ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿದಿದ್ದು ಸತತ ಎರಡನೇ ಗೆಲುವಿನ ಮೇಲೆ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು ದೆಹಲಿ ಮೈದಾನದಲ್ಲಿ ತನ್ನದೇ ಆದ ರಣತಂತ್ರದೊಂದಿಗೆ ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಭಾರತ ಮೂವರು ವೇಗಿಗಳೊಂದಿಗೆ ಕಣಕ್ಕಿಳಿದ್ದು ಇಬ್ಬರು ಸ್ಪಿನ್ನರ್ಗಳು ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರ ಆರ್ ಅಶ್ವಿನ್ ಅವರನ್ನು ಆಡುವ ಬಳಗದಿಂದ ಹೊರಗಿಡಲಾಗಿದ್ದು ಅವರ ಸ್ಥಾನದಲ್ಲಿ ಶಾರ್ದೂಲ್ ಠಾಕೂರ್ಗೆ ಅವಕಾಶ ನೀಡಲಾಗಿದೆ. ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ನ ಈ ನಿರ್ಧಾರಕ್ಕೆ ಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಅದರಲ್ಲೂ ಮಾಹಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ವಿಚಾರವಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿರುದ್ಧ ಕಿಡಿಕಾರಿದ್ದಾರೆ.

ಆರ್ ಅಶ್ವಿನ್ ಅವರನ್ನು ಆಡುವ ಬಳಗದಿಂದ ಹೊರಗಿಟ್ಟಿರುವುದು ಸುನಿಲ್ ಗವಾಸ್ಕರ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಅವರು ಸ್ಟಾರ್ಸ್ಪೋರ್ಟ್ಸ್ ಜೊತೆಗೆ ಮಾತನಾಡುತ್ತಾ ತನ್ನ ಅಸಮಾಧಾನವನ್ನು ಹೊರಹಾಕಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಸುನಿಲ್ ಗವಾಸ್ಕರ್ಅನುಭವಿ ಆಟಗಾರ ಮೊಹಮ್ಮದ್ ಶಮಿ ಅವರಿಗೂ ಈ ಪಂದ್ಯದಲ್ಲಿ ಅವಕಾಶ ದೊರೆಯದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
"ಮತ್ತೆ ಆರ್ ಅಶ್ವಿನ್ ಅವಕಾಶ ಕಳೆದುಕೊಂಡಿದ್ದಾರೆ. ಆತ ಮಾಡಿದ ತಪ್ಪು ಏನು ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ಅವರ ಬದಲಿಗೆ 2019ರಲ್ಲಿ ಅಫ್ಘಾನಿಸ್ತಾನದ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದ ಶಮಿ ಅವರಿಗಾದರೂ ಅವಕಾಶ ದೊರೆಯಬಹುದು ಎಂದು ಕೊಂಡಿದ್ದೆ" ಎಂದು ಟೀಮ್ ಇಂಡಿಯಾದ ಆಯ್ಕೆಯ ಬಗ್ಗೆ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಈ ಪಂದ್ಯದಲ್ಲಿ ಅಶ್ವಿನ್ ಬದಲಿಗೆ ಶಾರ್ದೂಲ್ ಠಾಕೂರ್ಗೆ ಅವಕಾಶ ದೊರೆತಿದೆ.
ಇನ್ನು ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಟಾಸ್ ಗೆದ್ದು ಆರಂಭದಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಭಾರತಕ್ಕೆ ಒದಲಿಗೆ ಬೌಲಿಂಗ್ ನಡೆಸುವ ಸವಾಲು ದೊರೆತಿದೆ. ಟಾಸ್ ಸಂದರ್ಭದಲ್ಲಿ ಮಾತನಾಡಿದ ನಾಯಕ ರೋಹಿತ್ ಶರ್ಮಾ "ನಾವು ಕೂಡ ಎರಡನೇ ಸರದಿಯಲ್ಲಿ ಬ್ಯಾಟಿಂಗ್ ನಡೆಸಲು ನಿರ್ಧರಿಸಿದ್ದೆವು. ಕಳೆದ ಸಂಜೆ ಇಲ್ಲಿ ಇಬ್ಬನಿ ಬಿದ್ದಿರುವುದು ಗಮನಿಸಿದ್ದೇವೆ. ಹಾಗಾಗಿ ಎರಡನೇ ಸರದಿಯಲ್ಲಿ ಪಿಚ್ನಲ್ಲಿ ಹೆಚ್ಚಿನ ಬದಲಾವಣೆ ಯಾಗಲಿದೆ ಎನಿಸುತ್ತಿಲ್ಲ" ಎಂದಿದ್ದಾರೆ.
ಅಫ್ಘಾನಿಸ್ತಾನ್ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜೀಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಝೈ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ
ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್