ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ರೋಹಿತ್ ಮತ್ತು ವಿರಾಟ್ ಇಬ್ಬರೂ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಗಾಗಿ ಭಾರತ ತಂಡದ ಭಾಗವಾಗಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ತವರಿನಲ್ಲಿ ಏಕದಿನ ಸರಣಿ ಆಡಬೇಕಿದೆ. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಕಳಪೆ ಪ್ರದರ್ಶನದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಮ್ ಇಂಡಿಯಾ ಆಟಗಾರರು ದೇಶೀಯ ಕ್ರಿಕೆಟ್ ಆಡುವುದನ್ನು ಕಡ್ಡಾಯಗೊಳಿಸಿತ್ತು.
ರಣಜಿ ಟ್ರೋಫಿಯಲ್ಲಿ ಹಲವು ಅನುಭವಿ ಸ್ಟಾರ್ ಆಟಗಾರರು ತಮ್ಮ ತವರು ತಂಡಗಳ ಪರ ಕಣಕ್ಕಿಳಿದಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ತಮ್ಮ ತವರಿನ ತಂಡಗಳ ಕಣಕ್ಕಿಳಿದಿದ್ದರು. ರೋಹಿತ್ ಮುಂಬೈ ಪರ ಆಡಿದರೆ, ಕೊಹ್ಲಿ ದೆಹಲಿ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಈ ಇಬ್ಬರಿಂದ ರಣಜಿ ಟ್ರೋಫಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ.

ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ರೋಹಿತ್ 10 ವರ್ಷಗಳ ನಂತರ ರಣಜಿಯಲ್ಲಿ ಆಡಲು ಬಂದಿದ್ದರು. ಆದರೆ, ಈ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ರೋಹಿತ್ ರನ್ ಗಳಿಸುವಲ್ಲಿ ಹಿಂದೆ ಉಳಿದಿದ್ದರು. ಮತ್ತೊಂದೆಡೆ 12 ವರ್ಷಗಳ ಬಳಿಕ ರಣಜಿಯಲ್ಲಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಅವರಿಂದ ಬಿಗ್ ಇನ್ನಿಂಗ್ಸ್ ನಿರೀಕ್ಷೆಯಿತ್ತು. ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ 6 ರನ್ ಗಳಿಸಿದ ವಿರಾಟ್ ಕೊಹ್ಲಿ ಔಟಾದರು.
ಇದೀಗ ಈ ಇಬ್ಬರ ಭವಿಷ್ಯದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ಹೆಡ್ಕೋಚ್ ಗೌತಮ್ ಗಂಭೀರ್ ಸ್ಟಾರ್ ಬ್ಯಾಟರ್ಗಳ ಬೆಂಬಲಕ್ಕೆ ನಿಂತಿದ್ದಾರೆ. ಮುಂಬರುವ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡಕ್ಕೆ ಈ ಇಬ್ಬರ ಅವಶ್ಯಕತೆಯಿದೆ ಎಂದಿದ್ದಾರೆ.
ಭಾರತೀಯ ಕ್ರಿಕೆಟ್ಗೆ ರೋಹಿತ್ ಮತ್ತು ವಿರಾಟ್ ಇಬ್ಬರ ಕೊಡುಗೆಯೂ ಅಪಾರವಾಗಿದೆ. ಚಾಂಪಿಯನ್ಸ್ ಟ್ರೋಫಿಯಲ್ಲೂ ಅವರ ಪಾತ್ರ ಬಹುಮುಖ್ಯವಾಗಿದೆ. ಈ ಹುಡುಗರಿಗೆ ತುಂಬಾ ಹಸಿವಾಗಿದ್ದು, ಅವರು ದೇಶಕ್ಕಾಗಿ ಆಡಲು ಬಯಸುತ್ತಾರೆ ಎಂದು ನಾನು ಮೊದಲೇ ಹೇಳಿದ್ದೇನೆ. ಅವರು ದೇಶಕ್ಕಾಗಿ ಆಡುವ ಮತ್ತು ಉತ್ತಮ ಪ್ರದರ್ಶನ ನೀಡುವ ಉತ್ಸಾಹವನ್ನು ಹೊಂದಿದ್ದಾರೆ ಎಂದು ಗೌತಮ್ ಗಂಭೀರ್ ಸಮರ್ಥಿಸಿಕೊಂಡಿದ್ದಾರೆ.