ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ನವೆಂಬರ್ 22 ರಿಂದ ಪ್ರಾರಂಭವಾಗಲಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಪರ್ತ್ನಲ್ಲಿ ನಡೆಯಲಿದೆ. ಪರ್ತ್ ಟೆಸ್ಟ್ ಪಂದ್ಯದಿಂದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ದೂರು ಉಳಿಯುವ ಸಾಧ್ಯತೆಯಿದೆ. ಜೊತೆಗೆ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ಲೇಯಿಂಗ್-11 ಹೇಗಿರಲಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಟಾಪ್ ಆರ್ಡರ್ ಬ್ಯಾಟರ್ಗಳು ಫಾರ್ಮ್ ಸಮಸ್ಯೆ ಎದುರಿಸುತ್ತಿರುವುದು ಟೀಮ್ ಇಂಡಿಯಾಕ್ಕೆ ದೊಡ್ಡ ತಲೆ ನೋವಾಗಿದೆ.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೂ ಮುನ್ನ 23 ವರ್ಷದ ಬ್ಯಾಟರ್ ಭಾರತ ತಂಡದ ಆಡುವ ಅವಕಾಶಕ್ಕಾಗಿ ಪೈಪೋಟಿ ನಡೆಸಲು ಮುಂದಾಗಿದ್ದಾರೆ. ಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಈ ಯುವ ಬ್ಯಾಟರ್ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಈ ಪ್ರದರ್ಶನದಿಂದಾಗಿ ಸರ್ಫರಾಜ್ ಖಾನ್ ಸ್ಥಾನಕ್ಕೆ ಕುತ್ತು ಬಂದಿದೆ. ಈ ಬ್ಯಾಟರ್ ಬೇರೆ ಯಾರು ಅಲ್ಲ, ಸ್ಟಾರ್ ವಿಕೆಟ್ಕೀಪರ್ ಮತ್ತು ಬ್ಯಾಟರ್ ಧ್ರುವ್ ಜುರೆಲ್.

ಧ್ರುವ ಜುರೆಲ್ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಭಾರತ ತಂಡದ ಭಾಗವಾಗಿದ್ದಾರೆ. ಆಸ್ಟ್ರೇಲಿಯಾ ಎ ವಿರುದ್ಧ ಭಾರತ ಎ ಪರ ಆಡುತ್ತಿರುವ ಜುರೆಲ್ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 80 ರನ್ಗಳ ಹೋರಾಟದ ಇನ್ನಿಂಗ್ಸ್ ಆಡಿದ್ದಾರೆ. ಭಾರತ ಮೊದಲ ಇನ್ನಿಂಗ್ಸ್ನಲ್ಲಿ 11 ರನ್ 4 ವಿಕೆಟ್ ಕಳೆದುಕೊಂಡು ಸಂಕಷ್ಟ ಪರಿಸ್ಥಿತಿಯಲ್ಲಿತ್ತು. ಈ ವೇಳೆ ಕ್ರೀಸ್ಗೆ ಕಚ್ಚಿ ನಿಂತ ಜುರೆಲ್ 186 ಎಸೆತಗಳನ್ನು ಎದುರಿಸಿ 6 ಬೌಂಡರಿ ಮತ್ತು 2 ಸಿಕ್ಸರ್ಗಳ ನೆರವಿನಿಂದ 80 ರನ್ಗಳನ್ನು ಬಾರಿಸಿದ್ದಾರೆ. ಅವರ ಬ್ಯಾಟಿಂಗ್ ನಿಂದಾಗಿ ಮಧ್ಯಮ ಕ್ರಮಾಂಕದಲ್ಲಿ ಫಾರ್ಮ್ ಕಳೆದುಕೊಂಡಿರುವ ಸರ್ಫರಾಜ್ ಖಾನ್ ಸ್ಥಾನ ಅಪಾಯದಲ್ಲಿದೆ.
ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರು ಪರ್ತ್ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ಗೆ ಧ್ರುವ್ ಜುರೆಲ್ ಅವರನ್ನು ಆಯ್ಕೆ ಮಾಡುವಂತೆ ಹೇಳಿದ್ದಾರೆ. ಪರ್ತ್ ಟೆಸ್ಟ್ನಲ್ಲಿ ರಿಷಬ್ ಪಂತ್ ನಂತರ ಜುರೆಲ್ ಸರ್ಫರಾಜ್ ಮತ್ತು ರಾಹುಲ್ ಅವರನ್ನು ಹಿಂದಿಕ್ಕಿ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯವಿದೆ ಎಂದು ಚೋಪ್ರಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಭಾರತ ತಂಡ ಟೆಸ್ಟ್ ಸರಣಿ ಸೋಲು ಅನುಭವಿಸಿದೆ. ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಸರ್ಫರಾಜ್ ಖಾನ್ ಚೊಚ್ಚಲ ಅಂತಾರಾಷ್ಟ್ರೀಯ ಶತಕ ಸಿಡಿಸಿದರು. ಇದಾದ ನಂತರ ಅವರಿಗೆ ಸತತ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಅವಕಾಶವನ್ನು ನೀಡಲಾಯಿತು. ಆದರೆ, ಅವರು ನಾಲ್ಕು ಇನ್ನಿಂಗ್ಸ್ಗಳಲ್ಲಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಲಿಲ್ಲ. ಇಂತಹ ಪರಿಸ್ಥತಿಯಲ್ಲಿ ಧ್ರುಬ್ ಜುರೆಲ್ ಕಾಂಗೂರು ನೆಲೆದಲ್ಲಿ ಅಬ್ಬರಿಸಿರುವುದು, ಸರ್ಫರಾಜ್ ಖಾನ್ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತೆ ಮಾಡಿದೆ.