಾನದಲ್ಲಿ ಮುಂದುವರೆದಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, ಯಾವುದೇ ಬ್ಯಾಟರ್ಗಳ ಅರ್ಧಶತಕವಿಲ್ಲದೆ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತು.
138 ರನ್ಗಳ ಸಾಧಾರಣ ಗುರಿ ಪಡೆದ ಸಿಎಸ್ಕೆ ತಂಡವು ನಾಯಕ ರುತುರಾಜ್ ಗಾಯಕ್ವಾಡ್ ಅವರ ಅಮೋಘ ಅರ್ಧಶತಕದ ಸಹಾಯದಿಂದ 17.4 ಓವರ್ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿತು.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ರಚಿನ್ ರವೀಂದ್ರ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್ಗೆ 3.2 ಓವರ್ಗಳಲ್ಲಿ 27 ರನ್ಗಳ ಜೊತೆಯಾಟ ನೀಡಿತು. ಈ ವೇಳೆ ರಚಿನ್ ರವೀಂದ್ರ 8 ಎಸೆತಗಳಲ್ಲಿ 3 ಬೌಂಡರಿ ಸಮೇತ 15 ರನ್ ಗಳಿಸಿ ಔಟಾದರು.
ನಂತರ ಬಂದ ಡೆರಿಲ್ ಮಿಚೆಲ್ 19 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಶಿವಂ ದುಬೆ ಮತ್ತೊಮ್ಮೆ ಸ್ಫೋಟಕ ಬ್ಯಾಟಿಂಗ್ ಮಾಡಿ 18 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ಗಳ ಸಮೇತ 28 ರನ್ ಗಳಿಸಿದರು.
ನಾಯಕ ರುತುರಾಜ್ ಗಾಯಕ್ವಾಡ್ ಕೊನೆಯವರೆಗೂ ಕ್ರೀಸ್ನಲ್ಲಿದ್ದು ಸಿಎಸ್ಕೆ ತಂಡವನ್ನು ಗೆಲ್ಲಿಸಿದರು ಮತ್ತು 58 ಎಸೆತಗಳಲ್ಲಿ 9 ಬೌಂಡರಿಗಳ ಮೂಲಕ 67 ರನ್ ಬಾರಿಸಿ ಅಜೇಯರಾಗುಳಿದರು. ಕೊನೆಯಲ್ಲಿ ಬಂದ ಎಂಎಸ್ ಧೋನಿ ಅಜೇಯ 1 ರನ್ ಗಳಿಸಿದರು.

ಬೌಲಿಂಗ್ನಲ್ಲಿ ವೈಭವ್ ಅರೋರಾ 2 ವಿಕೆಟ್ ಪಡೆದರೆ, ಸುನಿಲ್ ನರೈನ್ 1 ವಿಕೆಟ್ ತಮ್ಮದಾಗಿಸಿಕೊಂಡರು ಮತ್ತು ಉಳಿದ ಬೌಲರ್ಗಳು ವಿಕೆಟ್ ರಹಿತರಾದರು.
ಇದಕ್ಕೂ ಮುನ್ನ ಕೆಕೆಆರ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಫಿಲ್ ಸಾಲ್ಟ್ ಮತ್ತು ಸುನಿಲ್ ನರೈನ್ ಉತ್ತಮ ಆರಂಭ ನೀಡಲಿಲ್ಲ. ಫಿಲ್ ಸಾಲ್ಟ್ ಮೊದಲ ಓವರ್ನ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದರು. ಸುನಿಲ್ ನರೈನ್ 20 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ಗಳ ಸಮೇತ 27 ರನ್ ಗಳಿಸಿ ಔಟಾದರು.
ಬಳಿಕ ಬಂದ ಆಂಗ್ಕ್ರಿಶ್ ರಘುವಂಶಿ 18 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 24 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 32 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 34 ರನ್ ಗಳಿಸಿದರು.

ಉಳಿದಂತೆ ವೆಂಕಟೇಶ್ ಅಯ್ಯರ್ 3 ರನ್, ರಮಣದೀಪ್ ಸಿಂಗ್ 13 ರನ್, ರಿಂಕು ಸಿಂಗ್ 9 ರನ್, ಆಂಡ್ರೆ ರಸೆಲ್ 10 ರನ್, ಅನುಕೂಲ್ ರಾಯ್ 3 ರನ್ ಮಾತ್ರ ಗಳಿಸಿ ತಂಡದ ಮೊತ್ತವನ್ನು 130ರ ಗಡಿ ದಾಟಿಸಿದರು.
ಇನ್ನು ಬೌಲಿಂಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರವೀಂದ್ರ ಜಡೇಜಾ 4 ಓವರ್ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ತುಷಾರ್ ದೇಶಪಾಂಡೆ 4 ಓವರ್ಗಳಲ್ಲಿ 33 ರನ್ ನೀಡಿ 3 ವಿಕೆಟ್ ಪಡೆದರು. ಮುಸ್ತಾಫಿಜುರ್ ರಹಮಾನ್ 4 ಓವರ್ಗಳಲ್ಲಿ 22 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಉಳಿದಂತೆ ಮಹೀಶ್ ತೀಕ್ಷಣ ಒಂದು ವಿಕೆಟ್ ಪಡೆದರು.