ಪರ್ತ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಈಗ ಅಡಿಲೇಡ್ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತಯಾರಾಗುತ್ತಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಭಾರತ ಗೆಲ್ಲುವು ನಿರೀಕ್ಷೆಯಿದೆ. ಆದರೆ ತವರಿನಲ್ಲಿ ಈ ಬಾರಿ ಆಸ್ಟ್ರೇಲಿಯಾವನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಪರ್ತ್ ಟೆಸ್ಟ್ ಪಂದ್ಯದ ಸೋಲಿನ ಬಳಿಕ ಟೀಮ್ ಇಂಡಿಯಾವನ್ನು ಕಟ್ಟಿ ಹಾಕಲು ಆಸೀಸ್ ಪಡೆ ಯೋಜನೆ ರೂಪಿಸಿದೆ. ಇದರ ಮಧ್ಯೆ ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆಯ ಮಾತುಗಳು ಕೇಳಿ ಬರುತ್ತಿವೆ.
ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 295 ರನ್ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಶನಿವಾರದಿಂದ ಕ್ಯಾನ್ಬೆರಾದಲ್ಲಿರುವ ಮನುಕಾ ಓವಲ್ ಮೈದಾನದಲ್ಲಿ ಆಸ್ಟ್ರೇಲಿಯಾ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧ ಭಾರತ ಎರಡು ದಿನಗಳ ಹಗಲು-ರಾತ್ರಿ ಅಭ್ಯಾಸ ಪಂದ್ಯವನ್ನು ಆಡಲಿದೆ. ಅದಕ್ಕೂ ಮುನ್ನ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆಗಳನ್ನು ಮಾಡಲಿದೆ ಎಂದು ಭಾರತದ ಮಾಜಿ ದಿಗ್ಗಜ ಬ್ಯಾಟರ್ ಸುನಿಲ್ ಗವಾಸ್ಕರ್ ಭವಿಷ್ಯ ಸುಳಿವು ಕೊಟ್ಟಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಸುನಿಲ್ ಗವಾಸ್ಕರ್, 'ಖಂಡಿತವಾಗಿಯೂ ಭಾರತ ತಂಡದಲ್ಲಿ ಎರಡು ಬದಲಾವಣೆಗಳಾಗುತ್ತವೆ ಅಂದುಕೊಂಡಿದ್ದೇನೆ. ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಯಾಗಬಹುದು. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಇಬ್ಬರೂ ಆಡುವ ಹನ್ನೊಂದರಲ್ಲಿ ಸೇರು ಸಾಧ್ಯತೆಯಿದೆ. ಕೆಎಲ್ ರಾಹುಲ್ ಬದಲಿಗೆ ರೋಹಿತ್ ಶರ್ಮಾ, ಮೂರನೇ ಕ್ರಮಾಂಕದಲ್ಲಿ ಶುಭಮನ್ ಗಿಲ್ ಬ್ಯಾಟಿಂಗ್ ಮಾಡಲಿದ್ದಾರೆ. ಇಂತಹ ಸಂದರ್ಭದಲ್ಲಿ ದೇವದತ್ ಪಡಿಕ್ಕಲ್ ಮತ್ತು ಧ್ರುವ್ ಜುರೆಲ್ ತಂಡದಿಂದ ಹೊರಗುಳಿಯಲಿದ್ದಾರೆ, ಆದರೆ ರಾಹುಲ್ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಎಂದು ಸುಳಿವು ಬಿಟ್ಟು ಕೊಟ್ಟಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಅಡಿಲೇಡ್ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ನಡೆಯಲಿದೆ. ಕ್ಯಾನ್ಬೆರಾದಲ್ಲಿ ನಡೆಯಲಿರುವ ಪಿಂಕ್ ಬಾಲ್ ಅಭ್ಯಾಸ ಟೆಸ್ಟ್ ಪಂದ್ಯವು ಭಾರತಕ್ಕೆ ಬಹಳ ಮಹತ್ವದ್ದಾಗಿದೆ. ಏಕೆಂದರೆ ಅಡಿಲೇಡ್ನಲ್ಲಿ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ಗೆ ಮೊದಲು ಇದು ಏಕೈಕ ಅಭ್ಯಾಸ ಪಂದ್ಯವಾಗಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ನಾಯಕ ರೋಹಿತ್ ಶರ್ಮಾ ಅವರಿಗೆ ಇದು ಮೊದಲ ಪಂದ್ಯವಾಗಿದ್ದು, ಎರಡನೇ ಮಗುವಿನ ಜನನದ ಕಾರಣ ಪರ್ತ್ನಲ್ಲಿ ಮೊದಲ ಟೆಸ್ಟ್ ಆಡಲು ಸಾಧ್ಯವಾಗಲಿಲ್ಲ.
2020 ರಲ್ಲಿ ಅಡಿಲೇಡ್ನಲ್ಲಿ ಕೊನೆಯ ಬಾರಿಗೆ ಭಾರತವು ಹಗಲು-ರಾತ್ರಿ ಟೆಸ್ಟ್ ಆಡಿದ್ದು, ಆ ಪಂದ್ಯದಲ್ಲಿ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೊದಲ ಇನ್ನಿಂಗ್ಸ್ನಲ್ಲಿ 45 ರನ್ಗಳಿಗೆ 4 ವಿಕೆಟ್ ಪಡೆದಿದ್ದರು. ಆದರೆ, ಈ ಬಾರಿ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಸುನಿಲ್ ಗವಾಸ್ಕರ್ ಅವರ ಚಿಂತನೆ ಸಂಪೂರ್ಣ ಭಿನ್ನವಾಗಿದೆ. ವಾಷಿಂಗ್ಟನ್ ಸುಂದರ್ ಬದಲಿಗೆ ರವೀಂದ್ರ ಜಡೇಜಾ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಕರೆತರುವಂತೆ ಸುನಿಲ್ ಗವಾಸ್ಕರ್ ಹೇಳಿದ್ದಾರೆ.