ಮಂಗಳವಾರ, ನವೆಂಬರ್ 28ರಂದು ಗುವಾಹಟಿಯ ಬರ್ಸಾಪರಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಪರಸ್ಪರ ಸೆಣಸಾಡುತ್ತಿವೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸೂರ್ಯಕುಮಾರ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ 2-0 ಅಂತರದ ಮುನ್ನಡೆ ಸಾಧಿಸಿದ್ದು, ಇಂದಿನ ಪಂದ್ಯ ಗೆದ್ದು ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವ ಉದ್ದೇಶ ಹೊಂದಿದೆ.

ಮೊದಲ ಟಿ20 ಪಂದ್ಯದಲ್ಲಿ 209 ರನ್ಗಳ ಬೃಹತ್ ಟಾರ್ಗೆಟ್ ಅನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ ತಂಡ, ಎರಡನೇ ಪಂದ್ಯದಲ್ಲಿ 4 ವಿಕೆಟ್ಗೆ 235 ರನ್ಗಳ ಬೃಹತ್ ಮೊತ್ತವನ್ನು ಗಳಿಸಿತು ಮತ್ತು ಆಸೀಸ್ ಪಡೆಯನ್ನು 191 ರನ್ಗಳಿಗೆ ನಿಯಂತ್ರಿಸಿತು.
ಮತ್ತೊಂದೆಡೆ, ಮ್ಯಾಥ್ಯೂ ವೇಡ್ ನಾಯಕತ್ವದ ಯುವ ಆಸ್ಟ್ರೇಲಿಯಾ ತಂಡವು ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ, ತನ್ನ ಅತ್ಯುತ್ತಮ ಪ್ರದರ್ಶನವನ್ನು ಹೊರಹಾಕಬೇಕಿದೆ.
ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಆರನ್ ಹಾರ್ಡಿ, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್(ನಾಯಕ/ ವಿಕೆಟ್ ಕೀಪರ್), ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವೀರ್ ಸಂಘ, ಕೇನ್ ರಿಚರ್ಡ್ಸನ್.