ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿಯೇ ನಡೆಯುವ 2023ರ ಐಸಿಸಿ ಏಕದಿನ ವಿಶ್ವಕಪ್ಗೆ ಇನ್ನು ಉಳಿದಿರುವುದು ಕೇವಲ ಒಂದು ತಿಂಗಳು ಮಾತ್ರ. ಹೀಗಾಗಿ ಎಲ್ಲ ತಂಡಗಳು ತಯಾರಿ ನಡೆಸುತ್ತಿದ್ದು, ತಮ್ಮ ಅತ್ಯುತ್ತಮ ಆಯ್ಕೆಗಳನ್ನು ಹುಡುಕುತ್ತಿವೆ.
ಇಂದು (ಮಂಗಳವಾರ, ಸೆಪ್ಟೆಂಬರ್ 5) ಮಧ್ಯಾಹ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಏಕದಿನ ವಿಶ್ವಕಪ್ಗಾಗಿ ಭಾರತ ತಂಡವನ್ನು ಪ್ರಕಟಿಸಲಿದೆ. ಈಗಾಗಲೇ ತಂಡವನ್ನು ಅಂತಿಮಗೊಳಿಸಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಇದಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಬ್ಯಾಟರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು 2023ರ ಐಸಿಸಿ ಏಕದಿನ ವಿಶ್ವಕಪ್ಗಾಗಿ 15 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ.
ತಮ್ಮ ಆಯ್ಕೆಯ ಭಾರತ ತಂಡವನ್ನು ತಿಳಿಸಿದ ಗೌತಮ್ ಗಂಭೀರ್, ಹಲವರಿಗೆ ಆಶ್ಚರ್ಯವಾಗುವಂತೆ ಒಂದೆರಡು ಅನಿರೀಕ್ಷಿತ ಬದಲಾವಣೆ ಮಾಡಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್ ಸಂವಾದದಲ್ಲಿ ಮಾತನಾಡಿದ ಗೌತಮ್ ಗಂಭೀರ್, ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಮತ್ತು ವೇಗಿ ಶಾರ್ದೂಲ್ ಠಾಕೂರ್ ಇಬ್ಬರೂ ತಮ್ಮ ತಂಡದಲ್ಲಿ ಸ್ಥಾನ ಪಡೆಯಲಿಲ್ಲ ಎಂದು ಬಹಿರಂಗಪಡಿಸಿದರು.
ಬದಲಾಗಿ, ಅವರು ನಾಲ್ಕನೇ ವೇಗದ ಬೌಲಿಂಗ್ ಆಯ್ಕೆಯಾಗಿ ಪ್ರಸಿದ್ಧ್ ಕೃಷ್ಣ ಮತ್ತು ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಸೇರಿಸಿಕೊಂಡರು.
ಬ್ಯಾಟಿಂಗ್ ವಿಭಾಗದಲ್ಲಿ ಗೌತಮ್ ಗಂಭೀರ್ ಅವರು ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಆಯ್ಕೆಯಾಗಿ ಕೆಎಲ್ ರಾಹುಲ್ ಅವರಿಗೆ ಸ್ಥಾನ ನೀಡಿದ್ದಾರೆ. ಇನ್ನು ಎಡಗೈ ಬ್ಯಾಟರ್ ಇಶಾನ್ ಕಿಶನ್ ಮೊದಲ ಆಯ್ಕೆಯ ವಿಕೆಟ್ ಕೀಪಿಂಗ್ ಆಯ್ಕೆಯಾಗಿದ್ದಾರೆ.
ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರ ಸ್ಪೆಷಲಿಸ್ಟ್ ಬ್ಯಾಟಿಂಗ್ ಆಯ್ಕೆಗಳಲ್ಲಿ ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಕೆಎಲ್ ರಾಹುಲ್ ಇದ್ದಾರೆ. ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.
ಆಲ್ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಗೌತಮ್ ಗಂಭೀರ್ ಆಯ್ಕೆ ಮಾಡಿದ್ದಾರೆ. ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಸೇರಿಸಿದ್ದಾರೆ.
ಇನ್ನು ಭಾರತ ತಂಡದ ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಅವರಂತಹ ಅನುಭವಿಗಳೊಂದಿಗೆ ಆಶ್ಚರ್ಯಕರ ರೀತಿಯಲ್ಲಿ ಪ್ರಸಿದ್ಧ್ ಕೃಷ್ಣಗೆ ಗೌತಮ್ ಗಂಭೀರ್ ಸ್ಥಾನ ನೀಡಿದ್ದಾರೆ.
ಗಾಯದಿಂದ ಚೇತರಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ಅವರು ಇತ್ತೀಚೆಗೆ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಪುನರಾಗಮನ ಮಾಡಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.