ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಪರ್ತ್ನಲ್ಲಿ ಆರಂಭವಾಗಲಿದೆ. ಆಸ್ಟ್ರೇಲಿಯಾ ನೆಲದಲ್ಲಿ ಭಾರತ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯೂಟಿಸಿ) ಫೈನಲ್ ತಲುಪಲು ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ಸಾಧಿಸಬೇಕಾಗಿದೆ. ಇಲ್ಲವಾದರೆ, ಭಾರತದ ಡಬ್ಲ್ಯೂಟಿಸಿ ಫೈನಲ್ ಹಾದಿ ಕಷ್ಟಕರವಾಗಲಿದೆ.
ಆಸ್ಟ್ರೇಲಿಯಾದಲ್ಲಿ ಭಾರತ ಕಳೆದ ಎರಡು ಸರಣಿಗಳನ್ನು ಗೆದ್ದು ಬೀಗಿದೆ. 2018-19 ಮತ್ತು 2020-21ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ. ಭಾರತ ಈ ಎರಡೂ ಸಂದರ್ಭಗಳಲ್ಲಿ ಕಾಂಗರೂ ಪಡೆಯನ್ನು 2-1 ಅಂತರದಲ್ಲಿ ಸೋಲಿಸಿದೆ. ಇದೀಗ ಟೀಮ್ ಇಂಡಿಯಾ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಅದರೆ, ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವುದು ಭಾರತಕ್ಕೆ ಸುಲಭವಾಗಿದೆ. ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್ಗಳು ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಈಗ ಟೀಮ್ ಇಂಡಿಯಾ ಗೆಲುವು ಬೌಲರ್ಗಳ ಪ್ರದರ್ಶನದ ಮೇಲೆ ನಿರ್ಧಾರದವಾಗಲಿದೆ.

ಆಸ್ಟ್ರೇಲಿಯಾದ ತಂಡದಲ್ಲಿ ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್ ಮತ್ತು ಅಲೆಕ್ಸ್ ಕ್ಯಾರಿ ಅವರಂತಹ ಕ್ಲಾಸಿಕ್ ಬ್ಯಾಟರ್ಗಳಿದ್ದಾರೆ. ಅವರನ್ನು ಟೀಮ್ ಇಂಡಿಯಾಕ್ಕೆ ಕಟ್ಟಿ ಹಾಕುವುದು ಸುಲಭವಾಗಿಲ್ಲ. ಟೀಮ್ ಇಂಡಿಯಾಕ್ಕೆ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಪ್ರಮುಖ ವೇಗದ ಬೌಲರ್ಗಳಾಗಿದ್ದು, ವಿದೇಶಿ ಬೌನ್ಸಿ ಪಿಚ್ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ ಕಾಂಗೂರು ಪಡೆಯನ್ನು ಕಟ್ಟಿ ಹಾಕಲು ಈ ಇಬ್ಬರು ವೇಗದ ಬೌಲರ್ಗಳ ಜೊತೆಗೆ ಮತ್ತೊರ್ವ ಯುವ ಬೌಲರ್ ಜೊತೆಯಾಗಲಿದ್ದಾರೆ. ಈಗಾಗಲೇ ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ-ಎ ವಿರುದ್ಧದ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಈ ವೇಗದ ಬೌಲರ್ ಭಾರತ-ಎ ಕಮಾಲ್ ಮಾಡಿದ್ದಾರೆ.
ಆಸ್ಟ್ರೇಲಿಯಾ-ಎ ವಿರುದ್ಧದ ಮೊದಲ ಇನ್ನಿಂಗ್ಸ್ನಲ್ಲಿ ಭಾರತದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರು 16 ಓವರ್ಗಳಲ್ಲಿ 50 ರನ್ಗಳಿಗೆ 4 ವಿಕೆಟ್ಗಳನ್ನು ಕಬಳಿಸಿ ಮಿಂಚಿದ್ದಾರೆ. ಪ್ರಸಿದ್ಧ್ ಕೃಷ್ಣ ಅವರ ಅದ್ಭುತ ಫಾರ್ಮ್ ಟೀಮ್ ಇಂಡಿಯಾಕ್ಕೆ ಸಂತಸ ಮೂಡಿಸಿದೆ. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗಾಗಿ ಬಿಸಿಸಿಐ ಪ್ರಕಟಿಸಿರುವ 18 ಸದಸ್ಯರ ಆಟಗಾರರ ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪ್ರಸಿದ್ಧ್ ಕೃಷ್ಣ ಅವರು ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರೊಂದಿಗೆ ವೇಗದ ಬೌಲಿಂಗ್ ದಾಳಿ ನಡೆಸಲು ಸಜ್ಜಾಗಿದ್ದಾರೆ.
ಪ್ರಸಿದ್ಧ್ ಕೃಷ್ಣ ಅವರು ಭಾರತದ ಪರ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು 2024ರ ಜನವರಿ 3 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ನಲ್ಲಿ ಆಡಿದ್ದರು. ಆಡಿರುವ 2 ಟೆಸ್ಟ್ ಪಂದ್ಯಗಳಲ್ಲಿ ಎರಡು ವಿಕೆಟ್ ಪಡೆದಿದ್ದಾರೆ. ಇದೀಗ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅದ್ಭುತ ಅಂಕಿಅಂಶ ಹೊಂದಿರುವ ಪ್ರಸಿದ್ಧ್ ಕೃಷ್ಣ ಅವರಂತಹ ವೇಗದ ಬೌಲರ್ ಟೀಮ್ ಇಂಡಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಬಹುದು. ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮತ್ತು ಪ್ರಸಿದ್ಧ್ ಕೃಷ್ಣ ಸೇರಿದಂತೆ ಆಕಾಶದೀಪ್, ಹರ್ಷಿತ್ ರಾಣಾ ಅವರನ್ನು ಆಯ್ಕೆ ಮಾಡಲಾಗಿದೆ. ಇದಲ್ಲದೇ ವೇಗದ ಬೌಲಿಂಗ್ ಆಲ್ ರೌಂಡರ್ ಆಗಿ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ನೀಡಲಾಗಿದೆ.