
ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಮಾರ್ಚ್ 1ರಿಂದ ಇಂದೋರ್ ನಲ್ಲಿ 3ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ದೆಹಲಿಯಲ್ಲಿ ನಡೆದ ಟೆಸ್ಟ್ ಪಂದ್ಯವನ್ನು ಮೂರೇ ದಿನಕ್ಕೆ ಗೆಲುವು ಸಾಧಿಸಿದ ನಂತರ ಭಾರತ ತಂಡದ ಆಟಗಾರರು ವಿಶ್ರಾಂತಿ ಪಡೆದುಕೊಂಡಿದ್ದರು. 6 ದಿನಗಳ ಕಾಲ ವಿಶ್ರಾಂತಿ ಪಡೆದುಕೊಂಡ ನಂತರ ಭಾರತ ತಂಡದ ಆಟಗಾರರು, ಇಂದೋರ್ ಗೆ ತೆರಳಿದ್ದು ಅಭ್ಯಾಸ ಆರಂಭಿಸಿದ್ದಾರೆ.
ವಿರಾಟ್ ಕೊಹ್ಲಿ, ಕೆಎಸ್ ಭರತ್ ಮತ್ತು ರವೀಂದ್ರ ಜಡೇಜಾ ಹೋಳ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ಅಭ್ಯಾಸ ನಡೆಸಿದ್ದರು. ತಂಡದ ಉಳಿದ ಆಟಗಾರರು ಸೋಮವಾರದಿಂದ ಅಭ್ಯಾಸ ಆರಂಭಿಸಿದ್ದಾರೆ. ತಂಡದ ಎಲ್ಲಾ ಆಟಗಾರರು ಸೋಮವಾರ ಅಭ್ಯಾಸದಲ್ಲಿ ಪಾಲ್ಗೊಂಡರು.
ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅಭ್ಯಾಸಕ್ಕೆ ಮುನ್ನ ಆರಂಭಿಕ ಬ್ಯಾಟರ್ ಕೆಎಲ್ ರಾಹುಲ್ ಮತ್ತು ಶುಭಮನ್ ಗಿಲ್ಗೆ ಸ್ಪೆಷಲ್ ಕ್ಲಾಸ್ ತೆಗೆದುಕೊಂಡರು. ಫಾರ್ಮ್ ಕಳೆದುಕೊಂಡು ಪರದಾಡುತ್ತಿರುವ ಕೆಎಲ್ ರಾಹುಲ್ 3ನೇ ಟೆಸ್ಟ್ನಲ್ಲಿ ಸ್ಥಾನ ಪಡೆಯುವುದು ಅನುಮಾನ ಎನ್ನಲಾಗಿದೆ. ಅವರ ಬದಲಾಗಿ ಶುಭಮನ್ ಗಿಲ್ ಅವಕಾಶ ಪಡೆಯುವ ಸಾಧ್ಯತೆ ಇದೆ.

3ನೇ ಟೆಸ್ಟ್ ಗೆಲ್ಲುವ ವಿಶ್ವಾಸದಲ್ಲಿ ಭಾರತ ತಂಡ
ಸರಣಿಯ ಮೊದಲ ಎರಡೂ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಇಂದೋರ್ ನಲ್ಲಿ ಕೂಡ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಬಲಿಷ್ಠವಾಗಿರುವ ಭಾರತ ತಂಡ ಮೂರನೇ ಟೆಸ್ಟ್ನಲ್ಲಿ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆಯಲು ಭಾರತ ಉಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಇಂದೋರ್ ಟೆಸ್ಟ್ನಲ್ಲಿ ಭಾರತ ಗೆಲುವು ಸಾಧಿಸಿದರೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆದುಕೊಳ್ಳಲಿದೆ. ಅಲ್ಲದೆ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಲಿದೆ.

ಪ್ಯಾಟ್ ಕಮ್ಮಿನ್ಸ್ ಅಲಭ್ಯತೆ
ಮೂರನೇ ಟೆಸ್ಟ್ಗೆ ಮುನ್ನ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ತಾಯಿಯ ಅನಾರೋಗ್ಯದ ಕಾರಣದಿಂದ ಅವರು ವಾಪಸ್ ಹೋಗಿದ್ದು, ಮುಂದಿನ ಎರಡೂ ಟೆಸ್ಟ್ ಪಂದ್ಯಗಳಿಗೂ ಅಲಭ್ಯರಾಗಿದ್ದಾರೆ.
ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನದ್ಕತ್.