
ಅಪಘಾತಕ್ಕೆ ಒಳಗಾದ ನಂತರ ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಸದ್ಯ ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಬಿಸಿಸಿಐ ರಿಷಬ್ ಪಂತ್ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ.
ಪಂತ್ ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಪಂತ್ರನ್ನು ನೋಡಲು ಅಭಿಮಾನಿಗಳು ಮತ್ತು ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದೇ ಈಗ ತಲೆನೋವಾಗಿ ಪರಿಣಮಿಸಿದೆ.
ರಿಷಬ್ ಪಂತ್ಗೆ ಸೋಂಕು ತಗಲುವ ಭಯ ಎದುರಾಗಿದ್ದು, ಅವರನ್ನು ಐಸಿಯುನಿಂದ ವಿಶೇಷ ಖಾಸಗಿ ವಾರ್ಡ್ಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ಸೋಮವಾರ ತಿಳಿಸಿದ್ದಾರೆ. ಬಿಸಿಸಿಐ ಸೂಚನೆಯಂತೆ ಡಿಸಿಸಿಎ ಆಸ್ಪತ್ರೆಯಲ್ಲಿ ಪಂತ್ರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ.
"ಸೋಂಕಿನ ಭಯದಿಂದಾಗಿ, ಅವರನ್ನು ಖಾಸಗಿ ವಾರ್ಡ್ಗೆ ಸ್ಥಳಾಂತರಿಸಲು ಅವರ ಕುಟುಂಬ ಮತ್ತು ಆಸ್ಪತ್ರೆಯ ಆಡಳಿತಕ್ಕೆ ತಿಳಿಸಿದ್ದೇವೆ. ರಿಷಬ್ ಪಂತ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ" ಎಂದು ಶರ್ಮಾ ಎಎನ್ಐಗೆ ತಿಳಿಸಿದ್ದಾರೆ.
ಡಿಸೆಂಬರ್ 30ರಂದು ರೂರ್ಕಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ರಿಷಬ್ ಪಂತ್ ಗಾಯಗೊಂಡಿದ್ದರು. ರಿಷಬ್ ಪಂತ್ ಚಿಕಿತ್ಸೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ನೀಡಲಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಆಸ್ಪತ್ರೆಗೆ ಹೆಚ್ಚಾದ ಸಂದರ್ಶಕರು
ಪಂತ್ ಚಿಕಿತ್ಸೆ ಪಡೆಯುತ್ತಿರುವ ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಗೆ ಭೇಟಿ ನೀಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಐಸಿಯುನಲ್ಲಿರುವ ರಿಷಬ್ ಪಂತ್ ಸೋಂಕಿಗೆ ಒಳಗಾಗುವ ಭಯವಿದೆ ಎಂದು ಡಿಡಿಸಿಎ ನಿರ್ದೇಶದ ಶ್ಯಾಮ್ ಶರ್ಮಾ ಆತಂಕ ವ್ಯಕ್ತಪಡಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಅವರನ್ನು ವಿಶೇಷ ವಾರ್ಡ್ಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. "ಪಂತ್ರನ್ನು ನೋಡಲು ಬರುವ ಸಂದರ್ಶಕರಿಂದ ಅವರಿಗೆ ಸೋಂಕು ತಗುಲುವ ಅಪಾಯವಿದೆ. ಪಂತ್ರನ್ನು ಭೇಟಿ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ, ಯಾರೂ ಕೂಡ ಅವರನ್ನು ಭೇಟಿ ಮಾಡಲು ಆಸ್ಪತ್ರೆಗೆ ಬರಬಾರದು" ಎಂದು ಶರ್ಮಾ ಮನವಿ ಮಾಡಿದ್ದಾರೆ.
"ರಿಷಬ್ ಪಂತ್ ಆರೋಗ್ಯ ಸ್ಥಿರವಾಗಿದೆ. ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಬಿಸಿಸಿಐ ವೈದ್ಯರು ಇಲ್ಲಿನ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಜಯ್ ಶಾ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ರಿಷಬ್ ಪಂತ್ಗೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗುತ್ತದೆ. ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂದು ಪಂತ್ ಹೇಳಿದರು," ಎಂದು ಶ್ಯಾಮ್ ಮಾಹಿತಿ ನೀಡಿದ್ದಾರೆ.