ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಕಳಪೆ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ಕೂಡ ಈ ಮೆಗಾ ಟೂರ್ನಿಯಲ್ಲಿ ಅಬ್ಬರಿಸಲು ತಯಾರಾಗುತ್ತಿದ್ದಾರೆ. ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಸೋಲಿನ ನಂತರ ಇಬ್ಬರೂ ಆಟಗಾರರು ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿದೆ.
ಚಾಂಪಿಯನ್ಸ್ ಟ್ರೋಫಿ ಭಾರತ ತಂಡದಲ್ಲಿ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ವಿರಾಟ್ ಮತ್ತು ರೋಹಿತ್ ಕೂಡ ಪ್ರಮುಖ ಆಟಗಾರರಾಗಿ ಸ್ಥಾನ ಪಡೆದಿದ್ದಾರೆ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ಲೆಗ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಭವಿಷ್ಯ ನುಡಿದಿದ್ದಾರೆ. ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲಲು ಸಹಾಯ ಮಾಡುವ 4 ಭಾರತ ತಂಡ ಆಟಗಾರರ ಹೆಸರಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಹರ್ಭಜನ್ ಸಿಂಗ್ ಅವರು, 'ಕಮ್ ಬ್ಯಾಕ್ ಮಾಡಲು ತಿಳಿದಿರುವವನೇ ಶ್ರೇಷ್ಠ ಆಟಗಾರ. ವಿರಾಟ್ ಮತ್ತು ರೋಹಿತ್ ತುಂಬಾ ಎತ್ತರದ ಆಟಗಾರರಾಗಿದ್ದು, ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಮಿಂಚಲಿದ್ದಾರೆ. ದೊಡ್ಡ ಟೂರ್ನಿಗಳಲ್ಲಿ ಅವರು ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದನ್ನು ನಾವು ನೋಡಿದ್ದೇವೆ. ಐಸಿಸಿ ವಿಶ್ವಕಪ್ 2023 ಮತ್ತು ಟಿ20 ವಿಶ್ವಕಪ್ 2024 ಇದಕ್ಕೆ ಪ್ರಮುಖ ಉದಾಹರಣೆಗಳಾಗಿವೆ ಎಂದಿದ್ದಾರೆ.
ರೋಹಿತ್ ಮತ್ತು ವಿರಾಟ್ ಹೊರತಾಗಿ ಹರ್ಭಜನ್ ಸಿಂಗ್ ಇನ್ನೂ ಇಬ್ಬರು ಆಟಗಾರರ ಹೆಸರನ್ನು ಬಹಿರಂಗಪಡಿಸಿದ್ದಾರೆ. ರೋಹಿತ್, ವಿರಾಟ್, ಮೊಹಮ್ಮದ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾದ ಮ್ಯಾಚ್ ವಿನ್ನರ್ಗಳು ಎಂದು ಅವರು ಹೇಳಿದ್ದಾರೆ. ಪ್ರತಿಯೊಬ್ಬ ಆಟಗಾರನು ಕಷ್ಟದ ಸಮಯವನ್ನು ಎದುರಿಸುತ್ತಾನೆ. ಆದರೆ ಈ ಬಿಗ್ ಪ್ಲೇಯರ್ಸ್ಗೆ ಹೇಗೆ ಪುಟಿದೇಳಬೇಕೆಂದು ತಿಳಿದಿದೆ. ರೋಹಿತ್ ಮತ್ತು ವಿರಾಟ್ ಲಯ ಕಂಡುಕೊಳ್ಳುವ ಮೂಲಕ ಚಾಂಪಿಯನ್ಸ್ ಟ್ರೋಫಿಗೆ ಪ್ರವೇಶಿಸಿ ಭಾರತಕ್ಕೆ ಪ್ರಶಸ್ತಿ ಗೆಲ್ಲಿಸಿ ಕೊಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹರ್ಭಜನ್ ಸಿಂಗ್ ಭವಿಷ್ಯ ನುಡಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ (ವಿಕೆಟ್ಕೀಪರ್), ರವೀಂದ್ರ ಜಡೇಜಾ.