
ಗುರುವಾರ, ಫೆಬ್ರವರಿ 9ರಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮೊದಲ ಪಂದ್ಯಕ್ಕೆ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಸಜ್ಜಾಗಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯು ಪ್ರಸ್ತುತ ವಿಶ್ವದ ಅತಿದೊಡ್ಡ ಟೆಸ್ಟ್ ಕದನವಾಗಿ ಮಾರ್ಪಟ್ಟಿದೆ. ತವರಿನಲ್ಲಿ ಭಾರತ ತಂಡವೇ ಫೇವರಿಟ್ ಆಗಿದ್ದರೂ, ಐಸಿಸಿ ಅಗ್ರ ಶ್ರೇಯಾಂಕದ ಆಸ್ಟ್ರೇಲಿಯಾ ತಂಡ ಆತಿಥೇಯರಿಗೆ ಸವಾಲು ಹಾಕಲು ಕೆಲವು ವಿಶಿಷ್ಟ ಕ್ರಮಗಳನ್ನು ಅಳವಡಿಸಿಕೊಂಡಿದೆ.
ಇದೀಗ ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಕುರಿತು ಮಾತನಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಟೆಸ್ಟ್ ಸರಣಿ ಗೆಲ್ಲಬೇಕಾದರೆ, ವಿರಾಟ್ ಕೊಹ್ಲಿ ದೊಡ್ಡ ರನ್ ಗಳಿಸಿದರೆ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿದ ಹರ್ಭಜನ್, ಕೊಹ್ಲಿಯಂತಹ ಆಟಗಾರನಿಗೆ ವಿಶ್ವದ ಎಲ್ಲಾ ಪ್ರಶಂಸೆಗಳು ಸಾಕಾಗುವುದಿಲ್ಲ, ಅವರು ಶತಕ ಗಳಿಸಿದಾಗ ಮಾತ್ರ ನೋಡುಗರು ಅವರನ್ನು ಫಾರ್ಮ್ನಲ್ಲಿದ್ದಾರೆ ಎಂದು ಪರಿಗಣಿಸುತ್ತಾರೆ ಎಂದು ಹೇಳಿದರು.
ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿದ ಹರ್ಭಜನ್ ಸಿಂಗ್, "ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ವದ ಎಲ್ಲ ಹೊಗಳಿಕೆಗಳು ಮಾತ್ರ ಸಾಕಾಗುವುದಿಲ್ಲ, ಬದಲಾಗಿ ಅವರು ಶತಕ ಬಾರಿಸಿದಾಗ ಮಾತ್ರ ವೀಕ್ಷಕರು ಅವರು ಫಾರ್ಮ್ನಲ್ಲಿದ್ದಾರೆಂದು ಭಾವಿಸುತ್ತಾರೆ," ಎಂದು ತಿಳಿಸಿದರು.
"ಆದರೆ, ಟೆಸ್ಟ್ ಕ್ರಿಕೆಟ್ನಲ್ಲಿ ಕಳೆದ ಮೂರು ವರ್ಷಗಳು ವಿರಾಟ್ ಕೊಹ್ಲಿಗೆ ಅವರ ಗುಣಮಟ್ಟ ಆಟಕ್ಕೆ ತಕ್ಕಂತೆ ಉತ್ತಮವಾಗಿರಲಿಲ್ಲ," ಎಂದು ಹರ್ಭಜನ್ ಹೇಳಿದ್ದಾರೆ.
ಇದೇ ವೇಳೆ ಮಾತು ಮುಂದುವರೆಸಿದ ಹರ್ಭಜನ್ ಸಿಂಗ್, ವಿರಾಟ್ ಕೊಹ್ಲಿ ಬ್ಯಾಟಿಂಗ್ ಫಾರ್ಮ್ಗೆ ಮರಳಿದ್ದು, ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಹೆಚ್ಚಿನ ರನ್ ಗಳಿಸಲಿದ್ದಾರೆ ಎಂದು ಹೇಳಿದರು.

"ವಿರಾಟ್ ಕೊಹ್ಲಿ ವೈಟ್ಬಾಲ್ ಕ್ರಿಕೆಟ್ನಲ್ಲಿ ಫಾರ್ಮ್ಗೆ ಮರಳಿದ್ದಾರೆ ಮತ್ತು ಈಗಾಗಲೇ ಒಂದು ತಿಂಗಳ ಅಂತರದಲ್ಲಿ ಮೂರು ಶತಕಗಳನ್ನು ಬಾರಿಸಿದ್ದಾರೆ. ಕಳೆದೆರಡು ವರ್ಷಗಳಲ್ಲಿ ರನ್ ಗಳಿಸುತ್ತಿದ್ದರು, ಆದರೆ ಶತಕಗಳನ್ನಾಗಿ ಪರಿವರ್ತಿಸಲು ಸಾಧ್ಯವಾಗುತ್ತಿರಲಿಲ್ಲ".
"ಆಸ್ಟ್ರೇಲಿಯಾ ವಿರುದ್ಧದ ಸರಣಿಯು ಟೆಸ್ಟ್ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಫಾರ್ಮ್ಗೆ ಮರಳುವ ಮತ್ತು ಅಧಿಕ ರನ್ ಗಳಿಸುವ ಸರಣಿ ಎಂದು ನಾನು ಭಾವಿಸುತ್ತೇನೆ. ವಿರಾಟ್ ಕೊಹ್ಲಿ ಫಾರ್ಮ್ನಲ್ಲಿದ್ದಾಗ, ಅವರನ್ನು ತಡೆಯುವುದು ತುಂಬಾ ಕಷ್ಟ," ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅಭಿಪ್ರಾಯಟ್ಟಿದ್ದಾರೆ.
ಒಂದು ವೇಳೆ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆಲ್ಲಬೇಕಾದರೆ, ವಿರಾಟ್ ಕೊಹ್ಲಿ ತಂಡಕ್ಕಾಗಿ ದೊಡ್ಡ ರನ್ ಗಳಿಸಿದರೆ ಮಾತ್ರ ಸಾಧ್ಯ ಎಂದು ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ತಿಳಿಸಿದರು.
ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತದ ಪೂರ್ಣ ಟೆಸ್ಟ್ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.