ಟೀಮ್ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿ ಮೈದಾನದಿಂದ ಹೊರನಡೆದಿದ್ದು ಗೊತ್ತೇ ಇದೆ. ಆರಂಭದಲ್ಲಿ ಸಣ್ಣ ಗಾಯ ಇರಬಹುದು ಎಂದುಕೊಂಡಿದ್ದ ಗಾಯ ಅಂದುಕೊಂಡಿದ್ದಕ್ಕಿಂತ ಹೆಚ್ಚು ತೀವ್ರವಾಗಿದೆ. ಅದು ಎಷ್ಟರ ಮಟ್ಟಿಗೆ ಎಂದರೆ ವಿಶ್ವಕಪ್ ಟೂರ್ನಿಯ ಬಳಿಕ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೂ ಹಾರ್ದಿಕ್ ಪಾಂಡ್ಯ ಅಲಭ್ಯವಾಗಲಿದ್ದಾರೆ ಎಂದು ವರದಿಯಾಗಿದೆ.
ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಮುಕ್ತಾಯವಾದ ನಾಲ್ಕೇ ದಿನಗಳ ಅಂತರದಲ್ಲಿ ಭಾರತ ಆಸ್ಟ್ರೇಲಿಯಾ ತಂಡದ ವಿರುದ್ಧ ಟಿ20 ಸರಣಿಯಲ್ಲಿ ಭಾಗಿಯಾಗಲಿದೆ. ಐದು ಪಂದ್ಯಗಳ ಈ ಟಿ20 ಸರಣಿ ನವೆಂಬರ್ 23ರಿಂದ ಆರಂಭವಾಗಲಿದೆ. ಈ ಸರಣಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಈಗಾಗಲೇ ತಂಡವನ್ನು ಪ್ರಕಟಿಸಿದ್ದು ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿರುವ ತಂಡದ ಭಾಗವಾಗಿರುವ ಆರು ಆಟಗಾರರು ಟಿ20 ಸರಣಿಯಲ್ಲಿಯೂ ಆಡಲಿದ್ದಾರೆ.

ಆದರೆ ಈ ಸರಣಿಗೆ ಟೀಮ್ ಇಂಡಿಯಾ ಎರಡನೇ ದರ್ಜೆಯ ಆಟಗಾರರ ಪಡೆಯನ್ನು ಪ್ರಕಟಿಸುವುದು ಸ್ಪಷ್ಟವಾಗಿದೆ. ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಿದ್ದಾರೆ. ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ತಂಡವನ್ನು ಪ್ರಕಟಿಸಲಾಗುತ್ತದೆ ಎನ್ನಲಾಗಿತ್ತು. ಆದರೆ ಗಾಯದಿಂದ ಹಾರ್ದಿಕ್ ಪಾಂಡ್ಯ ಚೇತರಿಕೆ ಕಾಣದಿರುವ ಕಾರಣದಿಂದಾಗಿ ಅವರು ಈ ಅವಕಾಶ ಕಳೆದುಕೊಳ್ಳುವುದು ನಿಶ್ಚಿತವಾಗಿದೆ. ಹಾರ್ದಿಕ್ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಮಾತ್ರವಲ್ಲದೆ ಅದರ ಬಳಿಕ ನಡೆಯಲಿರುವ ದಕ್ಷಿಣ ಆಫ್ರಿಕಾ ಪ್ರವಾಸವನ್ನೂ ತಪ್ಪಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ವರದಿಗಳ ಪ್ರಕಾರ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಸೂರ್ಯಕುಮಾರ್ ಯಾದವ್ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಉಪನಾಯಕನ ಜವಾಬ್ಧಾರಿ ವಹಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಈ ಬಾರಿ ನಾಯಕತ್ವದ ಹೊಣೆಗಾರಿಕೆ ದೊರೆಯುವ ಸಾಧ್ಯತೆಯಿದೆ.
ಇನ್ನು ಸೂರ್ಯಕುಮಾರ್ ಅವರನ್ನು ಹೊರತುಪಡಿಸಿದರೆ ಯುವ ಆಟಗಾರ ಋತುರಾಜ್ ಗಾಯಕ್ವಾಡ್ಗೂ ತಂಡವನ್ನು ಮುನ್ನಡೆಸುವ ಅವಕಾಶ ದೊರೆತರೆ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ. ಕಳೆದ ಏಷ್ಯನ್ ಗೇಮ್ಸ್ನಲ್ಲಿ ಋತುರಾಜ್ ಗಾಯಕ್ವಾಡ್ ಭಾರತ ತಂಡವನ್ನು ಮುನ್ನಡೆಸಿದ್ದರು. ಆ ಕ್ರೀಡಾ ಕೂಟದಲ್ಲಿ ಭಾರತ ತಂಡ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿತ್ತು.
ಇನ್ನು ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ಯುವ ಆಟಗಾರರಾದ ಇಶಾನ್ ಕಿಶನ್ ಹಾಗೂ ಪ್ರಸಿದ್ಧ್ ಕೃಷ್ಣಗೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ದೊರೆಯುವ ಸಾಧ್ಯತೆಯಿಲ್ಲ. ಹಾಗಾಗಿ ಆಸಿಸ್ ಸರಣಿಯಲ್ಲಿ ಅವರು ಆಡಲಿದ್ದಾರೆ ಎನ್ನಲಾಗಿದೆ. ಇಶಾನ್ ಕಿಶನ್ ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 47 ರನ್ಗಳಿಸಿದ ಬಳಿಕ ಶುಬ್ಮನ್ ಗಿಲ್ ಫಿಟ್ ಆದ ಕಾರಣ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿಲ್ಲ. ಇನ್ನು ಪ್ರಸಿದ್ಧ್ ಕೃಷ್ಣ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಕ್ಕೆ ತುತ್ತಾಗಿ ಟೂರ್ನಿಯಿಮದ ಹೊರಬಿದ್ದ ಬಳಿಕ ಭಾರತ ತಂಡವನ್ನು ಸೇರಿಕೊಂಡಿದ್ದರು.