ತವರಿನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಅನುಭವಿಸಿದೆ. ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಎದುರಿಸಬೇಕಾಯಿತು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರು ಟೀಕೆಗಳಿಗೆ ಗುರಿಯಾಗಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿಕ ಬಳಿಕ ಟೀಮ್ ಇಂಡಿಯಾ ಆಟಗಾರರು ಮತ್ತೊಂದು ಶಾಕ್ ಎದುರಿಸುವಂತಾಗಿದೆ. ಮುಂಬರುವ ಆಸ್ಟ್ರೇಲಿಯಾ ಪ್ರವಾಸದ ನಂತರ ಬಿಸಿಸಿಐ ಕೆಲವು ಹಿರಿಯ ಆಟಗಾರರನ್ನು ಬಿಡುಗಡೆ ಮಾಡಬಹುದು ಎಂಬ ವರದಿಗಳು ಹೊರಬರುತ್ತಿವೆ. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಡಿಯಾ ಕೆಲ ಹಿರಿಯ ಆಟಗಾರರ ಭವಿಷ್ಯ ನಿರ್ಧಾರವಾಗಲಿದೆ.

ವರದಿಗಳ ಪ್ರಕಾರ, ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ 0-3 ಅಂತರದ ಹೀನಾಯ ಸೋಲನ್ನು ಬಿಸಿಸಿಐ ಮೌಲ್ಯಮಾಪನ ಮಾಡುತ್ತಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ನಂತರ ಕೆಲವು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರಂತಹ ನಾಲ್ಕು ಹಿರಿಯ ಆಟಗಾರರಲ್ಲಿ ಕನಿಷ್ಠ ಇಬ್ಬರಿಗೆ ಕೊನೆಯ ಸರಣಿಯಾಗಬಹುದು. ಈ ನಾಲ್ವರು ಅಂತರಾಷ್ಟ್ರೀಯ ವೃತ್ತಿ ಜೀವನದ ಕೊನೆಯ ಹಂತದಲ್ಲಿದ್ದಾರೆ.
ಹಿರಿಯ ಬಿಸಿಸಿಐ ಅಧಿಕಾರಿಗಳು ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ನಡುವೆ ಶೀಘ್ರದಲ್ಲೇ ಚರ್ಚೆ ನಡೆಯಬಹುದು ಎಂದು ಕ್ರಿಕೆಟ್ ಮೂಲಗಳು ತಿಳಿಸಿವೆ. ಚರ್ಚೆಯಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿನ ಬಗ್ಗೆ ಮಾತನಾಡಬಹುದು. ಇದಲ್ಲದೆ, ಭಾರತ ತಂಡ ನವೆಂಬರ್ 10 ರಂದು ಆಸ್ಟ್ರೇಲಿಯಾಕ್ಕೆ ತೆರಳುವುದರಿಂದ ಇದು ಅನೌಪಚಾರಿಕ ಚರ್ಚೆಯಾಗಿರಬಹುದು. ಆಸ್ಟ್ರೇಲಿಯಾ ಸರಣಿ ಹತ್ತಿರವಾಗಿದ್ದು, ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಆ ತಂಡದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಬ್ ಪಂತ್ (ವಿಕೆಟ್ಕೀಪರ್), ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.