ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 50 ಓವರ್ಗಳಲ್ಲಿ 7 ವಿಕೆಟ್ಗೆ 251 ರನ್ ಕಲೆ ಹಾಕಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿದೆ. ಇತ್ತ ಈ ಪಂದ್ಯ ಮುಗಿಯುತ್ತಿದ್ದಂತೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸುತ್ತಾರೆ ಎಂಬ ವರದಿಗಳು ಹೊರ ಬರುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ದೊಡ್ಡ ಹೇಳಿಕೆ ನೀಡಿದ್ದಾರೆ.
ಟೀಮ್ ಇಂಡಿಯಾದ ಯಶಸ್ವಿ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಉತ್ತರವಾಗಿ ಗಂಗೂಲಿ ಮಾತನಾಡಿದ್ದಾರೆ. ಅಲ್ಲದೆ ಮುಂದಿನ ಐಸಿಸಿ ಟೂರ್ನಿಯವರೆಗೆ ರೋಹಿತ್ ಅವರಿಗೆ ಆಡಲು ಗಂಗೂಲಿ ಬೆಂಬಲ ನೀಡಿದ್ದಾರೆ. ಅಂದರೆ 2027 ರ ವಿಶ್ವಕಪ್ನಲ್ಲೂ ರೋಹಿತ್ ಆಡಬೇಕು ಎಂದು ಗಂಗೂಲಿ ನಂಬಿದ್ದಾರೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಅವರು ಟಿ20 ವಿಶ್ವಕಪ್ ಫೈನಲ್ ಮುಗಿಯುತ್ತಿದ್ದಂತೆ ನಿವೃತ್ತಿಯನ್ನು ಘೋಷಿಸಿದ್ದರು. ಈ ಬೆನ್ನಲ್ಲೆ ಈ ಬಾರಿಯೂ ಚಾಂಪಿಯನ್ಸ್ ಟ್ರೋಫಿ ಫೈನಲ್ ಮುಗಿದ ಬಳಿಕ ರೋಹಿತ್ ಶರ್ಮಾ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಾರಾ ಎಂಬ ವದಂತಿಗಳು ಹರಿದಾಡುತ್ತಿವೆ. ಈ ಬಗ್ಗೆ ಮಾತನಾಡಿರುವ ಗಂಗೂಲಿ, ಇವರಲ್ಲಿ ಇನ್ನು ಕ್ರಿಕೆಟ್ ಇದೆ. 2027ರ ವಿಶ್ವಕಪ್ ರೋಹಿತ್ ಶರ್ಮಾ ಆಡುತ್ತಾರೋ ಇಲ್ಲವೋ ಎನ್ನುವ ಬಗ್ಗೆ ಅಜಿತ್ ಅಗರ್ಕರ್ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರ ನಿವೃತ್ತಿಯ ಬಗ್ಗೆ ಏಕೆ ಚರ್ಚೆಗಳು ನಡೆಯುತ್ತಿವೆ ಎಂದು ಪ್ರಶ್ನಿಸಿದರು. ಇವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದಿತ್ತು. ಆಯ್ಕೆದಾರರು ಏನು ಯೋಚನೆ ಮಾಡ್ತಾ ಇದ್ದಾರೆ ಎಂಬ ಬಗ್ಗೆ ನನಗೆ ಅರಿವಿಲ್ಲ ಎಂದು ತಿಳಿಸಿದ್ದಾರೆ.

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ, ನ್ಯೂಜಿಲೆಂಡ್ ತಂಡವನ್ನು ಸ್ಪರ್ಧಾತ್ಮಕ ರನ್ಗಳಿಗೆ ಕಟ್ಟಿ ಹಾಕಿದೆ. ಕಿವೀಸ್ ತಂಡದ ಪರ ಡೇರಿಲ್ ಮಿಚೆಲ್ ಹಾಗೂ ಮಿಚೆಲ್ ಬ್ರಾಸ್ವೆಲ್ ಅರ್ಧಶತಕ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಪರಿಣಾಮ ನ್ಯೂಜಿಲೆಂಡ್ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆ ಹಾಕಿದೆ. ಟೀಮ್ ಇಂಡಿಯಾದ ಪರ ಸ್ಪಿನ್ ಬೌಲರ್ಗಳು ಬಿಗುವಿನ ದಾಳಿ ನಡೆಸಿದರು. ವರುಣ್ ಚಕ್ರವರ್ತಿ ಹಾಗೂ ಕುಲ್ದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರೆ, ರವಿಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ತಲಾ ಒಂದು ವಿಕೆಟ್ ಕಬಳಿಸಿದರು.