ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಸೇರ್ಪಡೆಗೊಳಿಸುವ ಕುರಿತು ಚರ್ಚಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ, ಜನವರಿ 7ರಂದು ಮುಂಬೈನಲ್ಲಿ ಸಭೆ ನಡೆಸಲಿದೆ.
ಜನವರಿ 11ರಂದು ಪ್ರಾರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ಇನ್ನೂ ತನ್ನ ತಂಡವನ್ನು ಪ್ರಕಟಿಸಿಲ್ಲ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಆಯ್ಕೆ ವಿಚಾರವೇ ಬಿಸಿಸಿಐಗೆ ನುಂಗಲಾದರ ಬಿಸಿತುಪ್ಪವಾಗಿ ಪರಿಣಮಿಸಿದೆ.
ಶನಿವಾರ, ಜನವರಿ 6ರಂದು ಅಫ್ಘಾನಿಸ್ತಾನ ತನ್ನ 19 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದ್ದರೆ, ಬಿಸಿಸಿಐ ಆಯ್ಕೆ ಸಮಿತಿಯು ಭಾನುವಾರದ ಸಭೆಯ ನಂತರ, ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.

2022ರ ಟಿ20 ವಿಶ್ವಕಪ್ನ ಸೆಮಿಫೈನಲ್ ನಂತರ, ಒಂದೇ ಒಂದು ಟಿ20 ಪಂದ್ಯವಾಡದ ರೋಹಿತ್ ಶರ್ಮಾ, 2024ರ ವಿಶ್ವಕಪ್ಗೆ ಮೊದಲು ಅಂತಿಮ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ.
ಇದೇ ವೇಳೆ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ತಮ್ಮ ಕೊನೆಯ ಟಿ20 ಪ್ರದರ್ಶನವನ್ನು 2022ರ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ನೀಡಿದ್ದರು. ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಅವರು ಮರಳುವ ನಿರೀಕ್ಷೆಯಿದೆ.
ವಿರಾಟ್ ಕೊಹ್ಲಿ ಅವರ ಇತ್ತೀಚಿನ ಬ್ಯಾಟಿಂಗ್ ಫಾರ್ಮ್ ಅದ್ಭುತವಾಗಿದ್ದು, 2023ರ ಏಕದಿನ ವಿಶ್ವಕಪ್ನಲ್ಲಿ ಮೂರು ಶತಕಗಳು ಸೇರಿದಂತೆ 750ಕ್ಕೂ ಅಧಿಕ ರನ್ ಗಳಿಸಿದರು.
ಆದರೆ, ತಂಡದ ಸಂಯೋಜನೆಯಲ್ಲಿ ಈ ಅನುಭವಿ ಆಟಗಾರರ ಪುನರಾಗಮನದ ಪರಿಣಾಮವನ್ನು ಪರಿಗಣಿಸಿ, ಆಯ್ಕೆ ಸಮಿತಿಯು ಸವಾಲಿನ ನಿರ್ಧಾರವನ್ನು ಎದುರಿಸುತ್ತಾರೆ.
ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಇಬ್ಬರೂ ಟಿ20 ಪಂದ್ಯಗಳಲ್ಲಿ ಭಾಗವಹಿಸಲು ತಮ್ಮ ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ ಮತ್ತು ಅವರು ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿಗೆ ಮರಳುವ ಸಾಧ್ಯತೆ ಇದೆ.

ಅದೇನೇ ಇದ್ದರೂ, 2024ರ ಟಿ20 ವಿಶ್ವಕಪ್ನಲ್ಲಿ ಈ ಇಬ್ಬರು ಅನುಭವಿ ಆಟಗಾರರ ಭಾಗವಹಿಸುವಿಕೆಯ ಅಂತಿಮ ನಿರ್ಧಾರವು, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಪ್ರದರ್ಶನವನ್ನು ಅವಲಂಬಿಸಿರುತ್ತದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಬಿಸಿಸಿಐನ ಉನ್ನತ ಅಧಿಕಾರಿಗಳು ದಕ್ಷಿಣ ಆಫ್ರಿಕಾದಿಂದ ಹಿಂತಿರುಗುತ್ತಿರುವ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಇನ್ನು ಗಾಯದ ಕಾರಣ, ಸೂರ್ಯಕುಮಾರ್ ಯಾದವ್ ಅವರು ಅಫ್ಘಾನಿಸ್ತಾನ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆ. ಅಲ್ಲದೆ, 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಉಂಟಾದ ಪಾದದ ಗಾಯದಿಂದಾಗಿ ಹಾರ್ದಿಕ್ ಪಾಂಡ್ಯ ಕೂಡ ಟಿ20 ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ.
ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಂಕು ಸಿಂಗ್, ಜಿತೇಶ್ ಶರ್ಮಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ದೀಪಕ್ ಚಹಾರ್.