ಬಹುನೀರಿಕ್ಷಿತ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಭಾರತ ತಂಡ ಫೆಬ್ರವರಿ 20 ರಿಂದ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ರೋಚಕ ಪಂದ್ಯಕ್ಕಾಗಿ ಉಭಯ ತಂಡಗಳು ತಯಾರಿ ನಡೆಸುತ್ತಿವೆ.
ಈ ಬಾರಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಅವಕಾಶವನ್ನು ಹೊಂದಿದೆ. ಇದಕ್ಕಾಗಿ ಟೀಮ್ ಇಂಡಿಯಾ ಎಲ್ಲಾ ವಿಭಾಗಳಲ್ಲಿಯೂ ಬಲಿಷ್ಠವಾಗಬೇಕಿದೆ. ಬಾಂಗ್ಲಾದೇಶ ವಿರುದ್ಧ ಮೊದಲ ಪಂದ್ಯದಲ್ಲಿ ಭಾರತ ತಂಡದ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಎಲ್ಲರಿಗೂ ಕುತೂಹಲ ಮೂಡಿಸಿದೆ.

ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾ ಯಾವ ಸ್ಪಿನ್ ಸ್ಪೆಷಲಿಸ್ಟ್ ಅನ್ನು ಕಣಕ್ಕಿಳಿಸಲಿದೆ ಎಂಬುದು ಕ್ರಿಕೆಟ್ ಗಲ್ಲಿಗಳಲ್ಲಿ ಚರ್ಚೆ ನಡೆಯುತ್ತಿದೆ. ಟೀಮ್ ಇಂಡಿಯಾದಲ್ಲಿ ವರುಣ್ ಚಕ್ರವರ್ತಿ ಮತ್ತು ಕುಲದೀಪ್ ಯಾದವ್ ಇಬ್ಬರೂ ಸ್ಪಿನ್ ಸ್ಪೆಷಲಿಸ್ಟ್ಗಳಿದ್ದಾರೆ. ಈ ಇಬ್ಬರಲ್ಲಿ ಟೀಮ್ ಇಂಡಿಯಾ ಹೆಡ್ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.
ವರುಣ್ ಇತ್ತೀಚೆಗೆ ಅದ್ಭುತ ಸ್ಪಿನ್ ಬೌಲಿಂಗ್ ಮೂಲಕ ಎಲ್ಲರ ಚಿತ್ತ ಕದ್ದಿದ್ದಾರೆ. ಆಡಿರುವ ಮೂರು ಏಕದಿನ ಪಂದ್ಯಗಳಲ್ಲಿ ವರುಣ್ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಮತ್ತೊಂದೆಡೆ ಕುಲದೀಪ್ ಯಾದವ್ ತಮ್ಮ ಅಮೋಘ ಬೌಲಿಂಗ್ ಪ್ರದರ್ಶನದ ಮೂಲಕ ಟೀಮ್ ಇಂಡಿಯಾ ಏಕದಿನ ಕ್ರಿಕೆಟ್ನಲ್ಲಿ ಹವಾ ಸೃಷ್ಟಿಸಿದ್ದಾರೆ. ಹೀಗಾಗಿ ಇಬ್ಬರಲ್ಲಿ ಯಾರಿಗೆ ಅವಕಾಶ ನೀಡಬೇಕು ಎಂಬ ಪ್ರಶ್ನೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ಗೆ ಎದುರಾಗಿದೆ.
ವರುಣ್ ಚಕ್ರವರ್ತಿ ಅವರಿಗೆ ಟಿ20 ವಿಶ್ವಕಪ್ 2021ರಲ್ಲಿ ಪಾಕಿಸ್ತಾನ ವಿರುದ್ಧ ಆಡುವ ಅವಕಾಶ ಸಿಕ್ಕಿತ್ತು. ಆದರೆ, ಭಾರತಕ್ಕೆ ಅದು ಮರೆಯಲಾಗದ ಪಂದ್ಯವಾಗಿತ್ತು. ಪಾಕಿಸ್ತಾನ ಎದುರು ಭಾರತ 10 ವಿಕೆಟ್ಗಳಿಂದ ಹೀನಾಯ ಸೋಲನ್ನು ಅನುಭವಿಸಿತ್ತು. ಈ ಪಂದ್ಯದಲ್ಲಿ ವರುಣ್ ನಾಲ್ಕು ಓವರ್ಗಳಲ್ಲಿ 33 ರನ್ ನೀಡಿ ಯಾವುದೇ ವಿಕೆಟ್ ಪಡೆದಿರಲಿಲ್ಲ. ಇದಾದ ನಂತರ ಅವರಿಗೆ ಟೀಮ್ ಇಂಡಿಯಾ ಪರ ಹೆಚ್ಚಾಗಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಗಮನ ಸೆಳೆಯುವ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಪೈಪೋಟಿ ನಡೆಸುತ್ತಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಂತಹ ಮೆಗಾ ಟೂರ್ನಿಯಲ್ಲಿ ಟೀಮ್ ಇಂಡಿಯಾಕ್ಕೆ ಚೈನಾಮನ್ ಬೌಲರ್ ಕುಲದೀಪ್ ಯಾದವ್ ಅನುಭವ ಬಹಳ ಮುಖ್ಯ. ಇಲ್ಲಿವರೆಗೆ ಅವರು 108 ಏಕದಿನ ಪಂದ್ಯಗಳನ್ನು ಆಡಿದ್ದು, 174 ವಿಕೆಟ್ ಪಡೆದಿದ್ದಾರೆ. ಈ ಅಂಕಿ-ಅಂಶಗಲೇ ಅವರ ಸಾಮರ್ಥ್ಯದ ಬಗ್ಗೆ ಹೇಳಲಿವೆ. ಬಾಂಗ್ಲಾದೇಶ ವಿರುದ್ಧ ಕುಲದೀಪ್ ಕೇವಲ ನಾಲ್ಕು ಪಂದ್ಯಗಳನ್ನು ಆಡಿದ್ದು, ಐದು ವಿಕೆಟ್ಗಳನ್ನು ಕಬಳಿಸಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯ ಟೀಮ್ ಇಂಡಿಯಾಕ್ಕೆ ಪ್ರಮುಖವಾಗಿದೆ. ಏಕೆಂದರೆ ಮುಂದಿನ ಪಂದ್ಯವನ್ನು ಭಾರತ ತಂಡ ಪಾಕಿಸ್ತಾನ ಎದುರು ಆಡಲಿದೆ. ಹೀಗಾಗಿ ಮೊದಲ ಪಂದ್ಯವನ್ನು ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಸಿದ್ಧತೆಯಾಗಿಯೂ ನೋಡಬೇಕು.