
ದೇಶದಲ್ಲಿ ಕೊರೊನಾವೈರಸ್ ಎರಡನೇ ಅಲೆ ಜೋರಾಗಿದ್ದು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದರ ನಡುವೆ ಆಕ್ಸಿಜನ್ ಕೊರತೆ ದೇಶದಲ್ಲಿ ತಲೆ ಎತ್ತಿದ್ದು ಸಾವಿನ ಸಂಖ್ಯೆಯಲ್ಲಿಯೂ ಸಹ ಗಣನೀಯ ಏರಿಕೆಯಾಗುತ್ತಿದೆ. ಇಷ್ಟೆಲ್ಲಾ ಇದ್ದರೂ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಇಷ್ಟು ದಿನಗಳ ಕಾಲ ಯಾವುದೇ ಅಡಚಣೆಯಿಲ್ಲದೆ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗಿತ್ತು. ಆದರೆ ಇತ್ತೀಚಿನ ಕೆಲ ದಿನಗಳಲ್ಲಿ ವಿವಿಧ ತಂಡಗಳ ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಸಿಸಿಐ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ರದ್ದು ಮಾಡುವ ನಿರ್ಧಾರವನ್ನು ಕೈಗೊಂಡಿದೆ.
ಬಿಸಿಸಿಐ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಈ ವರ್ಷ ಭಾರತದಲ್ಲಿ ನಡೆಯಬೇಕಿರುವ ಟಿ ಟ್ವೆಂಟಿ ವಿಶ್ವಕಪ್ ಕುರಿತು ಚರ್ಚೆಗಳು ಆರಂಭವಾಗಿವೆ. ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ನಡೆಸಿದರೂ ಆಟಗಾರರಿಗೆ ಕೊರೊನ ಸೋಂಕು ತಗುಲಿತು. ಇಷ್ಟು ಕಠಿಣ ಸನ್ನಿವೇಶ ಇರುವಾಗ ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಆಯೋಜಿಸುವುದು ಸರಿಯಲ್ಲ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ.
ಭಾರತದಲ್ಲಿ ಒಂದುವೇಳೆ ಕೊರೊನಾವೈರಸ್ ಹರಡುವಿಕೆ ಹೆಚ್ಚಾದರೆ ಯುಎಇಯಲ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ನಡೆಸಬಹುದು ಎಂದು ಈ ಹಿಂದೆಯೇ ನಿಶ್ಚಯಿಸಲಾಗಿದೆ. ಆದರೆ ಇನ್ನೂ ಕೆಲ ಕ್ರೀಡಾಭಿಮಾನಿಗಳು ಯುಎಇಯಲ್ಲಿ ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳನ್ನು ನಡೆಸುವ ಬದಲು ಭಾರತದಲ್ಲಿಯೇ ಒಂದು ನಗರದಲ್ಲಿ ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿವಿಧ ನಗರದ ಕ್ರೀಡಾಂಗಣಗಳಲ್ಲಿ ಪಂದ್ಯಗಳನ್ನು ಆಯೋಜಿಸುವುದರಿಂದ ಆಟಗಾರರು ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇರುತ್ತದೆ ಹೀಗಾಗಿ ಬಯೋ ಬಬಲ್ ಕೂಡ ಅಷ್ಟಾಗಿ ಕೆಲಸ ಮಾಡುವುದಿಲ್ಲ, ಆದ್ದರಿಂದ ಒಂದೇ ನಗರದಲ್ಲಿ ಪಂದ್ಯಗಳನ್ನು ಆಯೋಜಿಸುವುದು ಉತ್ತಮ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.