ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅಲಭ್ಯರಾಗಿದ್ದಾರೆ. ಇವರ ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡುತ್ತಿದೆ. ಇವರು ಆಡುವ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯದೇ ಇರುವ ಬಗ್ಗೆ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಟೈಮ್ ವೇಳೆ ಹೇಳಿಕೆ ನೀಡಿದ್ದಾರೆ.
ದುಬೈನಲ್ಲಿ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ನಡುವಣ ಏಷ್ಯಾ ಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ತಮ್ಮದಾಗಿಸಿಕೊಂಡರು. ಈ ವೇಳೆ ರವಿ ಶಾಸ್ತ್ರಿ ಸೂರ್ಯ ಅವರಿಗೆ ತಂಡದ ಸಂಯೋಜನೆಯ ಬಗ್ಗೆ ಕೇಳಿದಾಗ, ಸೂರ್ಯ ಆಡುವ ಹನ್ನೊಂದರ ಬಳಗದ ಚಿತ್ರವನ್ನು ನೀಡಿದರು. ಈ ವೇಳೆ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಕ್ಕೆ ತುತ್ತಾಗಿದ್ದಾರೆ ಎಂದು ತಿಳಿಸಿದರು.

ಟಾಸ್ ಗೆಲ್ಲುತ್ತಿದ್ದಂತೆ ಮೊದಲು ಬ್ಯಾಟ್ ಮಾಡುವ ನಿರ್ಧಾರವನ್ನು ಸೂರ್ಯ ಮಾಡಿದರು. ಈ ವಿಕೆಟ್ ಚೆನ್ನಾಗಿ ಕಾಣುತ್ತಿದೆ. ಈ ವೇಳೆ ಬೆಳಕಿನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಾಗುತ್ತದೆ. ಕಳೆದ ಕೆಲವು ಪಂದ್ಯಗಳಲ್ಲಿ ನಾವು ಸ್ಥಿರ ಪ್ರದರ್ಶನ ನೀಡಿದ್ದೇವೆ. ಕಳೆದ ಪಂದ್ಯದಲ್ಲಿ ಸ್ಥಾನ ಪಡೆದಿದ್ದ ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಅವರಿಗೆ ರೆಸ್ಟ್ ನೀಡಲಾಗಿದೆ ಎಂದು ತಿಳಿಸಿದರು.
ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಕ್ಕೆ ತುತ್ತಾಗಿದ್ದರು. ಸೂಪರ್ 4ನ ಕೊನೆಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೇಲವ ಒಂದು ಓವರ್ ಬೌಲ್ ಮಾಡಿದ್ದರು. ಅವರು ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಹೀಗಾಗಿ ಇವರು ಮುಂದಿನ ಓವರ್ಗಳನ್ನು ಮಾಡಲಿಲ್ಲ. ಇವರು ಏಷ್ಯಾ ಕಪ್ ಟಿ20 ಕ್ರಿಕೆಟ್ನಲ್ಲಿ 6 ಪಂದ್ಯಗಳಲ್ಲಿ 4 ವಿಕೆಟ್ ಕಬಳಿಸಿದ್ದಾರೆ.