ಭಾರತ vs ನ್ಯೂಜಿಲೆಂಡ್: 2ನೇ ಟೆಸ್ಟ್ನಿಂದ ಯಾರು ಹೊರಕ್ಕೆ? ದ್ರಾವಿಡ್ ಹೇಳಿದ್ದಿಷ್ಟು

ಟಿ ಟ್ವೆಂಟಿ ವಿಶ್ವಕಪ್ ಮುಗಿದ ಬಳಿಕ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ 3 ಟಿ ಟ್ವೆಂಟಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇತ್ತಂಡಗಳ ನಡುವೆ ಈಗಾಗಲೇ ಟಿ ಟ್ವೆಂಟಿ ಸರಣಿ ಮುಗಿದಿದ್ದು ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಸಾಧಿಸುವುದರ ಮೂಲಕ ವೈಟ್ ವಾಷ್ ಬಳಿದಿತ್ತು.
ಹೀಗೆ ಟಿ ಟ್ವೆಂಟಿ ಸರಣಿಯಲ್ಲಿ ವೈಟ್ ವಾಶ್ ಮುಖಭಂಗಕ್ಕೆ ಒಳಗಾದ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಕೈವಶ ಪಡಿಸಿಕೊಳ್ಳುವುದರ ಮೂಲಕ ಪ್ರತೀಕಾರ ತೆಗೆದುಕೊಳ್ಳುವ ಯೋಜನೆಯಲ್ಲಿತ್ತು. ಇನ್ನು ಇತ್ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಪೈಕಿಯ ಪ್ರಥಮ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನವೆಂಬರ್ 25ರಿಂದ 29ರವರೆಗೆ ನಡೆಯಿತು. ಈ 5 ದಿನಗಳ ಸತತವಾದ ಹಣಾಹಣಿಯಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಮೇಲುಗೈ ಸಾಧಿಸುತ್ತಾ ಬಂದರೂ ಸಹ ಅಂತಿಮ ಹಂತದಲ್ಲಿ ಪಂದ್ಯವನ್ನು ಕೈವಶ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ. ಹೌದು, ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಪ್ರಥಮ ಟೆಸ್ಟ್ ಡ್ರಾನಲ್ಲಿ ಅಂತ್ಯಗೊಂಡಿದೆ.
ಕೊನೆಯ ದಿನದಂದು ನಡೆದ ನ್ಯೂಜಿಲೆಂಡ್ ತಂಡದ ದ್ವಿತೀಯ ಇನ್ನಿಂಗ್ಸ್ನಲ್ಲಿ ನ್ಯೂಜಿಲೆಂಡ್ ತಂಡದ ಬ್ಯಾಟ್ಸ್ಮನ್ಗಳ ಮೇಲೆ ಟೀಮ್ ಇಂಡಿಯಾ ಬೌಲರ್ಗಳು ಹಿಡಿತ ಸಾಧಿಸಿದರೂ ಸಹ ಅಂತಿಮವಾಗಿ ಎಲ್ಲಾ ವಿಕೆಟ್ಗಳನ್ನೂ ಕಬಳಿಸಲು ಆಗದ ಕಾರಣ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ನ್ಯೂಜಿಲೆಂಡ್ ಪರ ಚೊಚ್ಚಲ ಪಂದ್ಯವನ್ನಾಡಿದ ರಚಿನ್ ರವೀಂದ್ರ ಅಂತಿಮವಾಗಿ ವಿಕೆಟ್ ಒಪ್ಪಿಸದೇ ನೆಲಕಚ್ಚಿ ನಿಲ್ಲುವ ಮೂಲಕ ಭಾರತದ ಗೆಲುವಿನ ಆಸೆಗೆ ತಣ್ಣೀರು ಎರಚಿ ನ್ಯೂಜಿಲೆಂಡ್ ಯಶಸ್ವಿಯಾಗಿ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಇತ್ತ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಆಗಿಂದಾಗ್ಗೆ ಹಲವಾರು ಬದಲಾವಣೆಗಳು ಜರುಗಿದವು. ಪಂದ್ಯದ ನಡುವೆಯೇ ಕೆಲ ಆಟಗಾರರು ವಿವಿಧ ಸಮಸ್ಯೆಗಳಿಂದ ತಂಡದಿಂದ ಹೊರಗುಳಿದರು. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕೆಲ ಆಟಗಾರರನ್ನು ತಂಡದಿಂದ ಹೊರಗಿಟ್ಟು ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಕೆಲ ಬದಲಾವಣೆಗಳನ್ನು ತರಲಾಗುತ್ತದೆ ಎನ್ನಲಾಗುತ್ತಿದೆ.
ಈ ವಿಷಯದ ಕುರಿತಾಗಿ ಮೊದಲನೇ ಟೆಸ್ಟ್ ಪಂದ್ಯ ಮುಗಿದ ನಂತರ ಮಾತನಾಡಿರುವ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಯಾವುದಾದರೂ ವ್ಯತ್ಯಾಸ ಆಗಲಿದೆಯಾ ಎಂಬ ಪ್ರಶ್ನೆಗೆ ಈ ಕೆಳಕಂಡಂತೆ ಉತ್ತರಿಸಿದ್ದಾರೆ..

ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಆಡುವ ಬಳಗದ ಕುರಿತು ಇನ್ನೂ ಚಿಂತಿಸಿಲ್ಲ
ಕಾನ್ಪುರ ಟೆಸ್ಟ್ ಪಂದ್ಯ ಮುಗಿದ ನಂತರ ಮುಂಬೈ ಟೆಸ್ಟ್ ಕುರಿತು ಎದುರಾದ ಪ್ರಶ್ನೆಗೆ ಉತ್ತರಿಸಿರುವ ಭಾರತದ ಪ್ರಮುಖ ತರಬೇತುದಾರ ರಾಹುಲ್ ದ್ರಾವಿಡ್ "ನಾವು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಯಾವ ಯಾವ ಆಟಗಾರರು ಕಣಕ್ಕಿಳಿಯಲಿದ್ದಾರೆ ಎಂಬುದರ ಕುರಿತು ಇನ್ನೂ ಕೂಡ ನಿರ್ಧರಿಸಿಲ್ಲ ಮತ್ತು ಇಷ್ಟು ಬೇಗ ಚಿಂತನೆ ನಡೆಸುವ ಅಗತ್ಯವೂ ಇಲ್ಲ. ನಾವು ಇಂದು ಇಂದಿನ ಪಂದ್ಯದ ಕುರಿತು ಮಾತ್ರ ಗಮನ ಹರಿಸಿದ್ದೆವು. ಹೀಗಾಗಿ ಮುಂಬೈ ತಲುಪಿದ ನಂತರ ಆಟಗಾರರ ಫಿಟ್ನೆಸ್ ಆಧರಿಸಿ ಮುಂದಿನ ಟೆಸ್ಟ್ ಪಂದ್ಯಕ್ಕೆ ತಯಾರಿ ನಡೆಸಲಿದ್ದೇವೆ" ಎಂದು ಮಾತನಾಡಿದರು.

ವಿರಾಟ್ ಕೊಹ್ಲಿ ಜೊತೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಿದ್ದೇನೆ ಎಂದ ದ್ರಾವಿಡ್
ಇನ್ನೂ ಮುಂದುವರಿದು ಮಾತನಾಡಿರುವ ರಾಹುಲ್ ದ್ರಾವಿಡ್ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಆಡುವ ಬಳಗ ಹೇಗಿರಬೇಕು ಎಂಬುದನ್ನು ವಿರಾಟ್ ಕೊಹ್ಲಿ ಜೊತೆ ಚರ್ಚಿಸಿ ನಂತರ ತೀರ್ಮಾನವನ್ನು ತೆಗೆದುಕೊಳ್ಳಲಿದ್ದೇನೆ ಎಂದು ಹೇಳಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿ ಮತ್ತು ಮೊದಲನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಹಾಗೂ ಈಗಾಗಲೇ ಮುಂಬೈ ತಲುಪಿರುವ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ನಡೆಸುತ್ತಿರುವ ಅಭ್ಯಾಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಯಾವಾಗ?
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಡಿಸೆಂಬರ್ 3ರಿಂದ ಡಿಸೆಂಬರ್ 7ರವರೆಗೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications