
ತೀವ್ರ ಬೆನ್ನುನೋವಿನಿಂದಾಗಿ ಅಹಮದಾಬಾದ್ನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ಗೆ ಇಳಿಯದ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.
ಹೀಗಾಗಿ ಶ್ರೇಯಸ್ ಅಯ್ಯರ್ ಅವರ ಸ್ಥಾನಕ್ಕೆ ಬಿಸಿಸಿಐ ಸೂಕ್ತ ಆಟಗಾರನ ಹುಡುಕಾಟ ನಡೆಸುತ್ತಿದೆ ಎಂದು ವರದಿಯಾಗಿದ್ದು, ಒಂದೆರಡು ದಿನಗಳಲ್ಲಿ ಬಿಸಿಸಿಐ ಶ್ರೇಯಸ್ ಅಯ್ಯರ್ ಅವರ ಸ್ಥಾನಕ್ಕೆ ಬದಲಿ ಆಟಗಾರನನ್ನು ಹೆಸರಿಸಬಹುದು. ಕೇರಳ ಮೂಲದ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಮತ್ತೆ ಭಾರತದ ಏಕದಿನ ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ.
ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿದಾಗ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಪರಿಗಣಿಸಿರಲಿಲ್ಲ. ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದ ವೇಳೆ ಗಾಯಗೊಂಡಿದ್ದ ಸಂಜು ಸ್ಯಾಮ್ಸನ್ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ.

ಭಾರತ ತಂಡಕ್ಕೆ ಪುನರಾಗಮನದ ಭಾಗವಾಗಿಯೇ ಸಂಜು ಸ್ಯಾಮ್ಸನ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಯಲ್ಲಿ ತರಬೇತಿ ಪಡೆದಿದ್ದಾರೆ. ಶ್ರೇಯಸ್ ಅಯ್ಯರ್ ಬದಲಿಗೆ ಸಂಜು ಸ್ಯಾಮ್ಸನ್ ಮುಂಚೂಣಿಯಲ್ಲಿದ್ದಾರೆ.
"ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದ ಆಟದ ನಂತರ ಶ್ರೇಯಸ್ ಅಯ್ಯರ್ ತಮ್ಮ ಬೆನ್ನಿನ ಕೆಳಭಾಗದಲ್ಲಿ ನೋವಿನಿಂದ ಬಳಲುತ್ತಿದ್ದರು. ಶ್ರೇಯಸ್ ಅಯ್ಯರ್ ಸ್ಕ್ಯಾನ್ಗೆ ಹೋಗಿದ್ದಾರೆ ಮತ್ತು ಬಿಸಿಸಿಐ ವೈದ್ಯಕೀಯ ತಂಡವು ಅವರ ಮೇಲೆ ನಿಗಾ ಇರಿಸಿದೆ," ಎಂದು ಬಿಸಿಸಿಐ ಭಾನುವಾರ ಬೆಳಿಗ್ಗೆ ಹೇಳಿಕೆ ಬಿಡುಗಡೆ ಮಾಡಿತ್ತು.
ಸ್ಕ್ಯಾನಿಂಗ್ ವರದಿ ಪ್ರಕಾರ, ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ತೃಪ್ತಿಕರವಾಗಿಲ್ಲ. ಹೀಗಾಗಿ ಚಿಕಿತ್ಸೆ ಮುಂದುವರೆಸಲಾಗುವುದು. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಅವರನ್ನು ಹೊರಗಿಡುವ ಸಾಧ್ಯೆ ಹೆಚ್ಚಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿಯ ಪ್ರಕಾರ, ಶ್ರೇಯಸ್ ಅಯ್ಯರ್ ನಡೆಯಲು ಕಷ್ಟಪಡುತ್ತಿದ್ದಾರೆ. ಇದರಿಂದಾಗಿ ಐಪಿಎಲ್ ಪಂದ್ಯಾವಳಿಯ ಆರಂಭಿಕ ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು. ಒಂದು ವೇಳೆ ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆಗೆ ಒಳಗಾದರೆ, ಮೂರ್ನಾಲ್ಕು ತಿಂಗಳುಗಳವರೆಗೆ ಕ್ರಿಕೆಟ್ನಿಂದ ಹೊರಗುಳಿಯಬಹುದು.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ತಂಡದಿಂದ ಹೊರಗುಳಿದ ನಂತರ, ಶ್ರೇಯಸ್ ಅಯ್ಯರ್ 2ನೇ ಮತ್ತು 3ನೇ ಟೆಸ್ಟ್ ಪಂದ್ಯಗಳಲ್ಲಿ ತಂಡಕ್ಕೆ ಮರಳಿದರು. ಇನ್ನು 4ನೇ ಟೆಸ್ಟ್ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧರಾಗಿದ್ದರು. ಇದೇ ವೇಳೆ ದಿಢೀರ್ ಆಗಿ ಕಾಣಿಸಿಕೊಂಡ ಬೆನ್ನಿನ ನೋವು ಅವರನ್ನು ಮೈದಾನದಿಂದ ಹೊರಗೆ ಕುಳಿತುಕೊಳ್ಳುವಂತೆ ಮಾಡಿತು.