ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಮುಂದಿನ 5 ತಿಂಗಳ ಕಾಲ ಕ್ರಿಕೆಟ್ನಿಂದ ದೂರವುಳಿಯಲಿದ್ದಾರೆ. ಜೂನ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಅವರು ಅಲಭ್ಯರಾಗಿರುವುದು ಭಾರತ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ಅಯ್ಯರ್ ಬದಲಾಗಿ ತಂಡಕ್ಕೆ ವಾಪಸಾಗಲು ಸಜ್ಜಾಗಿದ್ದಾರೆ ಮತ್ತೊಬ್ಬ ಟೆಸ್ಟ್ ಸ್ಪೆಷಲಿಸ್ಟ್.
ಬಿಸಿಸಿಐನ ಒಪ್ಪಂದಿಂದ ಕೈಬಿಡಲಾಗಿದ್ದ ಹನುಮ ವಿಹಾರಿ ಮತ್ತೆ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶ್ರೇಯಸ್ ಅಯ್ಯರ್ ಬದಲಾಗಿ ಸೂರ್ಯಕುಮಾರ್ ಯಾದವ್ ಆಡುವ ಅವಕಾಶ ಇದ್ದರೂ, ಅವರ ಫಾರ್ಮ್ ಅನ್ನು ಗಮನದಲ್ಲಿಟ್ಟುಕೊಂಡು ಹನುಮ ವಿಹಾರಿಯನ್ನು ತಂಡಕ್ಕೆ ಸೇರಿಸಿಕೊಳ್ಳಲು ಚಿಂತನೆ ಮಾಡುತ್ತಿದೆ ಎಂದು ಹೇಳಲಾಗಿದೆ.

ಹನುಮ ವಿಹಾರಿ ಬಿಸಿಸಿಐ ಒಪ್ಪಂದವನ್ನು ಕಳೆದುಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡಿದ್ದರು. ಶ್ರೇಯಸ್ ಅಯ್ಯರ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದ ಕಾರಣ ಬಿಸಿಸಿಐ ಕೂಡ ಬೇರೆ ಆಟಗಾರರ ಆಯ್ಕೆ ಬಗ್ಗೆ ಹೆಚ್ಚಾಗಿ ಯೋಚಿಸಿರಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಹನುಮ ವಿಹಾರಿ ಮೊದಲ ಆಯ್ಕೆಯಾಗಿಲ್ಲವಾದರೂ, ಬ್ಯಾಟಿಂಗ್ ಲೈನ್ಅಪ್ನಲ್ಲಿ ಹೆಚ್ಚಿನ ಶಕ್ತಿ ತುಂಬಲು ಅವರನ್ನು ತಂಡಕ್ಕೆ ಕರೆತರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಟೆಸ್ಟ್ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡದೇ ಇದ್ದರೂ ಸೂರ್ಯಕುಮಾರ್ ಯಾದವ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ತಂಡದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಉತ್ತಮ ಫಾರ್ಮ್ನಲ್ಲಿರುವುದು ತಂಡಕ್ಕೆ ಹೆಚ್ಚಿನ ಆತ್ಮವಿಶ್ವಾಸ ತಂದುಕೊಟ್ಟಿದೆ. ಆಸ್ಟ್ರೇಲಿಯಾದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಗಿಲ್, ಇಂಗ್ಲೆಂಡ್ನಲ್ಲಿ ಕೂಡ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಅವರು ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು.

ಮೇ ಮೊದಲ ವಾರ ತಂಡ ಪ್ರಕಟ
ಜೂನ್ 7ರಿಂದ 11ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಲಂಡನ್ನ ಓವಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಸೆಣೆಸಲಿವೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಗೆದ್ದಿರುವ ಭಾರತ ಫೈನಲ್ನಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಆದರೆ, ಇಂಗ್ಲೆಂಡ್ನ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯಾದಂತ ತಂಡವನ್ನು ಸೋಲಿಸುವುದು ಸುಲಭವಲ್ಲ. ವೇಗಿಗಳಿಗೆ ನೆರವಾಗುವ ಪಿಚ್ನಲ್ಲಿ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಲು ಸಜ್ಜಾಗಿದೆ.
ಮೇ ಮೊದಲನೇ ವಾರದಲ್ಲಿ ಬಿಸಿಸಿಐ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಹನುಮ ವಿಹಾರಿ ಕಳೆದ ವರ್ಷ ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಟೆಸ್ಟ್ ಪಂದ್ಯದ ಬಳಿಕ ಭಾರತಕ್ಕಾಗಿ ಆಡಿಲ್ಲ. ಕಳಪೆ ಪ್ರದರ್ಶನ ನೀಡಿದ ಕಾರಣ ಅವರನ್ನು ತಂಡದಿಂದ ಕೈಬಿಡಲಾಗಿತ್ತು, ನಂತರ ಬಿಸಿಸಿಐ ಕೇಂದ್ರ ಒಪ್ಪಂದಗಳಿಂದ ತೆಗೆದುಹಾಕಲಾಗಿತ್ತು.
"ಶ್ರೇಯಸ್ ನಮಗೆ ಪ್ರಮುಖ ಆಟಗಾರ. ಅವರ ಗಾಯದಿಂದ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಹನುಮ ವಿಹಾರಿ ಕುರಿತು ಚರ್ಚೆ ನಡೆಯುತ್ತಿದೆ. ಅವರು ಅನುಭವಿ ಆಟಗಾರ, ಆಸ್ಟ್ರೇಲಿಯಾ ವಿರುದ್ಧ ಉತ್ತಮ ಪ್ರದರ್ಶನ ನೀಡಿದ್ದಾರೆ. ಇಂಗ್ಲೆಂಡ್ನಲ್ಲಿ ಆಡಿದ ಅನುಭವ ಕೂಡ ಒದೆ. ಆಯ್ಕೆ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ ಬಳಿಕ ನಿರ್ಧಾರ ತೆಗೆದುಕೊಳ್ಳುತ್ತಾರೆ" ಎಂದು ಬಿಸಿಸಿಐ ಹಿರಿಯ ಅಧಿಕಾರಿ ತಿಳಿಸಿದ್ದಾರೆ ಎಂದು ಇನ್ಸೈಡ್ಸ್ಪೋರ್ಟ್ ವರದಿ ಮಾಡಿದೆ.