ಮಂಗಳವಾರ, ನವೆಂಬರ್ 28ರಂದು ಗುವಾಹಟಿಯ ಬರ್ಸಾಪರಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ಆತಿಥೇಯ ಭಾರತ ಬೃಹತ್ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ರುತುರಾಜ್ ಗಾಯಕ್ವಾಡ್ ಅವರ ಸ್ಫೋಟಕ ಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್ಗಳನ್ನು ಪೇರಿಸಿದ್ದು, ಆಸ್ಟ್ರೇಲಿಯಾ ತಂಡಕ್ಕೆ 20 ಓವರ್ಗಳಲ್ಲಿ 223 ರನ್ಗಳ ಬೃಹತ್ ಗುರಿ ನೀಡಿದೆ.

ಭಾರತ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ರುತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ನೀಡಲಾಗಲಿಲ್ಲ. ತಂಡದ ಮೊತ್ತ 14 ರನ್ಗಳಾಗಿದ್ದಾಗ ವೈಯಕ್ತಿಕ 6 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್ ವಿಕೆಟ್ ಒಪ್ಪಿಸಿದರು. ನಂತರ ಬಂದ ಇಶಾನ್ ಕಿಶನ್ ಕೂಡ ಜಾಸ್ತಿ ಹೊತ್ತು ನಿಲ್ಲದೆ ಖಾತೆ ತೆರೆಯುವ ಮುನ್ನವೇ ಔಟಾದರು.
ಭಾರತ 2.3 ಓವರ್ಗಳಲ್ಲಿ 24 ರನ್ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಬಂದ ನಾಯಕ ಸೂರ್ಯಕುಮಾರ್ ಯಾದವ್ ಅವರು ಆರಂಭಿಕ ರುತುರಾಜ್ ಜೊತೆಗೂಡಿ ಮೂರನೇ ವಿಕೆಟ್ಗೆ 57 ರನ್ಗಳ ಜೊತೆಯಾಟ ನಿರ್ಮಿಸಿ ಆರಂಭಿಕ ಹಿನ್ನಡೆಯಿಂದ ಪಾರು ಮಾಡಿದರು.
ಈ ವೇಳೆ ನಾಯಕ ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 39 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್ಗೆ ಬಂದ ತಿಲಕ್ ವರ್ಮಾ 24 ಎಸೆತಗಳಲ್ಲಿ 4 ಬೌಂಡರಿ ಮೂಲಕ ಅಜೇಯ 31 ರನ್ ಗಳಿಸಿದರು.
ಇನ್ನು ಆರಂಭಿಕ ರುತುರಾಜ್ ಗಾಯಕ್ವಾಡ್ ಕೊನೆಯವರೆಗೂ ಅಬ್ಬರದ ಬ್ಯಾಟಿಂಗ್ ಮಾಡಿದರು ಮತ್ತು ಕೇವಲ 57 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ಗಳ ನೆರವಿನಿಂದ ಅಜೇಯ 123 ರನ್ ಬಾರಿಸಿದರು.
ಬೌಲಿಂಗ್ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಜೇಸನ್ ಬೆಹ್ರೆಂಡಾರ್ಫ್ ಹೊರತುಪಡಿಸಿ ಉಳಿದೆಲ್ಲ ಬೌಲರ್ಗಳು ದುಬಾರಿಯಾದರು. ಕೇನ್ ರಿಚರ್ಡ್ಸನ್, ಜೇಸನ್ ಬೆಹ್ರೆಂಡಾರ್ಫ್ ಮತ್ತು ಆರನ್ ಹಾರ್ಡಿ ತಲಾ ಒಂದೊಂದು ವಿಕೆಟ್ ಪಡೆದರು.