
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠತ ಬಾರ್ಡರ್-ಗವಾಸ್ಕರ್ ಟ್ರೋಫಿ ಅಂತ್ಯವಾಗಿದೆ. ಅಹ್ಮದಾಬಾದ್ನಲ್ಲಿ ನಡೆದ ಪಂದ್ಯ ಡ್ರಾ ಆಗುವ ಮೂಲಕ ಅಂತ್ಯವಾದ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ. ಈ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಏಕದಿನ ಸರಣಿಯಲ್ಲಿ ಸೆಣೆಸಾಡಲಿದ್ದು ಸರಣಿ ಕುತೂಹಲ ಮೂಡಿಸಿದೆ.
ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು ಮಾರ್ಚ್ 17ರಂದು ಈ ಪಂದ್ಯ ಆಯೋಜನೆಯಾಗಲಿದೆ. ಈ ಪಂದ್ಯದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಆಟಗಾರರು ಮುಂಬೈನತ್ತ ಪ್ರಯಾಣಿಸಿದ್ದಾರೆ. ಅಹ್ಮದಾಬಾದ್ ಟೆಸ್ಟ್ ಪಂದ್ಯವನ್ನು ಮುಗಸಿದ ಬಳಿಕ ಏಕದಿನ ಸರಣಿಯಲ್ಲಿ ಭಾಗಿಯಾಗಲಿರುವ ಆಟಗಾರರು ಮುಂಬೈಗೆ ಬಂದಿಳಿದಿದ್ದಾರೆ.
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶುಬ್ಮನ್ ಗಿಲ್ ಮೊದಲಾದ ಅಟಗಾರರು ಇಂದು ಮುಂಬೈಗೆ ತಲುಪಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿಗೆ ಮಾರ್ಚ್ 15ರಿಂದ ಭಾರತೀಯ ಆಟಗಾರರ ಅಭ್ಯಾಸ ಆರಂಭವಾಗಲಿದೆ.
ಮೂರು ಪಂದ್ಯಗಳ ಈ ಸರಣಿ ಮುಂಬೈ, ವಿಶಾಖಪಟ್ಟಣಂ ಹಾಗೂ ಚೆನ್ನೈನಲ್ಲಿ ನಡೆಯಲಿದೆ. ಗಮನಿಸಬೇಕಾದ ಅಂಶವೆಂದರೆ ಮುಂಬೈನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯವಾಗಲಿದ್ದು ಕೌಟುಂಬಿಕ ಕಾರಣದಿಂದಾಗಿ ಅವರು ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಲಿದ್ದಾರೆ.
ಇನ್ನು ಕಳೆದ ಏಳು ತಿಂಗಳಿನಿಂದ ಏಕದಿನ ಕ್ರಿಕೆಟ್ನಿಂದ ದೂರವಿದ್ದ ರವೀಂದ್ರ ಜಡೇಜಾ ಭಾರತ ತಂಡಕ್ಕೆ ಈ ಸರಣಿಯ ಮೂಲಕ ಕಮ್ಬ್ಯಾಕ್ ಮಾಡಲಿದ್ದಾರೆ. ಇನ್ನು ಬಹುತೇಕ ಹತ್ತು ವರ್ಷದ ಬಳಿಕ ಜಯ್ದೇವ್ ಉನಾದ್ಕಟ್ ಕೂಡ ಭಾರತ ಏಕದಿನ ತಂಡದ ಭಾಗವಾಗಿದ್ದಾರೆ.
ಭಾರತದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.
ಆಸ್ಟ್ರೇಲಿಯಾ ಏಕದಿನ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಶಾನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೈನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಜ್ಯೆ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ