ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಭಾರತ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಮಂಗಳವಾರ ಕೋಲ್ಕತ್ತಾದ ಕಾಳಿಘಾಟ್ ದೇವಸ್ಥಾನಕ್ಕೆ ಆಗಮಿಸಿದ್ದಾರೆ. ಕಾಳಿ ದೇವಿಗೆ ಗೌತಮ್ ಗಂಭೀರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಭಾರತ ತಂಡದ ಅತ್ಯುತ್ತಮ ಪ್ರದರ್ಶನಕ್ಕಾಗಿ ಕಾಳಿ ಮಾತೆಗೆ ಗಂಭೀರ್ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವಸ್ಥಾನದಲ್ಲಿ ಗಂಭೀರ್ ಪೂಜೆ ಮಾಡುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗೌತಮ್ ಗಂಭೀರ್ ಪೂರ್ಣ ವಿಧಿವಿಧಾನಗಳೊಂದಿಗೆ ಕಾಳಿ ದೇವಿಗೆ ಆರತಿ ಬೆಳಗುವ ಮೂಲಕ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅಮ್ಮನವರ ಮೂರ್ತಿಗೂ ಪುಷ್ಪಾರ್ಚನೆ ಮಾಡಿದ್ದಾರೆ. ಇದೇ ವೇಳೆ ದೇವಸ್ಥಾನದ ಅರ್ಚಕರು ಗಂಭೀರ್ ಅವರಿಗೆ ತಿಲಕವಿಟ್ಟು ಆಶೀರ್ವಾದಿಸಿದ್ದಾರೆ.

ಕಳೆದ ವರ್ಷ ಟೀಮ್ ಇಂಡಿಯಾದ ನೂತನ ಹೆಡ್ಕೋಚ್ ಆದ ಗೌತಮ್ ಗಂಭೀರ್ ಅವರ ಕೋಚಿಂಗ್ ಅವಧಿಯಲ್ಲಿ ಟೀಮ್ ಇಂಡಿಯಾ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ತವರಿನಲ್ಲಿ ನ್ಯೂಜಿಲೆಂಡ್ ಹಾಗು ಆಸ್ಟ್ರೇಲಿಯಾ ಪ್ರವಾಸದಲ್ಲಿ ಎರಡು ಟೆಸ್ಟ್ ಸರಣಿಗಳಲ್ಲಿ ಭಾರತ ಸೋಲು ಕಂಡಿದೆ. ಅಲ್ಲದೆ ಶ್ರೀಲಂಕಾ ವಿರುದ್ದವೂ ಏಕದಿನ ಸರಣಿಯನ್ನು ಭಾರತ ಸೋತಿದೆ. ಇಂತಹ ಸಂದರ್ಭದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂನಿ ಮುಂದಿನ ತಿಂಗಳು ಆರಂಭವಾಗಲಿದೆ. ಅದಕ್ಕೂ ಮುನ್ನ ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಟಿ20 ಮತ್ತು ಏಕದಿನ ಸರಣಿಗಳಲ್ಲಿ ಭಾರತದ ಗೆಲುವಿಗಾಗಿ ಗೌತಮ್ ಗಂಭೀರ್ ಕಾಳಿಘಾಟ್ ದೇವಸ್ಥಾನಕ್ಕೆ ಆಗಮಿಸಿ ಕಾಳಿ ತಾಯಿಯ ಆಶೀರ್ವಾದವನ್ನು ಪಡೆದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗಳನ್ನು ಗೆಲ್ಲುವ ಮೂಲಕ ಗೌತಮ್ ಗಂಭೀರ್ ಬಿಸಿಸಿಐ ನಂಬಿಕೆ ಉಳಿಸಿಕೊಳ್ಳವ ನಿರೀಕ್ಷೆಯಲ್ಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಂತಹ ಮೆಗಾ ಟೂರ್ನಿಗೂ ಮುನ್ನ ಅಭ್ಯಾಸ ಮಾಡಲು ಟೀಮ್ ಇಂಡಿಯಾ ಮತ್ತು ಗಂಭೀರ್ಗೆ ಈ ಸರಣಿ ಒಂದು ಅವಕಾಶವಾಗಿದೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಭಾರತ ತಂಡದ ನಾಯಕರಾಗಿದ್ದಾರೆ. ತಂಡದಲ್ಲಿ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಅವರಂತಹ ಸ್ಪೋಟಕ ಬ್ಯಾಟರ್ಗಳಿದ್ದಾರೆ. ಮೊಹಮ್ಮದ್ ಶಮಿ ಈ ಸರಣಿ ಮೂಲಕ ಪುನರಾಗಮನ ಮಾಡಲು ಸಜ್ಜಾಗಿದ್ದಾರೆ. ಶಮಿ ಅಲ್ಲದೆ, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಕೂಡ ಮಿಂಚಿನ ಬೌಲಿಂಗ್ ದಾಳಿ ನಡೆಸಲು ರೆಡಿಯಾಗಿದ್ದಾರೆ. ಸ್ಪಿನ್ ವಿಭಾಗದಲ್ಲಿ ವರುಣ್ ಚಕ್ರವರ್ತಿ ಮತ್ತು ರವಿ ಬಿಷ್ಣೋಯ್ ಎದುರಾಳಿ ಬ್ಯಾಟರ್ಗಳನ್ನು ಕಟ್ಟಿ ಹಾಕಲು ತಂತ್ರ ರೂಪಿಸಿದ್ದಾರೆ. ಇದೀಗ ನಾಳೆ (ಬುಧವಾರ) ಈಡನ್ ಗಾರ್ಡನ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಮೊದಲ ಟಿ20 ಪಂದ್ಯವನ್ನಾಡಲಿದೆ.