2023ರ ಏಷ್ಯಾ ಕಪ್ ಪಂದ್ಯಾವಳಿಯ 16ನೇ ಆವೃತ್ತಿಯು ಇದೇ ಆಗಸ್ಟ್ 30ರಿಂದ ಸೆಪ್ಟೆಂಬರ್ 17ರವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳುಹಿಸಲು ನಿರಾಕರಿಸಿದ ನಂತರ, ಆರು ತಂಡಗಳ ಏಷ್ಯಾ ಕಪ್ ಚಾಂಪಿಯನ್ಶಿಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲಾಗುತ್ತಿದೆ.

ಈ ಪಂದ್ಯಾವಳಿಯನ್ನು ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿದ್ದು, ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಗಸ್ಟ್ 30ರಂದು ಪಾಕಿಸ್ತಾನ ಮತ್ತು ನೇಪಾಳ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ.
ಇದೇ ವೇಳೆ ಭಾರತ ತಂಡ ತನ್ನ ಅಭಿಯಾನದ ಮೊದಲ ಪಂದ್ಯದಲ್ಲಿ ಸೆಪ್ಟೆಂಬರ್ 2ರಂದು ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ನಾಯಕ ರೋಹಿತ್ ಶರ್ಮಾ ಅವರು ಸೋಮವಾರ, ಆಗಸ್ಟ್ 21ರಂದು ಬಹುನಿರೀಕ್ಷಿತ 2023ರ ಏಷ್ಯಾ ಕಪ್ ಪಂದ್ಯಾವಳಿಗಾಗಿ 17 ಸದಸ್ಯರ ಭಾರತ ತಂಡವನ್ನು ಘೋಷಿಸಿದರು.

ನಾಯಕ ರೋಹಿತ್ ಶರ್ಮಾ ಮತ್ತು ಎಸಿಸಿ ಅಧ್ಯಕ್ಷ ಜಯ್ ಶಾ ಕೂಡ ಭಾಗವಹಿಸಿದ್ದ ಆಯ್ಕೆ ಸಭೆಯ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಇನ್ನು ಏಷ್ಯಾ ಕಪ್ ಪಂದ್ಯಾವಳಿಯ ಭಾರತ ತಂಡದಲ್ಲಿ ಇಬ್ಬರು ಕನ್ನಡಿಗ ಆಟಗಾರರು ಸ್ಥಾನ ಪಡೆದಿದ್ದಾರೆ. ಅವರೆಂದರೆ, ಕೆಎಲ್ ರಾಹುಲ್ ಮತ್ತು ಪ್ರಸಿದ್ಧ್ ಕೃಷ್ಣ.
ತೊಡೆ ಗಾಯದಿಂದ ಚೇತರಿಸಿಕೊಂಡು ಬೆಂಗಳೂರಿನ ಎನ್ಸಿಎನಲ್ಲಿ ಪುನರ್ವಸತಿ ಪಡೆದ ನಂತರ ಫಿಟ್ನೆಸ್ ಸಾಬೀತು ಪಡಿಸಿರುವ ಕೆಎಲ್ ರಾಹುಲ್ ಮೊದಲ ಆಯ್ಕೆ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ.
ಇನ್ನು ಪ್ರಸಿದ್ಧ್ ಕೃಷ್ಣ ಕೂಡ ಗಾಯಕ್ಕೆ ತುತ್ತಾಗಿ ಶಸ್ತ್ರಚಿಕಿತ್ಸೆ ಪಡೆದ ನಂತರ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿ ಪುನರ್ವಸತಿಗೆ ಒಳಗಾಗಿದ್ದರು. ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸ್ಥಾನ ಪಡೆದಿದ್ದರು.
ಐರ್ಲೆಂಡ್ ವಿರುದ್ಧ ಎರಡು ಟಿ20 ಉತ್ತಮ ಪ್ರದರ್ಶನ ನೀಡಿದ ನಂತರ ಪ್ರಸಿದ್ಧ್ ಕೃಷ್ಣ ಮರಳಿ ಭಾರತ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಭಾರತದ ವೇಗದ ಬೌಲಿಂಗ್ ವಿಭಾಗದಲ್ಲಿ ಶಕ್ತಿ ಹೆಚ್ಚಿಸಲಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.