ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ 2025ರ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದ ಸುದ್ದಿ ಕೇಳಿ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಆದರೆ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಕುರಿತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್ಸಿಎ) ವರದಿ ಬಂದಾಗ, ಸಾಮಾಜಿಕ ಜಾಲತಾಣದಲ್ಲಿ ಕೋಲಾಹಲ ಉಂಟಾಗಿದೆ. ಜಸ್ಪ್ರೀತ್ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ. ಇದರ ಹೊರತಾಗಿಯೂ, ಅವರನ್ನು ಮೆಗಾ ಟೂರ್ನಿಗಾಗಿ ಟೀಮ್ ಇಂಡಿಯಾದಿಂದ ಹೊರಗಿಡಲಾಗಿದೆ.
ಎನ್ಸಿಎಯಲ್ಲಿ ಗಾಯಗೊಂಡ ಆಟಗಾರರಿಗೆ ಫಿಸಿಯೋಥೆರಪಿಸ್ಟ್ ಮೇಲ್ವಿಚಾರಣೆಯಲ್ಲಿ ಪುನರ್ವಸತಿ ಕಲ್ಪಿಸಲಾಗುತ್ತದೆ. ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಎನ್ಸಿಎ ಘೋಷಿಸಿತ್ತು. ಆದರೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜಸ್ಪ್ರೀತ್ ಬುಮ್ರಾ ಅವರನ್ನು ಟೀಮ್ ಇಂಡಿಯಾ ಜೊತೆ ದುಬೈಗೆ ಕಳುಹಿಸಲು ಹಿಂದೇಟು ಹಾಕಿದೆ.

ಜಸ್ಪ್ರೀತ್ ಬುಮ್ರಾ ಅವರ ಸ್ಕ್ಯಾನ್ ವರದಿ ಸ್ಪಷ್ಟವಾಗಿದ್ದು, ಅವರು ತಮ್ಮ ಗಾಯದ ನೋವಿನಿಂದ ಸಂಪೂರ್ಣ ಚೇತರಿಸಿಕೊಂಡಿದ್ದರು ಎಂದು ಬಿಸಿಸಿಐನ ಉನ್ನತ ಮೂಲಗಳು ತಿಳಿಸಿವೆ. ಆದಾಗ್ಯೂ, ಪಂದ್ಯದ ಪರಿಸ್ಥಿತಿಗಳಲ್ಲಿ ಅವರನ್ನು ಇನ್ನೂ ಪರೀಕ್ಷಿಸದ ಕಾರಣ ಎನ್ಸಿಎ ಅಂತಿಮ ನಿರ್ಧಾರವನ್ನು ಬಿಸಿಸಿಐ ಆಯ್ಕೆದಾರರಿಗೆ ಬಿಟ್ಟಿತು. ಹೀಗಾಗಿ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಬುಮ್ರಾ ಅವರನ್ನು ಹೊರಗಿಡಲು ನಿರ್ಧರಿಸಿತು.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಿಡ್ನಿ ಟೆಸ್ಟ್ ಪಂದ್ಯದ ವೇಳೆ ಜಸ್ಪ್ರೀತ್ ಬುಮ್ರಾ ಬೆನ್ನಿನ ಗಾಯಕ್ಕೆ ಒಳಗಾಗಿದ್ದರು. ಅಂದಿನಿಂದ ಅವರು ಟೀಮ್ ಇಂಡಿಯಾ ಹೊರಗುಳಿದಿದ್ದಾರೆ. ಆದರೂ, ಚಾಂಪಿಯನ್ಸ್ ಟ್ರೋಫಿಯ ಭಾರತದ ತಂಡಕ್ಕೆ ಅವರನ್ನು ಆಯ್ಕೆ ಮಾಡಲಾಯಿತು. ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ಅವರು ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಫಿಟ್ ಆಗುತ್ತಾರೆ ಎಂದು ಭಾವಿಸಿದ್ದರು. ಆದರೆ ಅಂತಿಮ ತಂಡದಿಂದ ಅವರನ್ನು ಕೈಬಿಡಬೇಕಾಯಿತು.
ಫೆಬ್ರವರಿ 11ರ ರಾತ್ರಿ, ಬಿಸಿಸಿಐ ಚಾಂಪಿಯನ್ಸ್ ಟ್ರೋಫಿಯ ಟೀಮ್ ಇಂಡಿಯಾದ ಬದಲಾವಣೆಗಳ ಕುರಿತು ಅಪ್ಡೇಟ್ ನೀಡಿತ್ತು. ಬಿಸಿಸಿಐ ಜಸ್ಪ್ರೀತ್ ಬುಮ್ರಾ ಗಾಯಗೊಂಡಿದ್ದಾರೆ ಎಂದು ಘೋಷಿಸಿತ್ತು. ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಇದಲ್ಲದೆ, ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರನ್ನು ತಂಡದಿಂದ ಕೈಬಿಡುವ ಮೂಲಕ ಅವರ ಸ್ಥಾನದಲ್ಲಿ ವರುಣ್ ಚಕ್ರವರ್ತಿಗೆ ಅವಕಾಶ ನೀಡಲಾಗಿತ್ತು.
ಜಸ್ಪ್ರೀತ್ ಬುಮ್ರಾ ಬದಲಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಹರ್ಷಿತ್ ರಾಣಾ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ರಾಣಾ ದುಬಾರಿ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ. 7.18 ರ ಎಕಾನಮಿಯಲ್ಲಿ ರನ್ ನೀಡಿ ಎರಡು ಪಂದ್ಯಗಳಲ್ಲಿ ನಾಲ್ಕು ವಿಕೆಟ್ ಪಡೆದಿದ್ದಾರೆ. ಇದರಲ್ಲಿ ಅವರ ಚೊಚ್ಚಲ ಪಂದ್ಯದ ಮೂರು ವಿಕೆಟ್ಗಳು ಸೇರಿವೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜ, ವರುಣ್ ಚಕ್ರವರ್ತಿ.