
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು(ಬಿಸಿಸಿಐ) ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಮತ್ತು ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಭಾರತದ ಪ್ರತ್ಯೇಕ ತಂಡಗಳನ್ನು ಪ್ರಕಟಿಸಿದೆ.
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ವಿಶ್ರಾಂತಿ ಪಡೆದ ನಂತರ ರೋಹಿತ್ ಶರ್ಮಾ ಟೆಸ್ಟ್ ತಂಡಕ್ಕೆ ನಾಯಕನಾಗಿ ಮರಳಿದ್ದು, ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಪಂದ್ಯಗಳಿಗೆ ಭಾರತ 17 ಸದಸ್ಯರ ತಂಡವನ್ನು ಪ್ರಕಟಿಸಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 9ರಿಂದ ನಾಗ್ಪುರದಲ್ಲಿ ನಡೆಯಲಿದೆ. ಜಸ್ಪ್ರೀತ್ ಬುಮ್ರಾ ಮೊದಲ ಎರಡು ಟೆಸ್ಟ್ಗಳಿಂದ ಹೊರಗುಳಿದಿದ್ದು, ನಂತರದ ಪಂದ್ಯಗಳಿಗೆ ಆಯ್ಕೆಯಾಗುವ ಸಾಧ್ಯತೆ ಇದೆ.
ಟಿ20 ಸ್ಪೆಷಲಿಸ್ಟ್ ಬ್ಯಾಟ್ಸ್ಮನ್ ಎಂದೇ ಪರಿಗಣಿಸಲ್ಪಟ್ಟಿರುವ ಸೂರ್ಯಕುಮಾರ್ ಯಾದವ್ ಅವರನ್ನು ಇದೇ ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಲ್ಲದೆ, ಇಶಾನ್ ಕಿಶನ್ ಕೂಡ ಭಾರತ ಟೆಸ್ಟ್ ತಂಡದಲ್ಲಿ ಎರಡನೇ ವಿಕೆಟ್ ಕೀಪರ್- ಬ್ಯಾಟರ್ ಆಗಿ ಆಯ್ಕೆಯಾಗಿದ್ದಾರೆ.
ಗಾಯಾಳು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಕೆಎಸ್ ಭರತ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಆಡುವ ಸಾಧ್ಯತೆಯಿದೆ.

ಮತ್ತೊಂದು ಪ್ರಮುಖ ಬೆಳವಣಿಗೆಯಲ್ಲಿ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಪುನರಾಗಮನ ಮಾಡಿದ್ದಾರೆ. ಆದರೆ, ಸರಣಿಯಲ್ಲಿ ಅವರು ಆಡುವುದು ಅವರ ಫಿಟ್ನೆಸ್ ಮೇಲೆ ನಿಂತಿದೆ.
ಇನ್ನು ನಿರೀಕ್ಷೆಯಂತೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಮತ್ತು ನ್ಯೂಜಿಲೆಂಡ್ ವಿರುದ್ಧ ವೈಟ್ಬಾಲ್ ಸರಣಿಯ ಯಾವುದೇ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ರೋಹಿತ್ ಶರ್ಮಾ ನಾಯಕರಾಗಿದ್ದು, ಕೆಎಲ್ ರಾಹುಲ್ ಉಪನಾಯಕರಾಗಿದ್ದಾರೆ. ಹಿರಿಯ ಆಟಗಾರ ವಿರಾಟ್ ಕೊಹ್ಲಿ ಎಂದಿನಂತೆ ಸ್ಥಾನ ಪಡೆದಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಆಡುವ ತಂಡಗಳನ್ನು ನಿರ್ಧರಿಸುವ 4 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ.
ಆಸ್ಟ್ರೇಲಿಯಾ, ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ತ್ರಿಕೋನ ಹೋರಾಟ ನಡೆಸುತ್ತಿವೆ. ತವರಿನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದ ನಂತರ ಆಸ್ಟ್ರೇಲಿಯವು ಫೈನಲ್ಗೆ ನೇರ ಅವಕಾಶವನ್ನು ಪಡೆದಿದೆ. ಆದರೆ ಭಾರತದ ಫೈನಲ್ ಅವಕಾಶ ಇನ್ನೂ ತೂಗುವುಯ್ಯಾಲೆಯಲ್ಲಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ 2 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.