ಇನ್ನೂ ಚೇತರಿಸಿಕೊಳ್ಳದ ಹಾರ್ದಿಕ್ ಪಾಂಡ್ಯಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಹೇಗೆ ಸಿಕ್ತು?
ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗಾಯದ ಸಮಸ್ಯೆಯಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ನೀಡಿ ಮುಂಬೈ ತಂಡದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯಾಗೆ ಮುಂಬರುವ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾದ ಭಾರತ ತಂಡದಲ್ಲಿ ಸ್ಥಾನ ಹೇಗೆ ಸಿಕ್ಕಿತು ಎಂಬ ಪ್ರಶ್ನೆಯನ್ನು ಸಬಾ ಕರೀಮ್ ಹಾಕಿದ್ದಾರೆ. ಹಾರ್ದಿಕ್ ಪಾಂಡ್ಯ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂಬ ವಿಷಯ ತಿಳಿದಿದ್ದರೂ ಕೂಡ ಆತನನ್ನು ಟಿ ಟ್ವೆಂಟಿ ವಿಶ್ವಕಪ್ ತಂಡಕ್ಕೆ ಯಾವ ಆಧಾರದ ಮೇಲೆ ಪರಿಗಣಿಸಿದ್ದೀರಿ ಎಂದು ಆಯ್ಕೆಗಾರರಿಗೆ ಸಬಾ ಕರೀಮ್ ಪ್ರಶ್ನೆ ಎಸೆದಿದ್ದಾರೆ.
ಪಾಂಡ್ಯಗೆ ಏನಾಯ್ತು ಎಂಬ ಮಾಹಿತಿಯೇ ಇಲ್ಲ
ಇನ್ನೂ ಮುಂದುವರೆದು ಪಾಂಡ್ಯ ಗಾಯದ ಸಮಸ್ಯೆಯ ಕುರಿತು ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ಸಬಾ ಕರೀಮ್ 'ಅಸಲಿಗೆ ಹಾರ್ದಿಕ್ ಪಾಂಡ್ಯಗೆ ಏನಾಗಿದೆ, ಅವರ ಆರೋಗ್ಯದ ಸ್ಥಿತಿ ಹೇಗಿದೆ ಮತ್ತು ಯಾವ ಹಂತದಲ್ಲಿದೆ ಎಂಬುದರ ಕುರಿತು ಯಾವುದೇ ಮಾಹಿತಿಯನ್ನು ಸಹ ಬಿಟ್ಟುಕೊಡುತ್ತಿಲ್ಲ. ಸದ್ಯ ಐಪಿಎಲ್ ಟೂರ್ನಿಯಲ್ಲಿಯೂ ಕಣಕ್ಕಿಳಿಯದ ಹಾರ್ದಿಕ್ ಪಾಂಡ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ತೆರಳಿ ಫಿಟ್ನೆಸ್ ಪರೀಕ್ಷೆಗೆ ಒಳಗಾಗಿ ನಂತರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆಡಲು ಅರ್ಹರಿದ್ದಾರೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು' ಎಂದು ಸಬಾ ಕರೀಮ್ ಅಭಿಪ್ರಾಯಪಟ್ಟಿದ್ದಾರೆ.
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ
ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ